ಉಡುಪಿ ಡಿಸಿ ಗ್ರಾಮ ವಾಸ್ತವ್ಯ: ವಿದ್ಯಾರ್ಥಿಗಳ ಜೊತೆ ಸಂವಾದ, ಗ್ರಾಮಸ್ಥರ ಅಹವಾಲು ಸ್ವೀಕಾರ
ಉಡುಪಿ, ಜನವರಿ 30: ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಶನಿವಾರ ಗ್ರಾಮ ವಾಸ್ತವ್ಯ ಮಾಡುವ ಮೂಲಕ ರಾಜ್ಯ ಸರಕಾರದ ಯೋಜನೆಯಾದ "ಜಿಲ್ಲಾಧಿಕಾರಿ ನಡೆ ಗ್ರಾಮದ ಕಡೆ' ಯೋಜನೆಗೆ ಚಾಲನೆ ನೀಡಿದರು.
ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿರುವ ಈ ಯೋಜನೆಯ ಅಂಗವಾಗಿ ಜಿಲ್ಲಾಧಿಕಾರಿಗಳು ಶನಿವಾರ ಬೆಳಿಗ್ಗೆ ಬ್ರಹ್ಮಾವರ ತಾಲೂಕಿನ 15 ನಾಲ್ಕೂರು ಗ್ರಾಮಕ್ಕೆ ಭೇಟಿ ನೀಡಿದಾಗ, ಸ್ಥಳೀಯರು ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು.
ಉಡುಪಿಯಲ್ಲಿಯೇ ಮೊದಲು; ಜಿಲ್ಲಾಧಿಕಾರಿಗಳಿಂದ ಗ್ರಾಮ ವಾಸ್ತವ್ಯ
ಗ್ರಾಮ ವಾಸ್ತವ್ಯದ ಭಾಗವಾಗಿ ಮೊದಲು ಸ್ಥಳೀಯ ನಾಲ್ಕೂರು ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. ವಿದ್ಯಾರ್ಥಿಗಳಿಗೆ ಸ್ಪೂರ್ತಿ ತುಂಬುವ ಪಾಠ ಮಾಡಿದರು. ವಿದ್ಯಾರ್ಥಿಗಳ ಸಾಮಾನ್ಯ ಜ್ಞಾನ ಕುರಿತು ಪ್ರಶ್ನೋತ್ತರ ನಡೆಸಿದರು.
ಗ್ರಾಮದ ಸಭಾಂಗಣಕ್ಕೆ ಆಗಮಿಸಿ ಅಲ್ಲಿ ಸ್ಥಳೀಯರ ಕುಂದು ಕೊರತೆ ಆಲಿಸಿದರು. ಎಡಿಸಿ ಸದಾಶಿವ ಪ್ರಭು, ಕುಂದಾಪುರ ಎಸಿ ರಾಜು, ಬ್ರಹ್ಮಾವರ ತಹಸೀಲ್ದಾರ್ ಕಿರಣ್ ಗೋರಯ್ಯ ಸಹಿತ ಅಧಿಕಾರಿಗಳು ಡಿಸಿಗೆ ಸಾಥ್ ನೀಡಿದರು.
ಗ್ರಾಮದ ಕುಂದು ಕೊರತೆ ಸಭೆಯಲ್ಲಿ ನೂರಾರು ಗ್ರಾಮಸ್ಥರು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ವಿವಿಧ ಇಲಾಖೆಗಳ ಅಧಿಕಾರಿಗಳು ಈ ಸಂದರ್ಭ ಹಾಜರಿದ್ದರು. ಅಂದಹಾಗೆ ಜಿಲ್ಲಾಧಿಕಾರಿ ನಡೆ ಗ್ರಾಮದ ಕಡೆ ಯೋಜನೆಗೆ ರಾಜ್ಯದಲ್ಲೇ ಉಡುಪಿ ಜಿಲ್ಲೆಯಲ್ಲಿ ಮೊದಲು ಚಾಲನೆ ಸಿಕ್ಕಿದಂತಾಗಿದೆ.