ಉಡುಪಿ; ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ ಸೆ.5ಕ್ಕೆ ಉದ್ಘಾಟನೆ
ಉಡುಪಿ, ಆಗಸ್ಟ್ 31; ಕರ್ನಾಟಕದ ಕರಾವಳಿ ಭಾಗದಲ್ಲಿ ಸೇನೆ ಸೇರಲು ಬಯಸುತ್ತಿರುವ ಯುವಕ, ಯುವತಿಯರಿಗೆ ಸಿಹಿಸುದ್ದಿ. ಉಡುಪಿ ಜಿಲ್ಲೆಯಲ್ಲಿ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ ಸೆಪ್ಟೆಂಬರ್ 5ರಂದು ಉದ್ಘಾಟನೆಯಾಗುತ್ತಿದೆ.
ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಂಟಿಯಾಗಿ ಅಗ್ನಿಪಥ್ ಯೋಜನೆಗೆ ಪೂರಕವಾಗಿ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ ಆರಂಭಿಸಲಾಗುತ್ತಿದೆ.
ಈ ಶಾಲೆಗೆ 'ಕೋಟಿ ಚೆನ್ನಯ್ಯ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ' ಎಂದು ನಾಮಕರಣ ಮಾಡಲಾಗಿದೆ. ಶಾಲೆ ಉದ್ಘಾಟನಾ ಸಮಾರಂಭ ಹಾಗೂ ಅರ್ಹತಾ ಪತ್ರ ವಿತರಣೆ ಕಾರ್ಯಕ್ರಮವು ಸೆಪ್ಟಂಬರ್ 5 ರಂದು ಉಡುಪಿಯ ಕಿದಿಯೂರು ಹೋಟೆಲ್ ಶೇಷಶಯನ ಹಾಲ್ನಲ್ಲಿ ನಡೆಯಲಿದೆ.

ಈ ಕಾರ್ಯಕ್ರಮವನ್ನು ಕೇಂದ್ರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ ಚಂದ್ರಶೇಖರ್ ಉದ್ಘಾಟಿಸಲಿದ್ದಾರೆ. ಉಡುಪಿ ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ, ಸಂಸದೆ ಶೋಭಾ ಕರಂದ್ಲಾಜೆ. ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಪಾಲ್ಗೊಳ್ಳಲಿದ್ದಾರೆ.
ಈ ಶಾಲೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಕನಸು. ಇಲಾಖೆ ಮೂಲಕವೇ ಈ ಯೋಜನೆ ಜಾರಿಗೊಳಿಸಲಾಗುತ್ತಿದೆ. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಸಹ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

3 ಜಿಲ್ಲೆಗಳಲ್ಲಿ ಶಾಲೆ ಸ್ಥಾಪನೆ; ಕರ್ನಾಟಕ ಸರ್ಕಾರ ಕರಾವಳಿ ಭಾಗದ ಮೂರು ಜಿಲ್ಲೆಗಳಲ್ಲಿ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ ಆರಂಭಿಸುತ್ತಿದೆ. ಸೇನೆಗೆ ಸೇರುವ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಉಚಿತವಾಗಿ ಶಾಲೆಯಲ್ಲಿ ತರಬೇತಿ ನೀಡಲಾಗುತ್ತಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈ ಶಾಲೆಗಳು ಆರಂಭವಾಗಲಿವೆ. ಉಡುಪಿ ಜಿಲ್ಲೆಯ ಶಾಲೆಗೆ 'ಕೋಟಿ ಚೆನ್ನಯ್ಯ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ' ಎಂದು ನಾಮಕರಣ ಮಾಡಲಾಗಿದೆ. ಇಂತಹ ಮಾದರಿ ಶಾಲೆ ಆರಂಭಿಸುವ ಕುರಿತು ಸರ್ಕಾರ ಜೂನ್ 20ರಂದು ಆದೇಶ ಹೊರಡಿಸಿತ್ತು.
ಈ ಶಾಲೆಯಲ್ಲಿ ತರಬೇತಿ ಪಡೆಯುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳ ತರಬೇತಿ ವೆಚ್ಚವನ್ನು ಇಲಾಖೆಯಿಂದ ಹಾಗೂ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ತರಬೇತಿ ವೆಚ್ಚವನ್ನು ಸಮಾಜ ಕಲ್ಯಾಣ ಇಲಾಖೆ ಭರಿಸಲಿದೆ. ವಾರ್ಷಿಕ 67.50 ಲಕ್ಷ ವೆಚ್ಚವಾಗಲಿದೆ.
ಇದೇ ಮಾದರಿಯ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ ವೀರರಾಣಿ ಅಬ್ಬಕ್ಕ ಹೆಸರಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತು ಉತ್ತರ ಕನ್ನಡದ ಕಾರವಾರದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಹೆಂಜಾ ನಾಯಕ ಹೆಸರಿನಲ್ಲಿ ಆರಂಭವಾಗಲಿದೆ.
ಈ ಶಾಲೆಗಳ ಪರಿಕಲ್ಪನೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರದ್ದಾಗಿದೆ. ಸೇನೆಗೆ ಸೇರುವ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಸೂಕ್ತ ತರಬೇತಿ ನೀಡುವುದು ಅಗ್ನಿಪಥ್ ಯೋಜನೆ ಅನ್ವಯ ಅವರು ಸೇನೆ ಸೇರುವಂತೆ ತರಬೇತಿಗೊಳಿಸುವುದು ಶಾಲೆಗಳ ನಿರ್ಮಾಣದ ಉದ್ದೇಶ.
ಈ ಶಾಲೆಗಳಲ್ಲಿ ದಾಖಲಾಗುವ ಅಭ್ಯರ್ಥಿಗಳಿಗೆ ಸುಮಾರು 4 ತಿಂಗಳ ಕಾಲ ಉಚಿತವಾಗಿ, ವಸತಿ ಸಹಿತ ತರಬೇತಿ ನೀಡಲಾಗುತ್ತದೆ. ಒಂದು ಶಾಲೆಯಲ್ಲಿ ಮೊದಲ ಹಂತದಲ್ಲಿ 100 ಅಭ್ಯರ್ಥಿಗಳಿಗೆ ಪ್ರವೇಶ ನೀಡುವ ಪ್ರಸ್ತಾವನೆ ಇದೆ.












Click it and Unblock the Notifications