ಉಡುಪಿಯಲ್ಲಿ ರಕ್ಷಣಾ ಕಾರ್ಯಕ್ಕೆ ಹೆಲಿಕಾಪ್ಟರ್ ಬಳಕೆ: ಸಂಸದೆ ಶೋಭಾ ಕರಂದ್ಲಾಜೆ
ಉಡುಪಿ, ಸೆಪ್ಟೆಂಬರ್ 20: ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಜಿಲ್ಲೆಯಾದ್ಯಂತ ಹಲವಾರು ತಗ್ಗು ಪ್ರದೇಶಗಳ ಮನೆಗಳು, ಆಸ್ತಿ-ಪಾಸ್ತಿ ಮುಳುಗಡೆಯಾಗಿದ್ದು, ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಸಂಸದೆ ಶೋಭಾ ಕರಂದ್ಲಾಜೆ ಚರ್ಚಿಸಿ ಅಗತ್ಯದ ಪರಿಹಾರ ಕಾರ್ಯಗಳನ್ನು ತಕ್ಷಣ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಉಡುಪಿಯಲ್ಲಿ ಪ್ರವಾಹದ ಭೀತಿಯಿರುವ ಕಾರಣದಿಂದ ಇನ್ನೂ ಹೆಚ್ಚಿನ ವಿಪತ್ತು ಪರಿಹಾರ ಕಾರ್ಯಪಡೆಯನ್ನು ಕಳಿಸಿಕೊಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯ ಭಾಸ್ಕರ್ ಅವರಿಗೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಕೇಳಿಕೊಂಡಿದ್ದಾರೆ.
ಈಗಾಗಲೇ ಮಂಗಳೂರಿನಿಂದ ಒಂದು NDRF ತಂಡವನ್ನು ಕಳುಹಿಸಿ ಕೊಡಲಾಗಿದ್ದು, ಈ ತಂಡ ಅಪಾಯದ ಪ್ರದೇಶದಲ್ಲಿರುವ ಜನರ ಸಹಾಯ ಹಾಗೂ ರಕ್ಷಣಾ ಕಾರ್ಯದಲ್ಲಿ ತೊಡಗಿದೆ.

ಇನ್ನೊಂದು 20 ಜನರನ್ನೊಳಗೊಂಡ NDRF ತಂಡವನ್ನು ಮೈಸೂರಿನಿಂದ ಈಗಾಗಲೇ ಕಳುಹಿಸಿಕೊಡಲಾಗಿದೆ. ಸಂಸದರ ಬೇಡಿಕೆಯ ಮೇರೆಗೆ ರಕ್ಷಣಾ ಕಾರ್ಯಕ್ಕೆ ಹೆಲಿಕಾಪ್ಟರ್ ಗಳು ಕೂಡಾ ಕೆಲವೇ ಗಂಟೆಗಳಲ್ಲಿ ಕಳುಹಿಸಿಕೊಡಲಾಗುತ್ತಿದೆ.
ಬೆಂಗಳೂರು ಹಾಗೂ ಕಾರವಾರ ಕೇಂದ್ರದಿಂದ ಹೆಲಿಕಾಪ್ಟರ್ ಗಳನ್ನು ರಕ್ಷಣಾ ಕಾರ್ಯಕ್ಕಾಗಿ ಕಳುಹಿಸಿ ಕಳುಹಿಸಿಕೊಡುವುದಾಗಿ ಮುಖ್ಯಕಾರ್ಯದರ್ಶಿ ಟಿ.ಎಂ ವಿಜಯ ಭಾಸ್ಕರ್ ಅವರು ಹೇಳಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಈ ಹೆಲಿಕಾಪ್ಟರ್ ಗಳು ಕೆಲವೇ ಗಂಟೆಗಳಲ್ಲಿ ಉಡುಪಿಯಲ್ಲಿ ರಕ್ಷಣೆ ಹಾಗೂ ಪರಿಹಾರ ಕಾರ್ಯದಲ್ಲಿ ಭಾಗಿಯಗಲಿವೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು.












Click it and Unblock the Notifications