ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ಉಡುಪಿ, ಅಕ್ಟೋಬರ್ 12: ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಜ್ಯೋತಿಷಿ ನಿರಂಜನ್ ಭಟ್ ಸಲ್ಲಿಸಿದ್ದ ಜಾಮೀನು ಅರ್ಜಿಯ ಸಂಬಂಧ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟೀಸ್ ನೀಡಿದೆ.
ಜ್ಯೋತಿಷಿ ನಿರಂಜನ್ ಭಟ್ ಅವರು ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿಯೊಂದಿಗೆ ಸೇರಿ ಭಾಸ್ಕರ್ ಶೆಟ್ಟಿ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು. ಅಲ್ಲದೇ, ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಆರೋಪಿಸಲಾಗಿದೆ. 2016 ಜುಲೈ 28 ರಂದು ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ನಡೆದಿದ್ದು, ಅವರ ತಲೆಗೆ ಬಲವಾಗಿ ರಾಡ್ ನಿಂದ ಹೊಡೆದು, ಶವವನ್ನು ಹೋಮಕುಂಡದಲ್ಲಿ ಸುಡಲಾಗಿತ್ತು.
ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ; ನಿರಂಜನ್ ಭಟ್ ಗೆ ಮಧ್ಯಂತರ ಜಾಮೀನು
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎಸ್.ಎಸ್ ಬೋಪಣ್ಣ ಮತ್ತು ವಿ.ರಾಮಸುಬ್ರಮಣ್ಯಂ ಅವರನ್ನೊಳಗೊಂಡ ಪೀಠವು ಅರ್ಜಿಯ ಕುರಿತು ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರವನ್ನು ಕೋರಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.
ಅರ್ಜಿದಾರರಾದ ನಿರಂಜನ್ ಭಟ್ ಜುಲೈ 27 ರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದರು. 2019, ಮೇ 10 ರಂದು ಹೈಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಕೆಲವು ಸಾಕ್ಷ್ಯಾಧಾರಗಳು ಇನ್ನೂ ವಿಚಾರಣೆಗೆ ಒಳಪಡಿಸಲಾಗಿಲ್ಲ. ಇದರ ವಿಚಾರಣೆಗೆ ಆರು ತಿಂಗಳು ಬೇಕಾಗುತ್ತದೆ ಎಂದು ಹೈಕೋರ್ಟ್ ತಿಳಿಸಿತ್ತು.
ಕೆಲವು ಸಾಕ್ಷಿದಾರರನ್ನು ಆರೋಪಿಗಳ ಎದುರಲ್ಲೇ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆ ನಡೆಸಬೇಕು ಎಂದು ಹೈಕೋರ್ಟ್ ಹೇಳಿದೆ. ಭಾಸ್ಕರ್ ಶೆಟ್ಟಿ ಪತ್ನಿಗೆ ಜಾಮೀನು ನೀಡಲಾಗಿದೆ.
ಭಾಸ್ಕರ್ ಶೆಟ್ಟಿ ಅವರನ್ನು ಇಂದ್ರಾಳಿಯಲ್ಲಿರುವ ಅವರ ಮನೆಯಲ್ಲಿ ಹತ್ಯೆ ಮಾಡಲಾಗಿತ್ತು. ನಂತರ ಅವರ ಶವವನ್ನು ಹೋಮಕುಂಡದಲ್ಲಿ ಸುಟ್ಟುಹಾಕಲಾಯಿತು. ಈ ಹತ್ಯೆ ಪ್ರಕರಣವು ಕರಾವಳಿ ಭಾಗದಲ್ಲಿ ಸಂಚಲನ ಸೃಷ್ಟಿಸಿತ್ತು.
Recommended Video
ಭಾಸ್ಕರ್ ಅವರ ಪತ್ನಿ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ ಮತ್ತು ಜ್ಯೋತಿಷಿ ನಿರಂಜನ್ ಭಟ್ ಈ ಪ್ರಕರಣದ ಪ್ರಮುಖ ಆರೋಪಿಗಳು. ಸಾಕ್ಷಿ ನಾಶಪಡಿಸಿದ ಕಾರಣ ಬಂಧಿಸಲ್ಪಟ್ಟಿದ್ದ ನಿರಂಜನ್ ಭಟ್ ಅವರ ತಂದೆ ಶ್ರೀನಿವಾಸ್ ಭಟ್ ಹಾಗೂ ಚಾಲಕ ರಾಘವೇಂದ್ರ ಜಾಮೀನಿನ ಮೇಲೆ ಹೊರಬಂದಿದ್ದಾರೆ.