ಉಡುಪಿಯಲ್ಲಿ ಪೇಜಾವರ ಶ್ರೀಗಳ ಆಶೀರ್ವಾದ ಪಡೆದ ದೇವೇಗೌಡ ದಂಪತಿ
Recommended Video
ಉಡುಪಿ, ಮೇ 14: ಉಡುಪಿಯ ಕಾಪುವಿನಲ್ಲಿರುವ ಹೆಲ್ತ್ ರೆಸಾರ್ಟ್ ನಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ದೇವೇಗೌಡ ಮತ್ತು ಚನ್ನಮ್ಮ ದಂಪತಿ ಇಂದು ಸೋಮವಾರ ಉಡುಪಿಯ ಕೃಷ್ಣ ಮಠಕ್ಕೆ ಭೇಟಿ ನೀಡಿದರು.
ಉಡುಪಿಯ ಗೋವಿಂದ ಕಲ್ಯಾಣ ಮಂಟಪದಲ್ಲಿ ಪೇಜಾವರ ಶ್ರೀಗಳ 88ನೇ ಜನ್ಮ ನಕ್ಷತ್ರ ಪ್ರಯುಕ್ತ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಭಾಗಿಯಾದ ದೇವೇಗೌಡ ದಂಪತಿ ಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದರು. ಬಳಿಕ ಪೇಜಾವರ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಬಳಿಕ ಶ್ರೀಗಳ ಜೊತೆ ಸಮಾಲೋಚನೆ ನಡೆಸಿದರು.
ಮಾಧ್ಯಮ ಪ್ರತಿನಿಧಿಗೊಂದಿಗೆ ಮಾತನಾಡಿದ ದೇವೇಗೌಡ ಅವರು, ಶ್ರೀಗಳ ಜನ್ಮ ನಕ್ಷತ್ರ ಪ್ರಯುಕ್ತ ಆಶೀರ್ವಾದ ಪಡೆಯಲು ಬಂದಿದ್ದೇನೆ.ಅವರು ಆಶೀರ್ವಾದ ಮಾಡಿದ್ದಾರೆ. ಮೂಳೂರಿನಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದೇನೆ. ರಾಜಕೀಯದ ಕುರಿತು ಯಾವುದೇ ಕಮೆಂಟ್ ಮಾಡಲಾರೆ ಎಂದು ಪ್ರತಿಕ್ರಿಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪೇಜಾವರ ಶ್ರೀ, ರಾಷ್ಟ್ರ ರಾಜಕಾರಣದಲ್ಲಿ ದೇವೇಗೌಡರು ಅತ್ಯಂತ ಹಿರಿಯರು. ಪ್ರಧಾನ ಮಂತ್ರಿಯಾಗಿ ಉತ್ತಮ ಕೆಲಸ ಮಾಡಿದ್ದರು. ದೇವೇಗೌಡರೇ ಪ್ರಧಾನಿಯಾಗಿದ್ದರೆ ಕಾಶ್ಮೀರ ಸಮಸ್ಯೆ ಬಗೆಹರಿಯಲು ಅವಕಾಶ ಇತ್ತು. ದೇವೇಗೌಡರು ಮತ್ತು ಕುಟುಂಬದಿಂದ ಹೆಚ್ಚಿನ ರಾಷ್ಟ್ರಸೇವೆ ಆಗಲಿ ಎಂದು ಹೇಳಿದರು.

ಭೇಟಿ ಸಂದರ್ಭದಲ್ಲಿ ನಾವಿಬ್ಬರೂ ರಾಜಕೀಯ ವಿಚಾರ ಮಾತನಾಡಿಲ್ಲ. ದೇವೇಗೌಡರು ಬನ್ನಂಜೆ ಗೋವಿಂದಾಚಾರ್ಯರ ಪುಸ್ತಕ ಓದುತ್ತಿದ್ದಾರೆ. ಚೆನ್ನಮ್ಮ ಅತ್ಯಂತ ಸರಳಜೀವಿ, ಮಹಾನ್ ದೈವಭಕ್ತೆ. ಯಾವ ಶ್ರೀಮಂತಿಕೆಯ ಆಡಂಭರವೂ ಅವರಿಗಿಲ್ಲ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಭೇಟಿ ಸಂದರ್ಭದಲ್ಲಿ ತುರ್ತು ಪರಿಸ್ಥಿತಿ ಕಾಲದ ನೆನಪುಗಳನ್ನು ದೇವೇಗೌಡ ಹಾಗೂ ಪೇಜಾವರ ಶ್ರೀಗಳು ಮೆಲುಕು ಹಾಕಿದರು ಎಂದು ಹೇಳಲಾಗಿದೆ.












Click it and Unblock the Notifications