ಉಡುಪಿ; ಬೈಂದೂರು ಮಾಜಿ ಶಾಸಕ ಎ. ಜಿ. ಕೊಡ್ಗಿ ನಿಧನ

ಉಡುಪಿ, ಜೂನ್ 13; ಬೈಂದೂರು ಕ್ಷೇತ್ರದ ಮಾಜಿ ಶಾಸಕ ಹಾಗೂ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾಗಿದ್ದ ಎ. ಜಿ. ಕೊಡ್ಗಿ ವಿಧಿವಶರಾದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

93 ವರ್ಷದ ಎ. ಜಿ. ಕೊಡ್ಗಿ (ಅಮಾಸೆಬೈಲ್ ಗೋಪಾಲಕೃಷ್ಣ ಕೊಡ್ಗಿ) ಸೋಮವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು. ಕೆಲವು ದಿನಗಳ ಹಿಂದೆ ಅವರಿಗೆ ಜ್ವರ ಕಾಣಿಸಿಕೊಂಡಿತ್ತು, ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಬಹು ಅಂಗಾಗಳ ವೈಫಲ್ಯಕ್ಕೆ ಒಳಗಾಗಿದ್ದರು.

1993ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಎ. ಜಿ. ಕೊಡ್ಗಿ ಸಹಕಾರಿ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಕರಾವಳಿ ಭಾಗದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟುವಲ್ಲಿ ಎ. ಜಿ. ಕೊಡ್ಗಿ ಪಾತ್ರ ಪ್ರಮುಖವಾದದ್ದು.

Byndoor Former MLA AG Kodgi No More

ಕಾಂಗ್ರೆಸ್‌ ಪಕ್ಷದಲ್ಲಿದ್ದ ಎ. ಜಿ. ಕೊಡ್ಗಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಗೆಲುವು ಸಾಧಿಸಿದ್ದರು. ಬಿಜೆಪಿ ಸೇರಿದ ಬಳಿಕ ಪಕ್ಷದ ಹಿರಿಯ ನಾಯಕ ಎಲ್. ಕೆ. ಅಡ್ವಾಣಿ ಸೇರಿದಂತೆ ರಾಷ್ಟ್ರೀಯ ನಾಯಕರ ಜೊತೆ ನಿಕಟ ಸಂಪರ್ಕ ಹೊಂದಿದ್ದರು.

Byndoor Former MLA AG Kodgi No More

ಮಂಗಳವಾರ ಅಂತ್ಯಕ್ರಿಯೆ; ಎ. ಜಿ. ಕೊಡ್ಗಿ ಅಂತ್ಯಕ್ರಿಯೆ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಅಮಾಸೆಬೈಲ್‌ನಲ್ಲಿ ನಡೆಯಲಿದೆ. ಬೆಳಗ್ಗೆಯಿಂದಲೇ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ.

ರಾಜಕೀಯ ಹಿನ್ನಲೆ; ಸಹಕಾರಿ ಕ್ಷೇತ್ರದಲ್ಲಿಯೂ ಎ. ಜಿ. ಕೊಡ್ಗಿ ಸಕ್ರಿಯರಾಗಿದ್ದರು. ಮಂಗಳೂರು ಎಪಿಎಂಸಿ, ಶಂಕರ ನಾರಾಯಣ ಬ್ಯಾಂಕ್, ಕರ್ನಾಟಕ ಬ್ಯಾಂಕ್ ನಿರ್ದೇಶಕರಾಗಿಯೂ 1982-1990ರ ತನಕ ಕಾರ್ಯ ನಿರ್ವಹಣೆ ಮಾಡಿದ್ದರು.

ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ, ಕರ್ನಾಟಕ ಬಿಜೆಪಿ ಉಪಾಧ್ಯಕ್ಷರಾಗಿ, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿಯೂ ಕಾರ್ಯ ನಿರ್ವಹಣೆ ಮಾಡಿದ್ದರು.

ಸಕ್ರಿಯ ರಾಜಕಾರಣದಿಂದ ನಿವೃತ್ತರಾದ ಬಳಿಕ ಅಮಾಸೆಬೈಲ್‌ ಚಾರಿಟಬಲ್ ಟ್ರಸ್ಟ್‌ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. 'ಗ್ರಾಮೀಣಾಭಿವೃದ್ಧಿಯಲ್ಲಿ ಕೊಡ್ಗಿ ಚಿಂತನೆಗಳು' ಎಂಬ ಕೃತಿಯನ್ನು 2019ರಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೊರತಂದಿತ್ತು.

ಎ. ಜಿ. ಕೊಡ್ಗಿ ಪತ್ನಿ ಸುನಂದಾ, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಎ. ಕಿರಣಕುಮಾರ ಕೊಡ್ಗಿ, ಕ್ಯಾಂಪ್ಕೋ ಅಧ್ಯಕ್ಷ ಎ. ಕಿಶೋರ ಕುಮಾರ ಕೊಡ್ಗಿ ಸೇರಿದಂತೆ ಐವರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಬಸವರಾಜ ಬೊಮ್ಮಾಯಿ ಸಂತಾಪ; ಬಿಜೆಪಿ ಹಿರಿಯ ನಾಯಕ, ರಾಜ್ಯ ಮೂರನೇ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎ. ಜಿ. ಕೊಡ್ಗಿ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ತಾಲ್ಲೂಕು ಬೋರ್ಡ್ ಅಧ್ಯಕ್ಷರಾಗಿ ರಾಜಕೀಯ ಜೀವನ ಪ್ರಾರಂಭಿಸಿದ ಕೊಡ್ಗಿ ಅವರು ಬೈಂದೂರು ಶಾಸಕರಾಗಿ, ನಂತರ ಹಣಕಾಸು ಆಯೋಗದ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆ ಅನನ್ಯವಾದುದು. ಅವರ ರಾಜಕೀಯ ಜೀವನವೂ ಇತರರಿಗೆ ಮಾದರಿಯಾಗಿತ್ತು. ಪಕ್ಷದಲ್ಲಿ ಕರಾವಳಿ ಭಾಗದಲ್ಲಿ ಹಲವು ಯುವ ನಾಯಕರನ್ನು ಪ್ರೋತ್ಸಾಹಿಸಿ ಬೆಳೆಸಿದ ಶ್ರೇಯ ಇವರದು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.

ಅವರ ನಿಧನದಿಂದ ಒಬ್ಬ ಸರಳ, ಸಜ್ಜನ ಹಿರಿಯ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಕಟೀಲ್ ಸಂತಾಪ; ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹ ಸಂತಾಪ ಸೂಚಿಸಿದ್ದಾರೆ. ಭಾಜಪಾ ಹಿರಿಯ ಮುಖಂಡರೂ, ಮಾಜಿ ಶಾಸಕರೂ, ಮೂರನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಿದ್ದ ಶ್ರೀ ಎ. ಜಿ. ಕೊಡ್ಗಿ ಅವರ ಅಗಲುವಿಕೆ ತುಂಬಾ ಬೇಸರ ತಂದಿದೆ.

ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಕುಟುಂಬಕ್ಕೆ, ಹಿತೈಷಿಗಳಿಗೆ ದು:ಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+