ಉಡುಪಿಯಲ್ಲಿಯೇ ಮೊದಲು; ಜಿಲ್ಲಾಧಿಕಾರಿಗಳಿಂದ ಗ್ರಾಮ ವಾಸ್ತವ್ಯ
ಉಡುಪಿ, ಜನವರಿ 27; ಬ್ರಹ್ಮಾವರ ತಾಲೂಕಿನ ನೆಂಚೂರು ಮತ್ತು ನಾಲ್ಕೂರು ಗ್ರಾಮಗಳಿಗೆ ಜಿಲ್ಲಾಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು ಭೇಟಿ ನೀಡಿ, ವಾಸ್ತವ್ಯ ಮಾಡಿ, ಗ್ರಾಮಗಳಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಲಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, 'ಇಡೀ ರಾಜ್ಯದಲ್ಲಿ ಇದು ಪ್ರಥಮ ಪ್ರಾಯೋಗಿಕ ಕಾರ್ಯಕ್ರಮವಾಗಿದೆ. ಜನವರಿ 30ರಂದು ಉಡುಪಿ ಜಿಲ್ಲೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ" ಎಂದರು.
ಗ್ರಾಮ ವಾಸ್ತವ್ಯ ನಡೆಯುವ ನೆಂಚೂರು ಮತ್ತು ನಾಲ್ಕೂರು ಗ್ರಾಮಗಳ ಸಾರ್ವಜನಿಕರ ಕುಂದು ಕೊರತೆಗಳ ಕುರಿತಂತೆ ಸಂಬಂಧಪಟ್ಟ ಕಂದಾಯ ಇಲಾಖೆಯ ಅಧಿಕಾರಿಗಳು ಮೂರು ದಿನಗಳ ಮುಂಚಿತವಾಗಿಯೇ ಅರ್ಜಿಗಳನ್ನು ಸ್ವೀಕರಿಸಿ, ಅಗತ್ಯ ಕ್ರಮ ಕೈಗೊಳ್ಳಿ. ವಾಸ್ತವ್ಯದ ದಿನ ಫಲಾನುಭವಿಗಳಿಗೆ ಅರ್ಜಿಗೆ ಸಂಬಂಧಿಸಿಂತೆ ಸೂಕ್ತ ಸೌಲಭ್ಯ ಒದಗಿಸುವ ಕುರಿತು ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಈ ಗ್ರಾಮಗಳಿಗೆ ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರ್, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಎಲ್ಲಾ ಅಧಿಕಾರಿಗಳು ವಾಸ್ತವ್ಯ ಕಾರ್ಯಕ್ರಮದಲ್ಲಿ ಹಾಜರಿರುವಂತೆ ಅಪರ ಜಿಲ್ಲಾಧಿಕಾರಿ ಸೂಚನೆಯನ್ನು ನೀಡಿದ್ದಾರೆ.
ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮದಲ್ಲಿನ ಎಲ್ಲಾ ಪಹಣಿಯಲ್ಲಿನ ಲೋಪದೋಷಗಳು ಮತ್ತು ಆಕಾರ್ ಬಂದ್ ತಾಳೆ ಹೊಂದುವ ಕುರಿತು ಖಚಿತಪಡಿಸಿಕೊಳ್ಳಬೇಕು. ಪೌತಿ ಹೊಂದಿದ ಖಾತೆದಾರರ ಹೆಸರನ್ನು, ನೈಜ ವಾರಿಸುದಾರರ ಹೆಸರಿಗೆ ಖಾತೆ ಮಾಡಲು ಕ್ರಮ ಕೈಗೊಳ್ಳಬೇಕು. ಗ್ರಾಮದ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ದೊರೆಯುತ್ತಿರುವ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ನಿರ್ದೇಶನ ನೀಡಲಾಗಿದೆ.
ಗ್ರಾಮದ ಎಲ್ಲಾ ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು ಹಾಗೂ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಲ್ಲಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಗುಡಿಸಲು ಇರುವ ವಾಸದ ಮನೆಗಳನ್ನು ಪತ್ತೆ ಹಚ್ಚಿ ಸರ್ಕಾರದ ವಿವಿಧ ಯೋಜನೆಯಡಿ ಮನೆ ಕಟ್ಟಲು ಅನುದಾನ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ಸರ್ಕಾರದಿಂದ ಸಾರ್ವಜನಿಕರಿಗೆ ದೊರೆಯುವ ಸವಲತ್ತುಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಸೂಚಿಸಲಾಗಿದೆ.
ಕಂದಾಯ ಸಚಿವ ಆರ್. ಅಶೋಕ ಸೂಚನೆಯಂತೆ ಪ್ರತಿ ತಿಂಗಳ 3ನೇ ಶನಿವಾರ ಜಿಲ್ಲಾಧಿಕಾರಿಗಳು, ಭೂ ದಾಖಲೆಗಳ ಉಪ ನಿರ್ದೇಶಕರು, ಭೂ ದಾಖಲೆಗಳ ಸಹಾಯಕ ನಿರ್ದೇಶಕರು, ಉಪ ವಿಭಾಗದ ಸಹಾಯಕ ಆಯುಕ್ತರು, ಸಂಬಂಧಪಟ್ಟ ತಹಶೀಲ್ದಾರ್ ಮತ್ತು ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಿಗರೊಂದಿಗೆ ಗ್ರಾಮ ವಾಸ್ತವ್ಯ ನಡೆಯಲಿದೆ.












Click it and Unblock the Notifications