ಗೃಹಲಕ್ಷ್ಮಿ; ಉಡುಪಿ ಜಿಲ್ಲೆಯಲ್ಲಿ 2.58 ಲಕ್ಷ ಫಲಾನುಭವಿಗಳು
ಉಡುಪಿ, ಜುಲೈ 21; ಕಾಂಗ್ರೆಸ್ ಸರ್ಕಾರ ನೀಡಿರುವ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಸುಲಭವಾಗಿ ಪ್ರತಿ ತಿಂಗಳು ಮನೆಯ ಯಜಮಾನಿ 2 ಸಾವಿರ ರೂ. ಪಡೆಯುವ ಯೋಜನೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ ಈ ಯೋಜನೆ ಜಾರಿಗೊಳಿಸಲಾಗುತ್ತಿದೆ. ಖಾತೆಯ ಸಚಿವರು ಲಕ್ಷ್ಮೀ ಹೆಬ್ಬಾಳ್ಕರ್. ಅವರು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಹೌದು. ಹಾಗಾದರೆ ಉಡುಪಿಯಲ್ಲಿರುವ ಯೋಜನೆಯ ಫಲಾನುಭವಿಗಳು ಎಷ್ಟು?. ಇಲ್ಲಿದೆ ಮಾಹಿತಿ.

ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅವರ ಸೂಚನೆಯಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲಾ ವ್ಯಾಪ್ತಿಯ ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆ ಈ ಯೋಜನೆಗೆ ಅರ್ಹರು. ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್ಟಿ ಪಾವತಿದಾರರಾಗಿದ್ದರೆ ಯೋಜನೆಯ ಲಾಭ ಪಡೆಯಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಎಷ್ಟು ಫಲಾನುಭವಿಗಳಿದ್ದಾರೆ?; ಗೃಹಲಕ್ಷ್ಮಿ ಯೋಜನೆಗೆ ಲಿಂಗತ್ವ ಅಲ್ಪಸಂಖ್ಯಾತರು ಒಳಪಡಲಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಒಟ್ಟಾರೆ 2,58,765 ಪಡಿತರ ಚೀಟಿದಾರರಿದ್ದು, 27,682 ಅಂತ್ಯೋದಯ, 1,62,734 ಬಿಪಿಎಲ್ ಹಾಗೂ 68,349 ಎಪಿಎಲ್ ಕಾರ್ಡ್ ಹೊಂದಿದವರಿದ್ದಾರೆ.
ಜಿಲ್ಲೆಯಲ್ಲಿ ಯೋಜನೆಯ ನೋಂದಣಿಗೆ 181 ಗ್ರಾಮ ಒನ್, 155 ಬಾಪೂಜಿ ಸೇವಾ ಕೇಂದ್ರ, 11 ಕರ್ನಾಟಕ ಒನ್, 19 ವಾರ್ಡ್ ಕಚೇರಿ ಸೇರಿದಂತೆ ಒಟ್ಟು 366 ಸೇವಾ ಕೇಂದ್ರಗಳನ್ನು 7 ತಾಲೂಕುಗಳಲ್ಲಿ ಗುರುತಿಸಲಾಗಿದೆ. ಫಲಾನುಭವಿಗಳು ಕೇಂದ್ರಗಳಿಗೆ ತೆರಳಿ ಉಚಿತವಾಗಿ ನೋಂದಣಿ ಮಾಡಿಕೊಳ್ಳಬಹುದು.
ಗೃಹಲಕ್ಷ್ಮಿ ಫಲಾನುಭವಿ ನೋಂದಣಿ ಪ್ರಕ್ರಿಯೆ ಎರಡು ವಿಧಾನದ ಮೂಲಕ ಮಾಡಲಾಗುತ್ತದೆ. ಮೊದಲನೆಯದಾಗಿ ಈಗಾಗಲೇ ಪಡಿತರ ಚೀಟಿಯಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಯ ಮೊಬೈಲ್ ಸಂಖ್ಯೆಗೆ ನೋಂದಣಿ ದಿನಾಂಕ, ಸಮಯ ಹಾಗೂ ನೊಂದಣಿ ಕೇಂದ್ರದ ವಿವರಗಳನ್ನು ಸಂದೇಶದ ಮೂಲಕ ತಿಳಿಸಲಾಗುತ್ತದೆ.
ಇದಲ್ಲದೆ ಟೋಲ್ ಫ್ರೀ ಸಂಖ್ಯೆ 1902ಗೆ ಕಾಲ್ ಮಾಡಿ ಅಥವಾ 8147500500 ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಮೂಲಕ ಸಂದೇಶ ಕಳುಹಿಸಿ ನೋಂದಣಿ ಕುರಿತು ಮಾಹಿತಿ ಪಡೆಯಬಹುದಾಗಿದೆ.
ಎರಡನೇ ವಿಧಾನವಾಗಿ ಪ್ರಜಾಪ್ರತಿನಿಧಿ (ಸರ್ಕಾರದಿಂದ ಗುರುತಿಸಲ್ಪಟ್ಟ ಸ್ವಯಂ ಸೇವಕರು) ಫಲಾನುಭವಿಗಳ ಮನೆಗೆ ಭೇಟಿ ನೀಡಲಿದ್ದು, ಅವರಿಂದಲೂ ಸಹ ಸ್ಥಳದಲ್ಲಿಯೇ ನೋಂದಾಯಿಸಿಕೊಳ್ಳಬಹುದಾಗಿದೆ. ಒಂದು ವೇಳೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ಗ್ರಾಮ ಒನ್, ಬಾಪೂಜಿ ಕೇಂದ್ರ, ಕರ್ನಾಟಕ ಒನ್ ಕೇಂದ್ರಗಳಿಗೆ ಹೋಗಲು ಸಾಧ್ಯವಾಗದೇ ಇದ್ದಲ್ಲಿ ಅದೇ ಸೇವಾ ಕೇಂದ್ರಗಳಿಗೆ ಮುಂದಿನ ಯಾವುದೇ ದಿನಾಂಕದಂದು ಸಂಜೆ 5 ರಿಂದ 7 ಗಂಟೆಯೊಳಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದಾಗಿದೆ.
ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಫಲಾನುಭವಿಗಳು ಗ್ರಾಮದ ಸಮೀಪವಿರುವ ಗ್ರಾಮ ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರಗಳಿಗೆ ಮತ್ತು ನಗರ ಪ್ರದೇಶದಲ್ಲಿ ವಾಸಿಸುವ ಫಲಾನುಭವಿಗಳು ಸಮೀಪದ ಕರ್ನಾಟಕ ಒನ್, ವಾರ್ಡ ಕಛೇರಿ, ಸ್ಥಳೀಯ ನಗರಾಡಳಿತ ಸಂಸ್ಥೆಯ ಕಛೇರಿಗಳಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ದಾಖಲೆ ಯಾವುವು ಬೇಕು?: ಯೋಜನೆಯಡಿ ಹೆಸರು ನೋಂದಾಯಿಸಿಕೊಳ್ಳಲು ಪಡಿತರ ಚೀಟಿ ಸಂಖ್ಯೆ, ಫಲಾನುಭವಿ ಮತ್ತು ಪತಿಯ ಆಧಾರ್ ಕಾರ್ಡ್ ಸಂಖ್ಯೆ, ಬ್ಯಾಂಕ್ ಖಾತೆ ಪಾಸ್ ಬುಕ್ (ಆಧಾರ್ ನಂಬರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಹೊರತುಪಡಿಸಿ ಪರ್ಯಾಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಬಯಸಿದ್ದಲ್ಲಿ, ಸದರಿ ಬ್ಯಾಂಕ್ ಖಾತೆಯ ಪಾಸ್ ಬುಕ್) ಮಾಹಿತಿ ಅಗತ್ಯವಿದೆ. ನೋಂದಣಿ ಕೇಂದ್ರಕ್ಕೆ ಈ ಎಲ್ಲಾ ಮಾಹಿತಿಗಳೊಂದಿಗೆ ಹಾಜರಾಗಬೇಕು ಎಂದು ಮನವಿ ಮಾಡಲಾಗಿದೆ.
ಯೋಜನೆ ಫಲಾನುಭವಿಯಾಗಲು ಗ್ರಾಮ ಒನ್, ಬಾಪೂಜಿ ಕೇಂದ್ರ, ಕರ್ನಾಟಕ ಒನ್ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಾಗ ಮಂಜೂರಾತಿ ಪತ್ರವನ್ನು ಸ್ಥಳದಲ್ಲಿಯೇ ನೀಡಲಾಗುತ್ತದೆ. ಪ್ರಜಾಪ್ರತಿನಿಧಿ ಮೂಲಕ ನೋಂದಣಿ ಮಾಡಿದರೆ ಮಂಜೂರಾತಿ ಪತ್ರ ನಂತರ ಮನೆಗೆ ತಲುಪಿಸಲಾಗುತ್ತದೆ.
ಇದಲ್ಲದೇ ನೋಂದಣಿ ನಂತರ ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಮೂಲಕ ಮಂಜೂರಾತಿ ಬಗ್ಗೆ ಸಂದೇಶ ಬರಲಿದೆ. ನೋಂದಣಿ ನಂತರ ಆಧಾರ್ ಜೋಡಣೆಯಾಗಿರುವ ಫಲಾನುಭವಿಯ ಖಾತೆಗೆ ಡಿಬಿಟಿ ಮತ್ತು ಆಧಾರ್ ಜೋಡಣೆಯಾಗದ ಬ್ಯಾಂಕ್ ಖಾತೆಗೆ ಆರ್ಟಿಜಿಎಸ್ ಮೂಲಕ ಮಾಸಿಕ 2,000 ರೂ. ಗಳನ್ನು ಜಮೆ ಮಾಡಲಾಗುತ್ತದೆ.












Click it and Unblock the Notifications