ಉಡುಪಿ-ಚಿಕ್ಕಮಗಳೂರು : ಪ್ರಮೋದ್ ಮಧ್ವರಾಜ್ಗೆ ಜೆಡಿಎಸ್ ಬಿಫಾರಂ
ಉಡುಪಿ, ಮಾರ್ಚ್ 21 : ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಜೆಡಿಎಸ್-ಕಾಂಗ್ರೆಸ್ ಒಮ್ಮತದ ಅಭ್ಯರ್ಥಿ ಯಾರು? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಮಾಜಿ ಸಚಿವ, ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಅವರಿಗೆ ಜೆಡಿಎಸ್ ಬಿಫಾರಂ ನೀಡಲಾಗಿದೆ.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಬಿಫಾರಂ ನೀಡಿದ್ದಾರೆ. ಶುಕ್ರವಾರ ಅಥವ ಸೋಮವಾರ ಅವರು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ನಾಮಪತ್ರವನ್ನು ಸಲ್ಲಿಸಲಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆಯನ್ನು ಎದುರಿಸುತ್ತಿವೆ. ಜೆಡಿಎಸ್ಗೆ 8 ಕ್ಷೇತ್ರಗಳನ್ನು ಕಾಂಗ್ರೆಸ್ ಬಿಟ್ಟುಕೊಟ್ಟಿತ್ತು. ಈ ಕ್ಷೇತ್ರಗಳ ಪೈಕಿ ಉಡುಪಿ-ಚಿಕ್ಕಮಗಳೂರು ಸಹ ಸೇರಿತ್ತು. ಆದರೆ, ಅಭ್ಯರ್ಥಿ ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿತ್ತು.
ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಬಿಜೆಪಿಯ ಭದ್ರಕೋಟೆ. ಶೋಭಾ ಕರಂದ್ಲಾಜೆ ಅವರು ಕ್ಷೇತ್ರದ ಹಾಲಿ ಸಂಸದರು. ಈ ಬಾರಿಯೂ ಅವರಿಗೆ ಟಿಕೆಟ್ ಸಿಗುವ ನಿರೀಕ್ಷೆ ಇದೆ. ಎದುರಾಳಿಯಾಗಿ ಪ್ರಮೋದ್ ಮಧ್ವರಾಜ್ ಕಣಕ್ಕಿಳಿಯಲಿದ್ದಾರೆ.

2018ರ ಚುನಾವಣೆ ಸೋಲು
2013ರ ವಿಧಾನಸಭೆ ಚುನಾವಣೆಯಲ್ಲಿ ಉಡುಪಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಪ್ರಮೋದ್ ಮಧ್ವರಾಜ್ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದರು. ಆದರೆ, 2018ರ ವಿಧಾನಸಭೆ ಚುನಾವಣೆಯಲ್ಲಿ 72,902 ಮತಗಳನ್ನು ಪಡೆದು ಬಿಜೆಪಿಯ ಕೆ.ರಘುಪತಿ ಭಟ್ ವಿರುದ್ಧ ಸೋಲು ಅನುಭವಿಸಿದ್ದರು.

ಮೈತ್ರಿಗೆ ದೊಡ್ಡ ಸವಾಲು
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ದೊಡ್ಡ ಸವಾಲು ಇದೆ. ಏಕೆಂದರೆ ಶೃಂಗೇರಿ ಹೊರತುಪಡಿಸಿದರೆ ಬೇರೆ ಯಾವ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಅಥವ ಜೆಡಿಎಸ್ ಶಾಸಕರು ಇಲ್ಲ. ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ.

ಅಭ್ಯರ್ಥಿಗಳ ಕೊರತೆ
ಕಾಂಗ್ರೆಸ್-ಜೆಡಿಎಸ್ ಮೈತ್ರಿಯಂತೆ ಕಾಂಗ್ರೆಸ್ ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿತು. ಆದರೆ, ಅಲ್ಲಿ ಅಭ್ಯರ್ಥಿಗಳ ಕೊರತೆಯನ್ನು ಪಕ್ಷ ಎದುರಿಸುತ್ತಿತ್ತು. ಆದ್ದರಿಂದ, ಕಾಂಗ್ರೆಸ್ನ ಪ್ರಮೋದ್ ಮಧ್ವರಾಜ್ ಅವರಿಗೆ ಟಿಕೆಟ್ ನೀಡಲಾಗಿದೆ.

ಸ್ಪರ್ಧಿಸಲು ಸಿದ್ಧ ಎಂದಿದ್ದರು
'ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕಾಂಗ್ರೆಸ್ ಅಥವ ಜೆಡಿಎಸ್ ಚಿನ್ಹೆಯಡಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲು ಸಿದ್ಧ' ಎಂದು ಪ್ರಮೋದ್ ಮಧ್ವರಾಜ್ ಹೇಳಿದ್ದರು. ಈಗ ಬಿಫಾರಂ ನೀಡಲಾಗಿದ್ದು, ಮಾ.25ರಂದು ನಾಮಪತ್ರ ಸಲ್ಲಿಸಲಿದ್ದಾರೆ.












Click it and Unblock the Notifications