ಭಾಸ್ಕರ ಶೆಟ್ಟಿ ಹತ್ಯೆ : ನಿರಂಜನ್ ಭಟ್ ಜಾಮೀನು ಅರ್ಜಿ ಸುಪ್ರೀಂನಲ್ಲಿ ವಜಾ
ಉಡುಪಿ, ಸೆಪ್ಟೆಂಬರ್ 19 : ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಜ್ಯೋತಿಷಿ ನಿರಂಜನ್ ಭಟ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. 2016ರ ಜುಲೈನಲ್ಲಿ ಭಾಸ್ಕರ್ ಶೆಟ್ಟಿಯನ್ನು ಹತ್ಯೆ ಮಾಡಲಾಗಿತ್ತು.
ಈ ಪ್ರಕರಣದಲ್ಲಿ36 ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡ ಬಳಿಕ ಜಾಮೀನು ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಏಪ್ರಿಲ್ 23ರಂದು ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು.
ಸುಪ್ರೀಂಕೋರ್ಟ್ ಜುಲೈನಲ್ಲಿ ಉಡುಪಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಸಾಕ್ಷಿಗಳ ವಿಚಾರಣೆ ಆರಂಭಿಸುವಂತೆ ಸೂಚಿಸಿತ್ತು. 6 ತಿಂಗಳಲ್ಲಿ ಸಾಕ್ಷಿಗಳ ವಿಚಾರಣೆ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿತ್ತು.

ಸಿಐಡಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು 816, ನಂತರ 101 ಪುಟಗಳ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಜ್ಯೋತಿಷಿ ನಿರಂಜನ್ ಭಟ್ ಈ ಪ್ರಕರಣದಲ್ಲಿ 3ನೇ ಆರೋಪಿಯಾಗಿದ್ದಾರೆ.
ಭಾಸ್ಕರ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ ಪ್ರಕರಣದ ಮೊದಲನೇ ಮತ್ತು 2ನೇ ಆರೋಪಿಗಳಾಗಿದ್ದಾರೆ. ಮೊದಲು ಸ್ಥಳೀಯ ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದರು. ಬಳಿಕ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ.
2016ರ ಜುಲೈ 28ರಂದು ಭಾಸ್ಕರ ಶೆಟ್ಟಿ ಅವರು ಉಡುಪಿಯ ನಿವಾಸದಿಂದ ನಾಪತ್ತೆಯಾಗಿದ್ದರು. 2016ರ ಆಗಸ್ಟ್ 6ರಂದು ಅವರನ್ನು ಹತ್ಯೆ ಮಾಡಿರುವ ಮಾಹಿತಿ ಬಹಿರಂಗವಾಗಿತ್ತು. ಭಾಸ್ಕರ್ ಶೆಟ್ಟಿ ಅವರನ್ನು ಹತ್ಯೆ ಮಾಡಿ ಜ್ಯೋತಿಷಿ ನಿರಂಜನ್ ಭಟ್ ಸಹಾಯದಿಂದ ಹೋಮ ಕುಂಡದಲ್ಲಿ ಶವವನ್ನು ಸುಡಲಾಗಿದೆ ಎಂಬುದು ಆರೋಪವಾಗಿದೆ.












Click it and Unblock the Notifications