ಕರಾವಳಿ ಜಂಕ್ಷನ್-ಮಲ್ಪೆವರೆಗಿನ 4 ಪಥದ ರಸ್ತೆಗೆ ಶಂಕು ಸ್ಥಾಪನೆ
ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಉಡುಪಿಯ ಕರಾವಳಿ ಜಂಕ್ಷನ್ನಿಂದ ಮಲ್ಪೆವರೆಗಿನ ರಸ್ತೆಯನ್ನು 4 ಪಥದ ರಸ್ತೆಯಾಗಿ ಅಭಿವೃದ್ಧಿಗೊಳಿಸುವ ಯೋಜನೆಗೆ ಚಾಲನೆ ನೀಡಿದರು.
ಉಡುಪಿ, ಮಾರ್ಚ್ 10; ಉಡುಪಿಯ ಕರಾವಳಿ ಜಂಕ್ಷನ್ನಿಂದ ಮಲ್ಪೆವರೆಗಿನ ರಸ್ತೆಯನ್ನು 70 ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿ ಮಾಡಲಾಗುತ್ತದೆ. ಈ ರಸ್ತೆ ವಿಸ್ತರಣೆ ಮೂಲಕ ಬಂದರಿನಲ್ಲಿ ಹೆಚ್ಚಿನ ಅರ್ಥಿಕ ಚಟುವಟಿಕೆಗಳು ನಡೆಯಲು ಹಾಗೂ ಪ್ರವಾಸೋದ್ಯಮ ಚಟುವಟಿಕೆಗಳು ಇನ್ನಷ್ಟು ಅಭಿವೃದ್ಧಿ ಹೊಂದಲು ಸಾಧ್ಯವಾಗಲಿದೆ.
ಉಡುಪಿ-ಚಿಕ್ಕಮಗಳೂರು ಸಂಸದೆ ಮತ್ತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಶುಕ್ರವಾರ ಚತುಷ್ಪಥ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದರು. ನಂತರ ಮಾತನಾಡಿ, "ಈ ರಸ್ತೆ ಅಭಿವೃದ್ಧಿಯು ಈ ಭಾಗದ ಜನರ ಬಹುಕಾಲದ ಬೇಡಿಕೆಯಾಗಿದ್ದು, ಇಲ್ಲಿ ಮೀನುಗಾರಿಕಾ ಬಂದರು ಮತ್ತು ಪ್ರವಾಸಿ ಕ್ಷೇತ್ರವಾದ ಮಲ್ಪೆ ಬೀಚ್ ಇರುವ ಕಾರಣ ರಸ್ತೆಯಲ್ಲಿ ವಾಹನ ದಟ್ಟಣೆ ಅತ್ಯಧಿಕವಾಗಿದ್ದು, ಕಿರಿದಾದ ರಸ್ತೆಯಿಂದ ಹಲವು ಅಪಘಾತಗಳಿಗೆ ಸಹ ಕಾರಣವಾಗಿತ್ತು" ಎಂದರು.

"ಕರಾವಳಿ ಜಂಕ್ಷನ್ನಿಂದ ಮಲ್ಪೆವರೆಗಿನ ರಸ್ತೆಯನ್ನು 70 ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥ ರಸ್ತೆಯಾಗಿ ಮಾಡಲಾಗುತ್ತಿದೆ. ಈ ರಸ್ತೆ ವಿಸ್ತರಣೆಯ ಮೂಲಕ ಬಂದರುನಲ್ಲಿ ಹೆಚ್ಚಿನ ಅರ್ಥಿಕ ಚಟುವಟಿಕೆಗಳು ನಡೆಯಲು ಹಾಗೂ ಪ್ರವಾಸೋದ್ಯಮ ಚಟುವಟಿಕೆಗಳು ಇನ್ನಷ್ಟು ಅಭಿವೃದ್ಧಿ ಹೊಂದಲು ಸಾಧ್ಯವಾಗಲಿದೆ" ಎಂದು ಸಚಿವರು ಭರವಸೆ ವ್ಯಕ್ತಪಡಿಸಿದರು.
"ಪ್ರಸ್ತುತ ಈ ಕಾಮಗಾರಿಗೆ ಅಗತ್ಯವಿರುವ ಭೂ ಸ್ವಾಧೀನ ಸಂದರ್ಭದಲ್ಲಿ ಸಾರ್ವಜನಿಕರು ಸಹಕರಿಸಿ ಶೀಘ್ರದಲ್ಲಿ ರಸ್ತೆ ಕಾಮಗಾರಿ ಮುಕ್ತಾಯಗೊಳ್ಳಲು ಸಹಕಾರ ನೀಡುವಂತೆ ಸಚಿವರು ಮನವಿ ಮಾಡಿದರು. ಈ ಹಿಂದೆ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯನ್ನು ಅವೈಜ್ಞಾನಿಕವಾಗಿ ನಿರ್ಮಿಸಿದ್ದು, ಇದರಿಂದಾಗಿ ಸಂತೆಕಟ್ಟೆ, ಅಂಬಲಪಾಡಿ ಮತ್ತು ಕಟಪಾಡಿಯಲ್ಲಿ ಸಮಸ್ಯೆಗಳಾಗಿದ್ದು, ಸರ್ವಿಸ್ ರಸ್ತೆ ಸಹ ಪೂರ್ಣ ಪ್ರಮಾಣದಲ್ಲಿ ನಿರ್ಮಾಣವಾಗಿಲ್ಲ. ಆದರೆ ಪ್ರಸ್ತುತ ಕೇಂದ್ರ ಸರ್ಕಾರದ ನೆರವಿನಿಂದ ಸಂತೆಕಟ್ಟೆಯಲ್ಲಿ 27 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದ್ದು, ಅಂಬಲಪಾಡಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಅಂಡರ್ಪಾಸ್ ಕಾಮಗಾರಿ ಶೀಘ್ರದಲ್ಲಿ ಆರಂಭಗೊಳ್ಳಲಿದೆ" ಎಂದು ಸಚಿವರು ಮಾಹಿತಿ ನೀಡಿದರು.

ಉಡುಪಿಯ ಬಿಜೆಪಿ ಶಾಸಕ ರಘುಪತಿ ಭಟ್ ಮಾತನಾಡಿ, "ಡಬಲ್ ಇಂಜಿನ್ ಸರ್ಕಾರದಿಂದ ಜಿಲ್ಲೆಯಲ್ಲಿ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಹೆಬ್ರಿಯಿಂದ ಮಲ್ಪೆವರೆಗೆ ಒಟ್ಟು 350 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಕರಾವಳಿ ಜಂಕ್ಷನ್ನಿಂದ ಮಲ್ಪೆವರೆಗಿನ ಕಾಮಗಾರಿಗೆ ಭೂಮಿ ನೀಡುವ ಮಾಲೀಕರಿಗೆ ಸೂಕ್ತ ಪರಿಹಾರ ದೊರೆಯಲಿದೆ" ಎಂದು ಹೇಳಿದರು.
ಏನಿದು ಯೋಜನೆ?; ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮತ್ತು ಉಡುಪಿ ಜಿಲ್ಲೆಯ ಮಲ್ಪೆ ರಾಷ್ಟ್ರೀಯ ಹೆದ್ದಾರಿ 169ಎ ಭಾಗವಾಗಿ ಉಡುಪಿಯ ಕರಾವಳಿ ಜಂಕ್ಷನ್ನಿಂದ ಮಲ್ಪೆವರೆಗಿನ ರಸ್ತೆಯನ್ನು 4 ಪಥದ ರಸ್ತೆಯಾಗಿ ಅಭಿವೃದ್ಧಿ ಮಾಡಲಾಗುತ್ತಿದೆ. ಈ ಯೋಜನೆಯ ಕುರಿತು 2022ರ ಡಿಸೆಂಬರ್ನಲ್ಲಿ ಉಡುಪಿಯಲ್ಲಿ ಸಭೆ ನಡೆದಿತ್ತು. ಹೆಬ್ರಿ-ಪರ್ಕಳ-ಕರಾವಳಿ ಜಂಕ್ಷನ್-ಮಲ್ಪೆವರೆಗಿನ ಚತುಷ್ಪಥ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗಿದೆ. ಟೆಂಡರ್ ಸಹ ಮುಗಿದು, ಪರ್ಕಳದಿಂದ ಕಾಮಗಾರಿ ಆರಂಭವಾಗಿದೆ.
ಆದರೆ ಕರಾವಳಿ ಜಂಕ್ಷನ್ನಿಂದ ಮಲ್ಪೆವರೆಗಿನ ರಸ್ತೆ ಅಭಿವೃದ್ಧಿಗೆ ಭೂ ಸ್ವಾಧೀನ ವಿಳಂಬವಾಗಿತ್ತು ಆದಷ್ಟು ಬೇಗ ಭೂ ಸ್ವಾಧೀನ ಪೂರ್ಣಗೊಳಿಸಿ ಕಾಮಗಾರಿ ಆರಂಭಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆದಿತ್ತು. ರಸ್ತೆ ಬದಿಯ ಮರ ಸ್ಥಳಾಂತರ, ವಿದ್ಯುತ್ ಕಂಬಗಳ ಸ್ಥಳಾಂತರ ಮುಗಿಸಿ ಕಾಮಗಾರಿಗೆ ಬೇಗ ಸಹಕಾರ ನೀಡಬೇಕು ಎಂದು ಅಧಿಕಾರಗಳಿಗೆ ಸೂಚನೆ ನೀಡಲಾಗಿತ್ತು. ಹೆಬ್ರಿಯಿಂದ ಮಲ್ಪೆವರೆಗಿನ ರಸ್ತೆ ಅಭಿವೃದ್ಧಿಗೆ 320 ಕೋಟಿ ಅನುದಾನ ಮಂಜೂರು ಆಗಿದೆ. ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಕಾಮಗಾರಿ ಆರಂಭಿಸಲಾಗುತ್ತದೆ ಎಂದು ತಿಳಿಸಲಾಗಿತ್ತು. ಈಗ ಯೋಜನೆಗೆ ಶಂಕುಸ್ಥಾಪನೆ ಮಾಡಲಾಗಿದೆ.












Click it and Unblock the Notifications