ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಎಫ್ಐಆರ್
ಉಡುಪಿ, ಏಪ್ರಿಲ್ 08 : ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದಡಿ ಎಫ್ಐಆರ್ ದಾಖಲು ಮಾಡಲಾಗಿದೆ.
ಯುವ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಮೀನುಗಾರಿಕೆ ಸಚಿವ ಪ್ರಮೋದ್ ಮಧ್ವರಾಜ್ ಅವರು ಕ್ರೀಡಾಪಟು ಗುರುರಾಜ್ ಪೂಜಾರಿ ಅವರಿಗೆ ಕ್ರೀಡಾ ಇಲಾಖೆಯಿಂದ 25 ಲಕ್ಷ ಹಣ ಮತ್ತು ಸರ್ಕಾರಿ ನೌಕರಿಯನ್ನು ನೀಡಲಾಗುತ್ತದೆ ಎಂದು ಘೋಷಣೆ ಮಾಡಿದ್ದರು.
ಕಾಮನ್ವೆಲ್ತ್: ಭಾರತಕ್ಕೆ ಮೊದಲ ಪದಕ ಗೆದ್ದುಕೊಟ್ಟ ಕುಂದಾಪುರದ ಗುರುರಾಜ್
ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟು ಗುರುರಾಜ್ ವೇಟ್ ಲಿಫ್ಟಿಂಗ್ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಗುರುರಾಜ್ ಉಡುಪಿ ಜಿಲ್ಲೆಯ ಕುಂದಾಪುರ ಮೂಲದವರು.
ಕ್ರೀಡಾ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರು 25 ಲಕ್ಷ ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡುವುದಾಗಿ ಘೋಷಣೆ ಮಾಡಿದ್ದರು. ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ.
ವೇಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಪಡೆದ ಗುರುರಾಜ್ ಗೆ 25 ಲಕ್ಷ ನಗದು
ಜಿಲ್ಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು ಯಾವುದೇ ಪ್ರಚಾರ ಕಾರ್ಯಗಳಿಗೆ ಅವಕಾಶವಿಲ್ಲ. ಕ್ರೀಡಾ ನೀತಿಯಲ್ಲಿ ಉಲ್ಲೇಖವಿರದೇ ನೇರವಾಗಿ ಗುರುರಾಜ್ಗೆ ಬಹುಮಾನ ಘೋಷಣೆ ಮಾಡಿದ ಕಾರಣಕ್ಕೆ ಎಫ್ಐಆರ್ ದಾಖಲು ಮಾಡಲಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಸಚಿವ ಪ್ರಮೋದ್ ಮಧ್ವರಾಜ್ ಅವರು, 'ನಾನು ಕ್ರೀಡಾ ನೀತಿಯಲ್ಲಿ ಈ ಮೊದಲೇ ಘೋಷಣೆ ಆದ ವಿಚಾರವನ್ನು ಮುಂದಿಟ್ಟಿದ್ದು, ಯಾವುದೇ ಪ್ರಚಾರದ ಕೆಲಸ ಮಾಡಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.