ಮಹಿಳಾ ದೌರ್ಜನ್ಯ ತಡೆಯಲು ಎಲ್ಲ ಸಂಸ್ಥೆಗಳಲ್ಲಿ ಆಂತರಿಕ ದೂರು ಸಮಿತಿ
ಉಡುಪಿ, ಅಕ್ಟೋಬರ್ 23: ಮಹಿಳೆಯರು ಮತ್ತು ಮಕ್ಕಳನ್ನು ವಿದ್ಯಾವಂತರನ್ನಾಗಿಸಿ, ಸ್ವ-ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿಗಳನ್ನಾಗಿಸಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲ ಕುಂದರ್ ಹೇಳಿದರು.
ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲ ಕುಂದರ್ ಮಾತನಾಡಿದರು.
ಉಡುಪಿ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೆ: ಎರಡು ದಶಕದ ಕನಸು ನನಸು
ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು, ಸರ್ಕಾರ ಮಹಿಳೆಯರು ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳು ಪ್ರತಿಶತ 100 ರಷ್ಟು ಅನುಷ್ಠಾನವಾಗಬೇಕು ಎಂದು ಶ್ಯಾಮಲ ಕುಂದರ್ ತಿಳಿಸಿದರು.
ದೌರ್ಜನ್ಯಕ್ಕೆ ಒಳಗಾದ ಮಹಿಳೆ ಮತ್ತು ಮಕ್ಕಳು ತಮಗಾದ ಅನ್ಯಾಯದ ಬಗ್ಗೆ ದೂರನ್ನು ಯಾವ ಪ್ರಾಧಿಕಾರಕ್ಕೆ ನೀಡಬೇಕೆಂಬ ಅರಿವನ್ನು ಮೂಡಿಸಬೇಕು, ಅವರಿಗೆ ಸಾಂತ್ವನ ಹೇಳುವುದರ ಜೊತೆಗೆ ಧೈರ್ಯ ತುಂಬಿ ಕಾನೂನಿನ ನೆರವನ್ನು ಒದಗಿಸಬೇಕೆಂದು ಸಹ ಹೇಳಿದರು.
ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಮಹಿಳೆಯರ ಮೇಲಾಗುವ ದೌರ್ಜನ್ಯ ತಡೆಯಲು ಎಲ್ಲಾ ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಅಂತರಿಕ ದೂರು ಸಮಿತಿಗಳನ್ನು ರಚಿಸಬೇಕು, ಈ ಬಗ್ಗೆ ಮಹಿಳೆಯರಿಗೆ ಮಾಹಿತಿ ನೀಡಬೇಕು ಎಂದರು.
ಲಾಕ್ ಡೌನ್ ಅವಧಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಮಹಿಳೆ ಮತ್ತು ಮಕ್ಕಳು, ವಲಸೆ ಮಹಿಳೆಯರು ಮತ್ತು ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಜಿಲ್ಲಾಡಳಿತ ಕೈಗೊಂಡ ಕ್ರಮಗಳನ್ನು ಶ್ಲಾಘಿಸಿದರು.
Recommended Video
ಸೈಬರ್ ಕ್ರೈಮ್ ಕುರಿತಂತೆ ಮಹಿಳೆಯರಿಗೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಅರಿವು ಮೂಡಿಸಬೇಕು ಮತ್ತು ಈ ರೀತಿಯ ಅಪರಾಧಗಳಿಗೆ ಬಲಿಯಾಗದಂತೆ ಹೇಗೆ ಪಾರಾಗಬೇಕು ಎಂಬ ಬಗ್ಗೆ ಕಿರುಪುಸ್ತಕ ಮುದ್ರಿಸಿ ವಿತರಿಸಬೇಕು, ಮಾದಕ ವಸ್ತುಗಳಿಗೆ ವಿದ್ಯಾರ್ಥಿನಿಯರು ಬಲಿಯಾಗದಂತೆ ಅರಿವು ಕಾರ್ಯಕ್ರಮಗಳು ಮತ್ತು ಪೊಲೀಸ್ ಇಲಾಖೆ ವತಿಯಿಂದ ಹೆಚ್ಚಿನ ತಪಾಸಣೆ ನಡೆಸಬೇಕೆಂದು ಶ್ಯಾಮಲ ಕುಂದರ್ ಸೂಚಿಸಿದರು.