ಜೆಡಿಎಸ್ ಸೇರುವ ಕುರಿತು ಸ್ಪಷ್ಟನೆ ಕೊಟ್ಟ ಜಯಪ್ರಕಾಶ ಹೆಗ್ಡೆ
ಉಡುಪಿ, ಫೆಬ್ರವರಿ 21 : 'ಈ ಬಾರಿ ಬಿಜೆಪಿಯಿಂದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿರುವುದು ಹೌದು. ಅಂತಿಮವಾಗಿ ಟಿಕೆಟ್ ನೀಡುವುದು ಹೈಕಮಾಂಡ್ಗೆ ಬಿಟ್ಟ ವಿಚಾರ. ಬಿಜೆಪಿ ಟಿಕೆಟ್ ಸಿಕ್ಕರೆ ಮಾತ್ರ ಸ್ಪರ್ಧೆ ಮಾಡುತ್ತೇನೆ' ಎಂದು ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ ಹೇಳಿದರು.
'ಜಯಪ್ರಕಾಶ ಹೆಗ್ಡೆ ಹಿರಿಯರು, ಹಿಂದೆ ಜೆಡಿಎಸ್ ಪಕ್ಷದಲ್ಲಿ ಇದ್ದವರು. ಮರಳಿ ಪಕ್ಷಕ್ಕೆ ಬರುವುದಾದರೆ ಸ್ವಾಗತ. ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು' ಎಂದು ಉಡುಪಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಯೋಗೀಶ್ ಶೆಟ್ಟಿ ಹೇಳಿದ್ದರು.
ಈ ಹೇಳಿಕೆ ಬಳಿಕ ಜಿಲ್ಲಾ ರಾಜಕಾರಣದಲ್ಲಿ ಭಾರಿ ಚರ್ಚೆ ಆರಂಭವಾಗಿತ್ತು. ಜಯಪ್ರಕಾಶ ಹೆಗ್ಡೆ ಅವರು ಬಿಜೆಪಿ ತೊರೆದು ಜೆಡಿಎಸ್ ಸೇರಲಿದ್ದಾರೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ 2019ರ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎಂಬ ಚರ್ಚೆ ಆರಂಭವಾಗಿತ್ತು.
ಮಾಧ್ಯಮಗಳ ಜೊತೆ ಮಾತನಾಡಿದ ಜಯಪ್ರಕಾಶ ಹೆಗ್ಡೆ ಅವರು ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. 'ಇವೆಲ್ಲ ಕಲ್ಪಿತ ಸುದ್ದಿಗಳಷ್ಟೇ. ಹಿಂದೆಯೂ ಇಂತಹ ಸುದ್ದಿ ಮಾಧ್ಯಮಗಳಲ್ಲಿ ತೇಲಿ ಬಿಡಲಾಗಿತ್ತು' ಎಂದು ಹೇಳಿದ್ದಾರೆ.

ಜಯಪ್ರಕಾಶ ಹೆಗ್ಡೆ ಹೇಳಿದ್ದೇನು?
'ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಕ್ಕರೆ ಮಾತ್ರ ಸ್ಪರ್ಧೆ ಮಾಡುತ್ತೇನೆ. ಇಲ್ಲವಾದಲ್ಲಿ ಪಕ್ಷಕ್ಕೆ ದುಡಿಯುತ್ತೇನೆ. ಈ ಬಾರಿ ಬಿಜೆಪಿಯಿಂದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿರುವುದು ಹೌದು' ಎಂದು ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ ಹೇಳಿದ್ದಾರೆ.

ಪ್ರಚಾರ ಮಾಡುತ್ತಿದ್ದಾರೆ
'ಸಾಮಾಜಿಕ ಜಾಲತಾಣದಲ್ಲಿ ಈ ಬಾರಿ ನನಗೆ ಟಿಕೆಟ್ ನೀಡಬೇಕು ಎಂದು ಅಭಿಮಾನಿಗಳು ಪ್ರಚಾರ ಮಾಡುತ್ತಿದ್ದಾರೆ. ಅಂತಿಮವಾಗಿ ಟಿಕೆಟ್ ನೀಡುವುದು ಹೈಕಮಾಂಡ್ಗೆ ಬಿಟ್ಟ ವಿಚಾರ' ಎಂದು ಜಯಪ್ರಕಾಶ ಹೆಗ್ಡೆ ಹೇಳಿದರು.

ಯಾರೂ ಸಂಪರ್ಕ ಮಾಡಿಲ್ಲ
'ಜೆಡಿಎಸ್ ಅಭ್ಯರ್ಥಿಯಾಗಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸುವಂತೆ ಯಾರೂ ಸಂಪರ್ಕ ಮಾಡಿಲ್ಲ. ಇವೆಲ್ಲ ಕಲ್ಪಿತ ಸುದ್ದಿಗಳು ಮಾತ್ರ. ಹಿಂದಿನಿಂದಲೂ ಈ ರೀತಿಯ ಸುದ್ದಿಗಳನ್ನು ಮಾಧ್ಯಮದಲ್ಲಿ ತೇಲಿಬಿಡಲಾಗುತ್ತಿದೆ' ಎಂದು ಜಯಪ್ರಕಾಶ ಹೆಗ್ಡೆ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಶೋಭಾ ಕರಂದ್ಲಾಜೆ ಹಾಲಿ ಸಂಸದರು
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಹಾಲಿ ಸಂಸದರು ಬಿಜೆಪಿಯ ಶೋಭಾ ಕರಂದ್ಲಾಜೆ. ಆದರೆ, ಈ ಬಾರಿಯ ಚುನಾವಣೆಯಲ್ಲಿ ಅವರು ಸ್ಪರ್ಧೆ ಮಾಡುವುದಿಲ್ಲ. ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎಂಬ ಸುದ್ದಿಗಳು ಹಬ್ಬಿವೆ. ಆದರೆ, ಈ ಬಗ್ಗೆ ಅಂತಿಮವಾಗಿ ಯಾವುದೇ ತೀರ್ಮಾನ ಆಗಿಲ್ಲ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರ
ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಬಿಜೆಪಿಯ ವಶದಲ್ಲಿದೆ. 2012ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಜಯಪ್ರಕಾಶ ಹೆಗ್ಡೆ ಅವರು ಕಾಂಗ್ರೆಸ್ನಿಂದ ಗೆಲುವು ಸಾಧಿಸಿದ್ದರು. 2014ರ ಚುನಾವಣೆಯಲ್ಲಿ ಪುನಃ ಕ್ಷೇತ್ರ ಬಿಜೆಪಿ ವಶವಾಗಿದೆ.












Click it and Unblock the Notifications