ಉಡುಪಿ ಜಿಲ್ಲೆಗೆ ಪ್ರಮೋದ್ ಮುತಾಲಿಕ್ಗೆ ಪ್ರವೇಶ ನಿರ್ಬಂಧ; ಜಿಲ್ಲಾಧಿಕಾರಿ ಆದೇಶ
ಉಡುಪಿ, ಏಪ್ರಿಲ್ 14: ಹಿಜಾಬ್ ವಿಚಾರದಲ್ಲಿ ನಿಗಿ ನಿಗಿ ಕೆಂಡವಾಗಿದ್ದ ಉಡುಪಿ ಜಿಲ್ಲೆಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರವೇಶವನ್ನು ಉಡುಪಿ ಜಿಲ್ಲಾಡಳಿತ ನಿರ್ಬಂಧಿಸಿದೆ.
ಶುಕ್ರವಾರ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿಯ ಬೀರೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆಗೆ ಮುಖ್ಯ ಅತಿಥಿಯಾಗಿ ಭಾಗವಹಿಸಬೇಕಾಗಿದ್ದ ಪ್ರಮೋದ್ ಮುತಾಲಿಕ್ಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಜಿಲ್ಲೆಗೆ ನಿಷೇಧ ಹೇರಿ ಆದೇಶ ಹೊರಡಿಸಿದ್ದಾರೆ.
ಹರ್ಷ ಹತ್ಯೆ ಮಾಡಿದವರಿಗೆ ಗಲ್ಲು ಶಿಕ್ಷೆ ವಿಧಿಸಿ; ಪ್ರಮೋದ್ ಮುತಾಲಿಕ್
ಹಿಂದೂ ಜಾಗರಣ ವೇದಿಕೆ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಮುಖ್ಯ ಅತಿಥಿಯಾಗಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರನ್ನು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯನ್ನಾಗಿ ಆಹ್ವಾನಿಸಲಾಗಿತ್ತು.
ಗಂಗೊಳ್ಳಿ ಕಳೆದ ಹಲವು ಸಮಯಗಳಿಂದ ಸೂಕ್ಷ್ಮ ಪರಿಸ್ಥಿತಿಯಲ್ಲಿದ್ದು ಈ ಸಂದರ್ಭದಲ್ಲಿ ಪ್ರಮೋದ್ ಮುತಾಲಿಕ್ ಭಾಷಣ ಮಾಡಿದರೆ ಕಾನೂನು ಸುವ್ಯವಸ್ಥೆ ಹದಗೆಡುವ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆಯಾಗದಂತೆ ಪ್ರಮೋದ್ ಮುತಾಲಿಕ್ಗೆ ಜಿಲ್ಲೆಗೆ ಆಗಮನಕ್ಕೆ ಅವಕಾಶ ನೀಡಬಾರದೆಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್, ಜಿಲ್ಲಾಧಿಕಾರಿ ಕೂರ್ಮರಾವ್ಗೆ ಮನವಿ ನೀಡಿದ್ದರು. ಪೊಲೀಸ್ ಅಧೀಕ್ಷಕರ ಮನವಿ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಮುತಾಲಿಕ್ಗೆ ಪ್ರವೇಶ ನಿರ್ಬಂಧದ ಆದೇಶ ಹೊರಡಿಸಿದ್ದಾರೆ.
ದಿನಾಂಕ 15/04/2022ರ ಶುಕ್ರವಾರ ಹಿಂದೂ ಜಾಗರಣಾ ವೇದಿಕೆ ಗಂಗೊಳ್ಳಿ ಇದರ ಆಯೋಜಕತ್ವದಲ್ಲಿ ಗಂಗೊಳ್ಳಿ ಗ್ರಾಮದ ಬೀರೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಅಂಗವಾಗಿ ಸಂಜೆ 05.00 ಗಂಟೆಗೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಾರ್ಯಕ್ರಮಲ್ಲಿ ಪಾಲ್ಗೊಂಡು ಪ್ರಚೋದನಕಾರಿ ಭಾಷಣ ಮಾಡಿದ್ದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಕೋಮು ಸೌಹರ್ದತೆಗೆ ಧಕ್ಕೆ ಆಗಿ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುವ ಸಾದ್ಯತೆಗಳು ಹೆಚ್ಚಾಗಿದೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮವು ಕೋಮು ಸೂಕ್ಷ್ಮ ಪ್ರದೇಶವಾಗಿದ್ದು, ಈ ಹಿಂದೆ 2014ರಿಂದ ಕೋಮು ಪ್ರೇರಿತ ಘಟನೆ ನಡೆದು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿರುತ್ತವೆ. ಆದ್ದರಿಂದ ದಿನಾಂಕ 15/04/2022 ರಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗಮನದ ಪ್ರವೇಶವನ್ನು ಉಡುಪಿ ಜಿಲ್ಲಾದ್ಯಂತ ನಿರ್ಬಂಧಿಸಲು ಆದೇಶಿಸುವಂತೆ ಉಡುಪಿ ಜಿಲ್ಲೆ ಪೊಲೀಸ್ ಅಧೀಕ್ಷಕರು ಮನವಿ ಸಲ್ಲಿಸಿದ್ದರು.
ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು, ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳುವುದು ಅತೀ ಅವಶ್ಯಕವಾಗಿದೆ.
ಈ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಯಾವುದೇ ಅಹಿತಕರ ಘಟನೆಗಳಿಗೆ ಎಡೆಮಾಡಿಕೊಡದಂತೆ ಸೂಕ್ತ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಪತ್ರದಲ್ಲಿನ ಪೊಲೀಸ್ ಅಧೀಕ್ಷಕರ ಮಾಹಿತಿಯನ್ನು ಆಧರಿಸಿ ಮುಂಜಾಗ್ರತ ಕ್ರಮವಾಗಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 133, 143 ಮತ್ತು 144ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರ ಉಡುಪಿ ಜಿಲ್ಲಾ ಪ್ರವೇಶ ನಿಷೇಧಿಸುವುದಾಗಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ಹೊರಡಿಸಿದ್ದಾರೆ.