ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ: ಗೃಹ ಸಚಿವರು ಹೇಳುವುದೇನು?
ಉಡುಪಿ, ಆಗಸ್ಟ್ 12: ಬೆಂಗಳೂರಿನ ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಮತ್ತು ದೇವರ ಜೀವನಹಳ್ಳಿ(ಡಿ.ಜೆ.ಹಳ್ಳಿ)ಯಲ್ಲಿ ನಡೆದ ದಾಂಧಲೆ ಕುರಿತು ಉಡುಪಿಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
Recommended Video
"ಡಿಜೆ ಹಳ್ಳಿ ವ್ಯಾಪ್ತಿಯಲ್ಲಿ ನಡೆದ ಪುಂಡಾಟಿಕೆ ಗಮನಕ್ಕೆ ಬಂದಿದೆ. ಬೆಂಕಿ ಹಚ್ಚುವುದು, ಗಲಾಟೆ ಮಾಡುವುದು ಕಾನೂನು ಬಾಹಿರ ಕೃತ್ಯ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಈ ವಿಚಾರವಾಗಿ ಮಾತನಾಡಿದ್ದೇನೆ" ಎಂದು ಉಡುಪಿ ಪ್ರವಾಸದಲ್ಲಿರುವ ಗೃಹ ಸಚಿವರು ಐಬಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
"ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು"
ತಪ್ಪು ಮಾಡಿದವರು ಎಷ್ಟೇ ದೊಡ್ಡವರಾಗಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು. ಘಟನೆಯ ಬಗ್ಗೆ ಮುಖ್ಯಮಂತ್ರಿಗಳು ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಲಿದ್ದಾರೆ. ನಾನು ಮುಖ್ಯಮಂತ್ರಿಗಳ ಜೊತೆ ಫೋನ್ ನಲ್ಲಿ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ತಿಳಿಸಿದರು.
ಬೆಂಗಳೂರು: ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ದಾಂಧಲೆಯ ಹಿಂದು-ಮುಂದು
"ಕೃತ್ಯಕ್ಕೆ ಪ್ರಚೋದನೆ ಕೊಡುವ ಕೆಲಸ"
ಕೆಜಿ ಹಳ್ಳಿ ಪೊಲೀಸ್ ಸ್ಟೇಷನ್ ನಲ್ಲಿ ಘಟನೆಯ ಎಲ್ಲಾ ರೆಕಾರ್ಡ್ ಗಳಿವೆ. ಸಿಸಿಟಿವಿ ಇದೆ, ಕೃತ್ಯ ಎಸಗಿದ ಎಲ್ಲರ ಮಾಹಿತಿ ಕಲೆ ಹಾಕಲಾಗುತ್ತಿದೆ. ಫೇಸ್ ಬುಕ್ ನಲ್ಲಿ ಕರೆಕೊಟ್ಟು ಪ್ಲಾನ್ ಮಾಡಿ ದಾಳಿ ಮಾಡಿದ್ದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸಲು ಷಡ್ಯಂತ್ರ ನಡೆದಿದೆ. ಹಬ್ಬ-ಹರಿದಿನಗಳು ಶಾಂತವಾಗಿ ನಡೆಯುತ್ತಿರುವಾಗ ಸಮಾಜಘಾತುಕ ಶಕ್ತಿಗಳ ಕೃತ್ಯಕ್ಕೆ ಪ್ರಚೋದನೆ ಕೊಡುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕೊನೆಯ ಅಸ್ತ್ರವಾಗಿ ಗೋಲಿಬಾರ್
ಗಲಭೆಯನ್ನು ಹತೋಟಿಗೆ ತರಲು ಹಲವು ಕ್ರಮಗಳನ್ನು ಕೈಗೊಳ್ಳಲಾಯಿತು. ಕೊನೆಯ ಅಸ್ತ್ರವಾಗಿ ಗೋಲಿಬಾರ್ ಮಾಡಲಾಗಿದೆ. ಪೊಲೀಸರಿಗೆ ಉದ್ರಿಕ್ತ ಗುಂಪು ಕಲ್ಲು ತೂರಾಟ ಮಾಡಿದೆ. ಹಲವಾರು ಪೊಲೀಸರ ತಲೆಗೆ ಗಾಯ ಆಗಿದೆ. ಈಗಾಗಲೇ 110 ಜನರನ್ನು ವಶಕ್ಕೆ ಪಡೆದಿದ್ದೇವೆ. ಶಾಂತಿ-ಸುವ್ಯವಸ್ಥೆ ಕಾಪಾಡುವುದು ನಮ್ಮ ಮೊದಲ ಆದ್ಯತೆ ಎಂದು ಹೇಳಿದ್ದಾರೆ. ಬೆಂಗಳೂರು ತಲುಪಿದ ತಕ್ಷಣ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಮಾಡಿ ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಾಟೆ: ಪೊಲೀಸರ ಗುಂಡಿಗೆ ಮೂವರು ಬಲಿ
ಹೈದರಾಬಾದ್ ಮತ್ತು ಚೆನ್ನೈನಿಂದ ಸಿಆರ್ ಪಿಎಫ್ ಸಿಬ್ಬಂದಿ
ಹೈದರಾಬಾದ್ ಮತ್ತು ಚೆನ್ನೈನಿಂದ 6 ಸಿಆರ್ ಪಿಎಫ್ ಕಂಪನಿ ಸಿಬ್ಬಂದಿಯನ್ನು ಬೆಂಗಳೂರಿಗೆ ತರಿಸಲಾಗುತ್ತಿದೆ. ಸೂಕ್ಷ್ಮ ಪ್ರದೇಶದಲ್ಲಿ ಸಿಆರ್ ಪಿ ಎಫ್ ನಿಯೋಜನೆ ಮಾಡಲಾಗಿದೆ. rapid ಆಕ್ಷನ್ ಫೋರ್ಸ್, ಗರುಡ ಫೋರ್ಸ್ ಕೂಡ ಸ್ಥಳದಲ್ಲಿ ಯೋಜನೆಯಾಗಿದೆ. ಹೆಚ್ಚಿನ ಗಲಭೆಕೋರರ ಬಂಧನ ಆಗಬೇಕಾಗಿದೆ. ಘಟನೆಯ ಹಿಂದೆ ಯಾರಿದ್ದಾರೆ ಅನ್ನುವ ಬಗ್ಗೆ ಬಗ್ಗೆ ಕೂಲಂಕುಷ ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.