ಸಂತ್ರಸ್ತ ಮೀನುಗಾರರ ಕುಟುಂಬಕ್ಕೆ ತಲಾ 10 ಲಕ್ಷ ರೂ.ಪರಿಹಾರ:ಜಯಮಾಲಾ
ಉಡುಪಿ, ಮೇ 10:ಸುವರ್ಣ ತ್ರಿಭುಜ ಬೋಟ್ ನಾಪತ್ತೆ ಪ್ರಕರಣದಲ್ಲಿ 7 ಮಂದಿ ಮೀನುಗಾರರು ಕಣ್ಮರೆಯಾಗಿದ್ದಾರೆ. ಈ ಮೀನುಗಾರರ ಕುಟುಂಬಗಳಿಗೆ ತಲಾ 10 ಲಕ್ಷ ರೂ.ಪರಿಹಾರ ಧನ ನೀಡುವ ಆದೇಶ ಆಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ ತಿಳಿಸಿದ್ದಾರೆ.
ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮೀನುಗಾರ ಸಂಕಷ್ಟ ಪರಿಹಾರ ನಿಧಿ ಹಾಗೂ ಸಿಎಂ ಪರಿಹಾರ ನಿಧಿಯಿಂದ ಹಣ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.
ಕಣ್ಮರೆಯಾದವರು ಪತ್ತೆಯಾಗಲಿ ಎಂಬ ಆಶಯ ನಮ್ಮದು. ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸುತ್ತೇವೆ. ಹೆಚ್ಚಿನ ಪರಿಹಾರಕ್ಕಾಗಿ ಕೇಂದ್ರವನ್ನು ಒತ್ತಾಯಿಸುತ್ತೇವೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಉಡುಪಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಉಡುಪಿಯನ್ನು ಭಾಗಶಃ ಬರಪೀಡಿತ ಪ್ರದೇಶ ಅಂತ ಘೋಷಿಸಲಾಗಿದೆ. 126 ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಇದೆ. ಎಲ್ಲಾ ಕಡೆ ಟ್ಯಾಂಕರ್ ಮೂಲಕ ನೀರು ಪೂರೈಸುತ್ತಿದ್ದೇವೆ ಎಂದು ಹೇಳಿದ ಜಯಮಾಲಾ, ಉಡುಪಿ ನಗರಕ್ಕೆ ನೀರು ಪುರೈಸುವ ಬಜೆ ಡ್ಯಾಂ ನಲ್ಲಿ ನೀರು ಸಂಪೂರ್ಣ ಇಂಗಿ ಹೋಗಿದೆ. ಡ್ಯಾಂ ನ ಹೂಳೆತ್ತುವ, ಬಂಡೆ ಒಡೆಯುವ ಪ್ರಕ್ರಿಯೆ ಮಾಡುತ್ತೇವೆ. ಬರ ನಿರ್ವಹಣೆಯ ಹಣಕಾಸಿಗೆ ತೊಂದರೆ ಇಲ್ಲ. 33 ಕೋಟಿ ರುಪಾಯಿ ಅಕೌಂಟ್ ನಲ್ಲಿ ಇದೆ ಎಂದು ಹೇಳಿದರು.
ಸಮುದ್ರಕ್ಕೆ ಹರಿಯುವ ನೀರನ್ನು ರಿಚಾರ್ಜ್ ಮಾಡಬೇಕಾಗಿದೆ. ಮಳೆನೀರು ಕೊಯ್ಲು ಯೋಜನೆ ಬಗ್ಗೆ ಚರ್ಚೆಯಾಗಿದೆ. ನಗರಪ್ರದೇಶದ ಜನರಿಗೆ ಕುಡಿಯುವ ತೊಂದರೆ ಆಗುವುದಿಲ್ಲ. ನದಿಗೆ ಹಾಕಿರುವ ಎಲ್ಲಾ ಪಂಪ್ ಸೆಟ್ ತೆರವು ಮಾಡುತ್ತೇವೆ ಎಂದು ಭರವಸೆ ನೀಡಿದರು.












Click it and Unblock the Notifications