ಉಡುಪಿ-ಚಿಕ್ಕಮಗಳೂರು:ಕೈ-ಕಮಲವನ್ನು ಕಂಗೆಡಿಸಿದ ನೋಟಾ ಅಭಿಯಾನ
ಉಡುಪಿ, ಏಪ್ರಿಲ್ 03:ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ಹೆಚ್ಚಾಗುತ್ತಿದೆ. ಆರೋಪ, ಪ್ರತ್ಯಾರೋಪ, ಮುಖಂಡರುಗಳ ನಡುವೆ ವಾಕ್ಸಮರ ತಾರಕಕ್ಕೇರಿದೆ.ಕೆಲ ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳು ಬಂಡಾಯದ ಬಿಸಿ ಅನುಭವಿಸುತ್ತಿವೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಈ ಹಿನ್ನೆಲೆಯಲ್ಲಿ ಜನರಿಗೆ ನೋಟಾ ಮತಕ್ಕಾಗಿ ಒತ್ತಾಯಿಸುವ ಪ್ರಸಂಗಗಳು ಬೆಳಕಿಗೆ ಬರುತ್ತಿವೆ. ಉಡುಪಿ - ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅವರು ಜೆಡಿಎಸ್ ನಿಂದ ಚುನಾವಣೆಗೆ ಸ್ಪರ್ಧೆ ಮಾಡುತ್ತಿರುವುದಕ್ಕೆ ಕಾಂಗ್ರೆಸ್ಸಿನಲ್ಲೇ ಭಾರೀ ವಿರೋಧ ವ್ಯಕ್ತವಾಗಿದೆ.
ಈ ಹಿನ್ನೆಲೆಯಲ್ಲಿ ಕೆಲ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ಮತದಾರರಿಗೆ ನೋಟಾ ಒತ್ತುವಂತೆ ಪ್ರಚಾರ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಈ ನೋಟಾ ಅಭಿಯಾನ ಕೇವಲ ಕಾಂಗ್ರೆಸ್ ಗೆ ಮಾತ್ರವಲ್ಲದೇ ಬಿಜೆಪಿಗೂ ತಲೆ ನೋವಾಗಿದೆ.

ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸಂಸದೆ ಶೋಭಾ ಕರಂದ್ಲಾಜೆ ಅವರು ಕಣಕ್ಕಿಳಿದಿರುವುದು ಕೆಲ ಬಿಜೆಪಿ ಬಂಡಾಯ ಮುಖಂಡರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ಕಾರ್ಯಕರ್ತರ ಭಾರೀ ವಿರೋಧದ ನಡುವೆಯೂ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಿದ್ದನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ವ್ಯಕ್ತಿಗಳು ನೋಟಾ ಒತ್ತುವಂತೆ ಪ್ರಚಾರ ಮಾಡುತ್ತಿರುವ ಪ್ರಸಂಗ ಗಳು ಕೇಳಿಬರುತ್ತಿವೆ.
ಈ ಬಗ್ಗೆ ಹಲವಾರು ದೂರುಗಳು ಬಂದ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ನೋಟಾಕ್ಕೆ ಮತ ಹಾಕುವಂತೆ ಪ್ರಭಾವ ಬೀರುವುದು ಅಪರಾಧ ಎಂದು ಉಡುಪಿ ಜಿಲ್ಲಾಧಿಕಾರಿ ಘೋಷಿಸಿದ್ದಾರೆ.
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಪಕ್ಷ ಅಥವಾ ವ್ಯಕ್ತಿ ವಿರುದ್ಧ ನೋಟಾ ಅಭಿಯಾನ ಮಾಡಿದರೆ ಅವರ ಮೇಲೆ ಕೇಸ್ ದಾಖಲಾಗುವುದೆಂದು ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಾಪಾಟಿ ಎಚ್ಚರಿಸಿದ್ದಾರೆ.
ಈ ಬಗ್ಗೆ ಸ್ಪಷ್ಟ ಪಡಿಸಿರುವ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ, ನೋಟಾ ಬಗ್ಗೆ ಮಾಹಿತಿ ನೀಡುವುದು ತಪ್ಪಲ್ಲ. ಆದರೆ ನೋಟಾ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಕೊಡುವಂತಿಲ್ಲ. ಚುನಾವಣೆ ಸಂದರ್ಭದಲ್ಲಿ ಜನರಿಗೆ ನೋಟಾ ಒಂದು ಆಯ್ಕೆ ಮಾತ್ರ. ಇದು ದೇಶದ ಮತದಾರರ ವೈಯಕ್ತಿಕ ಹಕ್ಕು. ಹೀಗಾಗಿ ನೋಟಾಕ್ಕೆ ಮತಹಾಕಿ ಎಂದು ಪ್ರಚಾರ ಮಾಡುವುದು ಕಾನೂನು ಬಾಹಿರ ಮತ್ತು ಅಪರಾಧ ಎಂದು ಸ್ಪಷ್ಟಪಡಿಸಿದ್ದಾರೆ.












Click it and Unblock the Notifications