ಅಕ್ರಮ ಗೋ ಸಾಗಾಟ: ಮೂವರು ಆರೋಪಿಗಳ ಬಂಧನ
ಉಡುಪಿ, ಮೇ 8: ಲಾಕ್ ಡೌನ್ ನಡುವೆಯೂ ಉಡುಪಿ ಜಿಲ್ಲೆಯಲ್ಲಿ ಅಕ್ರಮ ಗೋಮಾಂಸ ವಹಿವಾಟು ಎಗ್ಗಿಲ್ಲದೇ ನಡೆಯುತ್ತಿದೆ. ಉಡುಪಿ ಜಿಲ್ಲೆಯ ಶಿರ್ವ ಠಾಣಾ ವ್ಯಾಪ್ತಿಯ ಅಕ್ರಮ ಗೋಮಾಂಸ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಶಿರ್ವ ಸಮೀಪದ ಕಳತ್ತೂರಿನ ಪಾಳುಬಿದ್ದ ಮನೆಯಲ್ಲಿ ಗೋವು ಕಡಿದು ಮಾಂಸ ಪ್ಯಾಕಿಂಗ್ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಗೋಮಾಂಸ ಮಾರಾಟಕ್ಕೆ ತಯಾರಿ ನಡೆಸುವ ಸಂದರ್ಭದಲ್ಲಿ ಪೊಲೀಸರು ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ದಸ್ತಗಿರಿ ಮಾಡಿದರು.
ಇದೀಗ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ. ಉಳಿದ ಇಬ್ಬರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸೂಚನೆ ಮೇರೆಗೆ ಶಿರ್ವ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಈ ಕಾರ್ಯಾಚರಣೆ ಮಾಡಿದ್ದಾರೆ.
ದನ ಕಡಿಯಲು ಉಪಯೋಗಿಸುತ್ತಿದ್ದ ಆಯುಧಗಳು, ತಕ್ಕಡಿ, ಮಾಂಸದ ಪ್ಯಾಕೆಟ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಒಂದು ಗೋವನ್ನು ರಕ್ಷಿಸಲಾಗಿದೆ. ಶಿರ್ವ ಠಾಣಾಧಿಕಾರಿ ಗೋವಿಗೆ ನೀರು ಕುಡಿಸಿ, ಅದನ್ನು ಗೋಶಾಲೆಗೆ ಬಿಡುವ ವ್ಯವಸ್ಥೆ ಮಾಡಿದ್ದಾರೆ.