ಮಕ್ಕಳ ಸಹಾಯವಾಣಿ ಮಾಹಿತಿ ನೀಡಲು ಹೆಪ್ಸಿಬಾ ಸೂಚನೆ
ಉಡುಪಿ, ಜೂನ್ 18: ದೌರ್ಜನ್ಯದಿಂದ ಮಕ್ಕಳನ್ನು ರಕ್ಷಿಸುವ ಮತ್ತು ಮಕ್ಕಳ ಸಹಾಯವಾಣಿ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಮಾಹಿತಿಯನ್ನು 10 ದಿನಗಳೊಳಗೆ ನೀಡುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಕ್ಕಳ ಸಹಾಯವಾಣಿಯ ಸಲಹಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಮಕ್ಕಳ ಸಹಾಯವಾಣಿ ಕುರಿತು ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸುವ ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಗೋಡೆ ಬರಹ ಹಾಕುವುದು, ಆಶಾ ಕಾರ್ಯಕರ್ತೆಯರಿಂದ ಜಾಗೃತಿ ಮೂಡಿಸುವುದು, ಸಾರಿಗೆ ಸಂಪರ್ಕ ವ್ಯವಸ್ಥೆಗಳಾದ ಆಟೋ ರಿಕ್ಷಾ, ಬಸ್ ಗಳಲ್ಲಿ ಮಕ್ಕಳ ಸಹಾಯವಾಣಿಯ ಜಾಗೃತಿ ಮೂಡಿಸುವ ಪೋಸ್ಟರ್ ಗಳನ್ನು ಅಂಟಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬಹುದು ಎಂದರು.
ಎಸಿ ಕಾರು ಬಿಟ್ಟು ಬಸ್ ಏರಿ ಕಚೇರಿಗೆ ಬಂದ ಉಡುಪಿ ಜಿಲ್ಲಾಧಿಕಾರಿ
ಪ್ರತೀ ತಿಂಗಳು ಗ್ರಾಮ ಮಟ್ಟದಲ್ಲಿ ಮಕ್ಕಳ ಸಭೆಯನ್ನು ಮಾಡಿ, ಸಹಾಯವಾಣಿಗೆ ಬಂದಂತಹ ಕರೆಗಳ ಬಗ್ಗೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚೆ ಮಾಡಬೇಕು. ಬಳಿಕ ಈ ಬಗ್ಗೆ ತಾಲ್ಲೂಕು ಮಟ್ಟದಲ್ಲಿ ನಡೆಯುವ ಸಭೆಯಲ್ಲಿ ಚರ್ಚಿಸಬೇಕು ಎಂದರು. ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳು ಜೊತೆಯಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಕರೆ ನೀಡಿದರು.
ಆರೋಗ್ಯ ಇಲಾಖೆ ಮತ್ತು ಸಂಬಂಧಿಸಿದ ಇತರ ಇಲಾಖೆಯ ಕಾರ್ಯಕ್ರಮಗಳಲ್ಲಿ ಮಕ್ಕಳ ಸಹಾಯವಾಣಿಯ ಲೋಗೋ ಬಳಸಬೇಕು. ಗ್ರಾಮ ಮಟ್ಟದಲ್ಲಿ ಒಂದೊಂದು ಪ್ರದೇಶದಲ್ಲಿ ಓರ್ವ ಮಕ್ಕಳ ನಾಯಕನನ್ನು ಗುರುತಿಸಿ ಮಕ್ಕಳ ಸಹಾಯವಾಣಿಯ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಆಗಬೇಕು ಎಂದು ಹೇಳಿದರು.
ಮತ್ತೊಂದು ಮಹತ್ವದ ನಿರ್ಧಾರ ಘೋಷಿಸಿದ ಉಡುಪಿ ಜಿಲ್ಲಾಧಿಕಾರಿ
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಮಾತನಾಡಿ, ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಯಾವುದೇ ಪ್ರಕರಣದಲ್ಲಿ ಮಕ್ಕಳ ಹೇಳಿಕೆಗೆ ಆದ್ಯತೆ ನೀಡಿ ಸಮಗ್ರ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಆಳೆತ್ತರದ ರಕ್ಕಸ ಅಲೆಗಳ ನಡುವೆ ಪ್ರವಾಸಿಗನ ರಕ್ಷಣೆ
ಉಡುಪಿ ಜಿಲ್ಲಾ ಸಹಾಯವಾಣಿಯ ಕಾರ್ಯಕ್ಷಮತೆ ಕೋ-ಆರ್ಡಿನೇಟರ್ ಅರವಿಂದ್ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಮಾರ್ಚ್ ನಿಂದ ಈವರೆಗೆ 22 ಕರೆಗಳು ಬಂದಿದ್ದು, ಎಲ್ಲಾ ಕರೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿದ್ದೇವೆ ಎಂದರು. ಶಾಲಾ ಕಾಲೇಜುಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಬಾಲ್ಯ ವಿವಾಹ, ಬಾಲ ಕಾರ್ಮಿಕ ಹಾಗೂ ಇನ್ನಿತರ ಸಮಸ್ಯೆಗಳ ಕುರಿತು ಮಾಹಿತಿ ಕಾರ್ಯಗಾರವನ್ನು ನಡೆಸಬೇಕು, ಮಕ್ಕಳ ರಕ್ಷಣೆ ಮತ್ತು ಪೋಷಣೆಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳು ಅಗತ್ಯ ಸಹಕಾರ ನೀಡಬೇಕು. ಸಂಬಂಧಪಟ್ಟ ಇಲಾಖೆಗಳು ಪ್ರತೀ ತಿಂಗಳಿಗೊಮ್ಮೆ ಕಡ್ಡಾಯವಾಗಿ ಭಿಕ್ಷಾಟನೆಯಲ್ಲಿ ನಿರತರಾದವರ ರಕ್ಷಣಾ ಕಾರ್ಯಚರಣೆ ಹಮ್ಮಿಕೊಳ್ಳಬೇಕು ಎಂದು ಮನವಿ ಮಾಡಿಕೊಂಡರು.