ಉಡುಪಿಯಲ್ಲಿ ಪ್ರಾಮಾಣಿಕ ಅಧಿಕಾರಿಯ ವರ್ಗಾವಣೆ: ಆಕ್ರೋಶ
ಉಡುಪಿ, ಏಪ್ರಿಲ್ 30: ಮರಗಳ್ಳ ರಾಜಕಾರಣಿಗಳ ವಿರುದ್ಧ ಕಾನೂನು ಕ್ರಮ ಜರಗಿಸಿದ್ದ ಹಾಗೂ ಶಾಸಕರ ಮಾತಿಗೆ ಕಾನೂನು ಮೀರಿ ಹೋಗಲ್ಲ ಎಂಬ ದಿಟ್ಟ ಪ್ರತ್ಯುತ್ತರ ನೀಡಿದ್ದ ಹೆಬ್ರಿ ವಲಯ ಅರಣ್ಯಾಧಿಕಾರಿ ವಿ.ಮುನಿರಾಜು ಅವರನ್ನು ಕೇವಲ ಆರು ತಿಂಗಳಲ್ಲಿಯೇ ವರ್ಗಾವಣೆ ಮಾಡಲಾಗಿದೆ.
ಇದರ ಹಿಂದೆ ರಾಜಕೀಯ ಪ್ರಭಾವ ಇರುವುದಾಗಿ ಆರೋಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ಸ್ಥಳೀಯರು ತೀವ್ರ ಆಕ್ರೋಶಗಳು ವ್ಯಕ್ತಪಡಿಸುತ್ತಿದ್ದಾರೆ. ಆರು ತಿಂಗಳ ಹಿಂದೆ ಹೆಬ್ರಿ ವಲಯ ಅರಣ್ಯಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದ ವಿ.ಮುನಿರಾಜು ಅವರನ್ನು ಏ.27 ರಂದು ರಾಜ್ಯ ಸರಕಾರ ಬಂಡೀಪುರ ವನ್ಯಜೀವಿ ವಲಯಕ್ಕೆ ವರ್ಗಾವಣೆಗೊಳಿಸಿ ಆದೇಶ ನೀಡಿದೆ.
ರಾಜ್ಯಾದ್ಯಂತ ಜಾರಿಯಲ್ಲಿರುವ ಲಾಕ್ಡೌನ್ ಮುಕ್ತಾಯಗೊಂಡ ನಂತರ ಈ ಆದೇಶ ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಅಧಿಕಾರ ಸ್ವೀಕರಿಸಿದ ಬಳಿಕ ಇವರು, ಬೇಳಂಜೆ ಗ್ರಾಮದ ಕೊಪ್ಪರಗುಂಡಿ ಎಂಬಲ್ಲಿ ಮಣ್ಣಿನ ಅಡಿಯಲ್ಲಿ ಹೂತಿಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ 87 ಮರದ ದಿಮ್ಮಿಗಳನ್ನು ವಶಪಡಿಸಿಕೊಂಡಿದ್ದರು.
ಕಾರ್ಕಳ ತಾ.ಪಂ ಬಿಜೆಪಿ ಸದಸ್ಯ ಅಮೃತ್ ಕುಮಾರ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಿದ್ದರು. ಈ ಮೂಲಕ ಇವರು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರರಾಗಿದ್ದರು.