ಕೋವಿಡ್; ಧಾರ್ಮಿಕ ಕಾರ್ಯಕ್ರಮಕ್ಕೆ ಅಡ್ಡಿ ಬೇಡ
ಉಡುಪಿ, ಏಪ್ರಿಲ್ 17; " ಕೋವಿಡ್ ಪರಿಸ್ಥಿತಿಯಲ್ಲಿ ಧಾರ್ಮಿಕ ಕಾರ್ಯಗಳಿಗೆ ಅಡ್ಡಿ ಪಡಿಸಬೇಡಿ. ಉಡುಪಿ ಧಾರ್ಮಿಕ ಕೇಂದ್ರಗಳೇ ಹೆಚ್ಚಿರುವ ಜಿಲ್ಲೆ. ಜನರ ಧಾರ್ಮಿಕ ಭಾವನೆಗಳಿಗೆ ಅಡ್ಡಿ ಮಾಡಬೇಡಿ" ಎಂದು ಉಡುಪಿ ಬಿಜೆಪಿ ಶಾಸಕ ರಘುಪತಿ ಭಟ್ ಸರ್ಕಾರಕ್ಕೆ ಮನವಿ ಮಾಡಿದರು.
ಶನಿವಾರ ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಾಸಕರು, ಧಾರ್ಮಿಕ ಕಾರ್ಯಗಳಿಗೆ ಅಡ್ಡಿ ಪಡಿಸಬೇಡಿ ಎಂದು ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿಯನ್ನು ಮಾಡಿದರು.
"ಕೋಲ, ನೇಮೋತ್ಸವ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳಿಗೆ ಜನ ಕಂಕಣ ಬದ್ಧರಾಗಿದ್ದಾರೆ. ಮುಹೂರ್ತ ನಿಗದಿಯಾಗಿದೆ. ಎಲ್ಲಾ ಸಿದ್ಧತೆಗಳು ನಡೆದಿವೆ. ಧಾರ್ಮಿಕ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಿದರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ" ಎಂದರು.

"ನಾನೊಬ್ಬ ಆಡಳಿತ ಪಕ್ಷದ ಸದಸ್ಯನಾಗಿ ಈ ಮಾತನ್ನು ಹೇಳುತ್ತಿದ್ದೇನೆ. ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡದಿರುವುದು ಜನಪ್ರಿಯ ಸರ್ಕಾರದ ಲಕ್ಷಣವಲ್ಲ. ಆದೇಶವನ್ನು ತಕ್ಷಣ ವಾಪಸು ಪಡೆಯಬೇಕು" ಎಂದು ಮನವಿ ಮಾಡಿದರು.
"ಕೋವಿಡ್ ನಿಯಮಾವಳಿಗಳನ್ನು ರೂಪಿಸಿ, ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶ ಕೊಡಿ. ಭಾಗವಹಿಸುವ ಭಕ್ತರ ಸಂಖ್ಯೆಯನ್ನು ಮಿತಿಗೊಳಿಸಿ. ರಾಜಕೀಯ ಕಾರ್ಯಕ್ರಮಗಳು ಅನಿವಾರ್ಯವಲ್ಲ ಆದರೆ ಅವಕಾಶ ಕೊಟ್ಟಿದ್ದೇವೆ" ಎಂದರು.
"ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಧಾರ್ಮಿಕ ಕಾರ್ಯಕ್ರಮಗಳು ಅತ್ಯಗತ್ಯ ಜನಸಂದಣಿಗೆ ನಿಯಂತ್ರಣ ಹೇರಿ, ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶ ಕೊಡಿ. ಹಿಂದುಳಿದ ಜನಾಂಗದವರೇ ಧಾರ್ಮಿಕ ಕಾರ್ಯಕ್ರಮಗಳಲ್ಲಿ ದುಡಿಯುತ್ತಾರೆ. ಬಡ ಜನರಿಗೆ ಇದರಿಂದ ಆರ್ಥಿಕ ಹೊಡೆತ ಬೀಳುತ್ತದೆ" ಎಂದು ತಿಳಿಸಿದರು.
"ಕರಾವಳಿಯ ಜೀವನಪದ್ಧತಿಯನ್ನು ಅರ್ಥಮಾಡಿಕೊಳ್ಳಿ. ಉಡುಪಿ ನಗರಕ್ಕೆ ರಾತ್ರಿ ಕರ್ಪ್ಯೂ ಅಗತ್ಯವೂ ಇಲ್ಲ. ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ" ಎಂದು ಶಾಸಕರು ಹೇಳಿದರು.












Click it and Unblock the Notifications