ಉಡುಪಿಯಲ್ಲಿ ದಾಖಲೆ ಮಳೆ: ಬಜೆ ಅಣೆಕಟ್ಟು ಸಂಪೂರ್ಣ ಮುಳುಗಡೆ
ಉಡುಪಿ, ಜುಲೈ.08: ಜಿಲ್ಲೆಯಾದ್ಯಂತ ಮತ್ತೆ ಭಾರೀ ಮಳೆ ಮುಂದುವರಿದಿದ್ದು, ತಗ್ಗು ಪ್ರದೇಶಗಳಿಗೆ ನೆರೆ ನೀರು ಆವರಿಸಿದೆ. ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪುವಿನಲ್ಲಿ ಮನೆಯೊಂದಕ್ಕೆ ನೀರು ನುಗ್ಗಿದ್ದು, ಮನೆಯಲ್ಲಿದ್ದ ಗರ್ಭಿಣಿಯ ರಕ್ಷಣೆ ಮಾಡಲಾಗಿದೆ.
ಬಾಡಿಗೆ ಮನೆಯಲ್ಲಿ ಈ ಕುಟುಂಬ ವಾಸ್ತವ್ಯವಿದ್ದು, ಮನೆ ಸುತ್ತಲೂ ನೀರು ಆವರಿಸಿದೆ. ಅಗ್ನಿಶಾಮಕದಳ, ಸ್ಥಳೀಯ ಪೋಲಿಸರಿಂದ ಕುಟುಂಬವನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಜಿಲ್ಲೆಯಲ್ಲಿ 2 ದಿನದಿಂದ ಮಳೆಯ ಅಬ್ಬರ ಹೆಚ್ಚಾಗಿದ್ದು, ಸ್ವರ್ಣಾ ನದಿ ಉಕ್ಕಿ ಹರಿಯುತ್ತಿದೆ. ಕಾರ್ಕಳ, ಉಡುಪಿಯಲ್ಲಿ ಸುರಿದ ಭಾರೀ ಮಳೆ ಪರಿಣಾಮ ಬಜೆ ಅಣೆಕಟ್ಟು ಸಂಪೂರ್ಣ ಮುಳುಗಡೆಯಾಗಿದ್ದು, ಅಣೆಕಟ್ಟು ಮೇಲಿನಿಂದ ನೀರು ತುಂಬಿ ಹರಿಯುತ್ತಿದೆ.

ಉಡುಪಿಯಲ್ಲಿ ಮೊದಲ ದಿನ 162 ಮಿ.ಮೀ. ಮಳೆ ದಾಖಲಾಗಿದ್ದು, ಇತ್ತೀಚಿನ ವರ್ಷದಲ್ಲೇ ಇಲ್ಲಿ ದಾಖಲೆ ಮಳೆಯಾಗಿದೆ. ರಾತ್ರಿಯಿಂದ ಮಳೆ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ.
ಕೊಳ ಮತ್ತು ಕೊಡಂಕೂರುನಲ್ಲಿ 70ಕ್ಕೂ ಹೆಚ್ಚು ಜನರನ್ನು ಶನಿವಾರ ಬೋಟ್ ಮೂಲಕ ಸ್ಥಳಾಂತರಿಸಿ, ಸುರಕ್ಷಿತ ಪ್ರದೇಶಕ್ಕೆ ಕರೆದೊಯ್ಯಲಾಗಿತ್ತು.
ಪಡುಬಿದ್ರಿ ರಾಷ್ಟ್ರೀಯ ಹೆದ್ದಾರಿಯಲ್ಲೂ ನೆರೆ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಮುಂದಿನ 48 ಗಂಟೆಗಳ ಕಾಲ ಉಡುಪಿ ಸೇರಿದಂತೆ ಕರ್ನಾಟಕದ ಕರಾವಳಿಯುದ್ದಕ್ಕೂ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಮೀನುಗಾರರು ಯಾವುದೇ ಕಾರಣಕ್ಕೂ ಮೀನುಗಾರಿಕೆಯ ಸಾಹಸಕ್ಕೆ ಕೈಹಾಕದಂತೆಯೂ ಎಚ್ಚರಿಕೆ ನೀಡಲಾಗಿದೆ.












Click it and Unblock the Notifications