ಉಡುಪಿ ಜಿಲ್ಲಾಡಳಿತಕ್ಕೆ ಕೇಂದ್ರದಿಂದ ಪ್ರಶಂಸೆ: ಡಿಸಿ ಜಗದೀಶ್
ಉಡುಪಿ, ಏಪ್ರಿಲ್ 14: ಕೊರನಾ ವೈರಸ್ ಗೆ ಕಡಿವಾಣ ಹಾಕಿರುವ ಉಡುಪಿ ಜಿಲ್ಲೆಗೆ ಕೇಂದ್ರ ಸರ್ಕಾರದಿಂದ ಪ್ರಶಂಸೆ ವ್ಯಕ್ತವಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ ತಿಳಿಸಿದ್ದಾರೆ.
ಕೊರೊನಾ ವೈರಸ್ ನಿಯಂತ್ರಣ ಕುರಿತಂತೆ, ಉಡುಪಿ ಜಿಲ್ಲೆಯ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳಿಂದ ಕಳೆದ 2 ವಾರಗಳಿಂದ ಯಾವುದೇ ಹೊಸ ಕೊರೊನಾ ವೈರಸ್ ಪ್ರಕರಣಗಳು ಕಂಡುಬಂದಿಲ್ಲ ಎಂದರು.
ಉಡುಪಿಯಲ್ಲಿ ಡಿಸ್ಚಾರ್ಜ್ ಆದ ಕೊರೊನಾ ಸೋಂಕಿತ ಕೊಟ್ಟ ಎಚ್ಚರಿಕೆ
ಉಡುಪಿ ಜಿಲ್ಲೆಯಲ್ಲಿ ಮಾರ್ಚ್ 29 ರಂದು ಕೊನೆಯ ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿದ್ದು, ನಂತರದ ದಿನಗಳಲ್ಲಿ ಜಿಲ್ಲಾಡಳಿತ ಕೈಗೊಂಡ ಸಮರ್ಥ ನಿರ್ಧಾರಗಳಿಂದ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ಹೊಸದಾಗಿ ಕಂಡು ಬಂದಿಲ್ಲ.
ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಕಂಡುಬಂದ ಕೂಡಲೇ, ಅವರೊಂದಿಗೆ ಸಂಪರ್ಕದಲ್ಲಿದ್ದವರನ್ನು ಗುರುತಿಸಿ, ಕ್ವಾರಂಟೈನ್ ಗೆ ಒಳಪಡಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡ ಕಾರಣ, ಸೋಂಕು ಹರಡುವುದನ್ನು ತಡೆಯುವಲ್ಲಿ ಜಿಲ್ಲಾಡಳಿತ ಯಶಸ್ವಿಯಾಗಿದೆ ಎಂದು ಕೇಂದ್ರ ಪ್ರಶಂಸಿದೆ ಎಂದು ತಿಳಿಸಿದರು.
ಅಲ್ಲದೇ ಜಿಲ್ಲೆಯ ಗಡಿಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಂಡಿದ್ದು, ಸರಕು ಸಾಗಾಣಿಕೆ ಮತ್ತು ತುರ್ತು ವೈದ್ಯಕೀಯ ಕಾರಣ ಹೊರತುಪಡಿಸಿ ಇತರೆ ಯಾವುದೇ ಉದ್ದೇಶಕ್ಕೆ ಜಿಲ್ಲೆಯೊಳಗೆ ಪ್ರವೇಶ ನೀಡಿಲ್ಲ, ಹೊರ ಜಿಲ್ಲೆಗಳಿಂದ ಸಹ ಸೋಂಕು ಹರಡುವುದನ್ನು ತಪ್ಪಿಸಲಾಗಿದೆ ಎಂದು ಹೇಳಿದರು.
ಉಡುಪಿಯಲ್ಲಿ ಕೊರೊನಾ ಮುಕ್ತಿಗೆ ನಿರಾಶ್ರಿತರಿಂದ ಪ್ರಾರ್ಥನೆ
ಉಡುಪಿ ಜಿಲ್ಲೆಯಲ್ಲಿ ದಿನನಿತ್ಯದ ವಸ್ತುಗಳ ಖರೀದಿಗೆ ಸಾರ್ವಜನಿಕರಿಗೆ ಸಮಯ ನಿಗಧಿಪಡಿಸಲಾಗಿದ್ದು, ಖರೀದಿ ಸಮಯದಲ್ಲಿ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು, ಅನಗತ್ಯ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ, ಜಿಲ್ಲೆಯಲ್ಲಿನ ಕಾರ್ಮಿಕರಿಗೆ, ನಿರಾಶ್ರಿತರಿಗೆ ಮತ್ತು ನಿರ್ಗತಿಕರಿಗೆ ಊಟದ ವ್ಯವಸ್ಥೆ ಕಲ್ಪಿಸಿದ್ದು ಅವರಿಗೆ ಯಾವುದೇ ಕೊರತೆಯಾಗದಂತೆ ವ್ಯವಸ್ಥೆ ಮಾಡಿದ್ದು ಈ ಸಾಧನೆಗೆ ಕಾರಣವಾಗಿದೆ ಎಂದು ಡಿಸಿ ಹೇಳಿದ್ದಾರೆ.
ಹೊರ ಜಿಲ್ಲೆಗಳ ಪಾಸುಗಳಿದ್ದರೂ ಉಡುಪಿಗೆ ಜನರು ಬರುವಂತಿಲ್ಲ
ಲಾಕ್ ಡೌನ್ ಅವಧಿ ಮುಗಿಯುವವರೆಗೂ ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸುವ ಮೂಲಕ, ಉಡುಪಿ ಜಿಲ್ಲೆ ಕೊರೊನಾ ವೈರಸ್ ಮುಕ್ತವಾಗಲು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ ಮನವಿ ಮಾಡಿದ್ದಾರೆ.