ಭಾರಿ ಮಳೆಯ ಆರ್ಭಟಕ್ಕೆ ತತ್ತರಿಸಿದ ಕೃಷ್ಣನಗರಿ: 4 ದಶಕಗಳ ಬಳಿಕ ಪ್ರವಾಹ
ಉಡುಪಿ, ಸೆಪ್ಟೆಂಬರ್ 20: ಭಾರಿ ಮಳೆಯ ಆರ್ಭಟಕ್ಕೆ ಅಕ್ಷರಶಃ ಕೃಷ್ಣನಗರಿ ಉಡುಪಿ ತತ್ತರಿಸಿ ಹೋಗಿದೆ. ಕಳೆದ 24 ಗಂಟೆಗಳಿಂದ ಸತತ ಮಳೆಯಾಗುತ್ತಿದ್ದು, ಉಡುಪಿ ನಗರದ ಹಲವು ಬೀದಿಗಳು ಜಲಾವೃತಗೊಂಡಿವೆ.
ಶನಿವಾರದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಉಡುಪಿ ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಜಲಾವೃತಗೊಂಡ ಮನೆಗಳಲ್ಲಿದ್ದವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ.
ಮಠದ ಕೆರೆ, ಬೈಲಕೆರೆ, ನಿಟ್ಟೂರು, ಕೊಡಂಕೂರು, ಚಿಟ್ಪಾಡಿ ಪ್ರದೇಶದಲ್ಲಿ ಕೃತಕ ನೆರೆ ಉಂಟಾಗಿದ್ದು, 4 ದಶಕಗಳ ಬಳಿಕ ಉಡುಪಿಯಲ್ಲಿ ಇದೇ ಮೊದಲ ಬಾರಿಗೆ ಈ ರೀತಿ ನೆರೆ ಉಂಟಾಗಿದೆ.

ತಗ್ಗು ಪ್ರದೇಶದಲ್ಲಿ ಸಿಕ್ಕಿಬಿದ್ದವರನ್ನು, ಅಗ್ನಿಶಾಮಕ ದಳದ ಸಿಬ್ಬಂದಿಗಳು ದೋಣಿಯಲ್ಲಿ ರಕ್ಷಿಸಿ ಸ್ಥಳಾಂತರ ಮಾಡಿದ್ದಾರೆ. ಉಡುಪಿ ನಗರದ ಹಲವು ಅಂಗಡಿ, ಗೋದಾಮುಗಳಿಗೆ ನೀರು ನುಗ್ಗಿದ ಪರಿಣಾಮ ಲಕ್ಷಾಂತರ ರುಪಾಯಿ ನಷ್ಟ ಸಂಭವಿಸಿದೆ.

ಇನ್ನು ಉಡುಪಿ ಕೃಷ್ಣಮಠದ ಪಾರ್ಕಿಂಗ್ ಆವರಣ ಕೂಡಾ ಸಂಪೂರ್ಣ ಜಲಾವೃತಗೊಂಡಿದ್ದು, ಜಿಲ್ಲೆಯ ವಿವಿಧ ಕಡೆಗಳಲ್ಲಿ ಇದೇ ರೀತಿ ಕೃತಕ ನೆರೆ ಉಂಟಾದ ಬಗ್ಗೆ ವರದಿಗಳಾಗುತ್ತಿವೆ.

ಇದೇ ಮೊದಲ ಬಾರಿ ಎಂಬಂತೆ ಉಡುಪಿ-ಮಣಿಪಾಲದ ರಾಜ್ಯ ಹೆದ್ದಾರಿಯ ಹಲವೆಡೆ ನೀರು ನಿಂತಿದ್ದು, ಮುಂಜಾನೆ ಹೊತ್ತಿಗೆ ಉಡುಪಿ-ಮಣಿಪಾಲ ರಸ್ತೆ ಸಂಪರ್ಕ ಕಡಿತಗೊಂಡಿದೆ. ಮಳೆಯ ಹಿನ್ನೆಲೆಯಲ್ಲಿ ಭಾನುವಾರ ಕೂಡಾ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ ಅತ್ಯಧಿಕ ಮಳೆ 449 ಮಿ.ಮೀನಷ್ಟು ಉಡುಪಿ ಜಿಲ್ಲೆಯ ಐರೋಡಿ ಎಂಬಲ್ಲಿ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಉತ್ತಮ ಮಳೆ ಹಾಗೂ ಚದುರಿದಂತೆ ಅಲ್ಲಲ್ಲಿ ಅಧಿಕದಿಂದ ಅತ್ಯಧಿಕ ಭಾರಿ ಮಳೆ. ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಅಧಿಕ ಮಳೆಯಾಗುವ ಸಾಧ್ಯತೆಯಿದೆ.












Click it and Unblock the Notifications