ಉಡುಪಿ ಮಾಜಿ ಶಾಸಕ ಯು.ಆರ್ ಸಭಾಪತಿ ವಿಧಿವಶ
ಉಡುಪಿ, ಮೇ 21: ಉಡುಪಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಯು.ಆರ್ ಸಭಾಪತಿ (71) ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯು.ಆರ್.ಸಭಾಪತಿ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು(ಮೇ 21) ಉಡುಪಿಯ ಸ್ವಗೃಹದಲ್ಲಿ ಕೊನೆಯುಸಿರೆಳೆಸಿದ್ದಾರೆ.
ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿದ್ದ ಯು.ಆರ್ ಸಭಾಪತಿ ಅವರು 1980-90ರ ದಶಕದ ಕರಾವಳಿ ಭಾಗದ ಪ್ರಭಾವಿ ನಾಯಕರಾಗಿದ್ದರು. ಯು.ಆರ್ ಸಭಾಪತಿ ಅವರು ರಾಜಕೀಯ ಪ್ರವೇಶಕ್ಕೆ ಆಸ್ಕರ್ ಫರ್ನಾಂಡಿಸ್ ಪ್ರೇರಣೆಯಾಗಿದ್ದು, ಬಂಗಾರಪ್ಪ ಅವರ ಅನುಯಾಯಿಯಾಗಿದ್ದರು.

1994ರಲ್ಲಿ ಕೆಸಿಪಿ ಪಕ್ಷದಿಂದ ಗೆದ್ದು ಶಾಸಕರಾಗಿ ಮೊದಲ ಬಾರಿಗೆ ಆಯ್ಕೆಯಾಗಿದ್ದರೆ ಯು.ಆರ್ ಸಭಾಪತಿ ಅವರು 1999ರಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಎರಡನೇ ಬಾರಿಗೆ ಶಾಸಕರಾಗಿ ವಿಧಾನಸಭೆಗೆ ಪ್ರವೇಶಿಸಿದ್ದರು. ಇನ್ನು 2004ರ ವಿಧಾನಸಭಾ ಚುನಾವಣೆಯಲ್ಲಿ ರಘುಪತಿ ಭಟ್ ವಿರುದ್ಧ ಯು.ಆರ್ ಸಭಾಪತಿ ಸೋಲುಕಂಡಿದ್ದರು.
1987ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪರಿಷತ್ನ ಉದ್ಯಾವರ ಕ್ಷೇತ್ರದ ಸದಸ್ಯರಾಗಿದ್ದ ಯು.ಆರ್ ಸಭಾಪತಿ ಅವರು, ಪರಿಷತ್ನ ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಅದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉತ್ತರ ವಿಭಾಗದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸಹ ಸೇವೆ ಸಲ್ಲಿಸಿದ್ದರು.
ಇತ್ತೀಚಿಗೆ ಅನಾರೋಗ್ಯದಿಂದ ಬಳಲುತ್ತಿದ್ದ ಯು.ಆರ್.ಸಭಾಪತಿ ಅವರು ಇಂದು ವಿಧಿವಶರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಉಡುಪಿ ಕ್ಷೇತ್ರದಿಂದ 2 ಬಾರಿ ಶಾಸಕರಾಗಿದ್ದ ಯು.ಆರ್.ಸಭಾಪತಿ ಅವರ ಅಗಲಿಕೆಗೆ ರಾಜಕೀಯ ನಾಯಕರು ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.












Click it and Unblock the Notifications