ಉಡುಪಿ; ವಾರಾಂತ್ಯ ಕರ್ಫ್ಯೂ ತೆರವು, ಸೆ. 10ಕ್ಕೆ ತೀರ್ಮಾನ
ಉಡುಪಿ, ಸೆಪ್ಟೆಂಬರ್ 09; ಕರ್ನಾಟಕ ಸರ್ಕಾರ ಮೂರು ಜಿಲ್ಲೆಗಳಲ್ಲಿ ಜಾರಿಯಲ್ಲಿದ್ದ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸಲು ಆದೇಶ ನೀಡಿದೆ. ಉಡುಪಿ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ತೆರವುಗೊಳಿಸುವ ಕುರಿತು ಜಿಲ್ಲಾಡಳಿತ ಶುಕ್ರವಾರ ತೀರ್ಮಾನ ಕೈಗೊಳ್ಳಲಿದೆ.
ಗುರುವಾರ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ದಕ್ಷಿಣ ಕನ್ನಡ, ಉಡುಪಿ, ಹಾಸನ ಜಿಲ್ಲೆಯಲ್ಲಿ ಜಾರಿಯಲ್ಲಿದ್ದ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸಲು ಆದೇಶ ನೀಡಿದ್ದಾರೆ. ಕೋವಿಡ್ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾದರೆ ಮತ್ತೆ ಕರ್ಫ್ಯೂ ಜಾರಿಗೊಳಿಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.
ಉಡುಪಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಗುರುವಾರ ಈ ಕುರಿತು ಮಾತನಾಡಿದರು, "ರಾಜ್ಯ ಸರ್ಕಾರದ ಸೂಚನೆಯಂತೆ ಉಡುಪಿ ಜಿಲ್ಲೆಯಲ್ಲೂ ವಾರಾಂತ್ಯದ ಕರ್ಫ್ಯೂ ರದ್ದುಗೊಳಿಸುವ ಕುರಿತು ಜಿಲ್ಲಾ ಕೋವಿಡ್ ನಿಯಂತ್ರಣ ತಜ್ಞರ ಸಮಿತಿ ಹಾಗೂ ಸಂಬಂಧಿತ ಇತರರ ಜೊತೆ ವ್ಯಾಪಕ ಚರ್ಚೆ ನಡೆದಿದ್ದು, ಇನ್ನಷ್ಟು ಚರ್ಚೆ ಬಳಿಕ ಶುಕ್ರವಾರ ಅಂತಿಮ ತೀರ್ಮಾನವನ್ನು ಕೈಗೊಳ್ಳಲಾಗುತ್ತದೆ" ಎಂದು ಹೇಳಿದ್ದಾರೆ.

"ಈ ಬಗ್ಗೆ ತುಂಬಾ ಎಚ್ಚರಿಕೆಯ ಹೆಜ್ಜೆ ಇಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಹೀಗಾಗಿ ಶುಕ್ರವಾರ ಸಚಿವರು, ಶಾಸಕರೊಂದಿಗೆ ಇನ್ನಷ್ಟು ಚರ್ಚಿಸಿ ಮತ್ತೊಂದು ಸುತ್ತಿನ ಚರ್ಚೆಯ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ" ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
"ವಾರಾಂತ್ಯದ ಕರ್ಫ್ಯೂ ಮುಂದುವರೆಸುವ ಬಗ್ಗೆ ಶುಕ್ರವಾರ ತೀರ್ಮಾನ ಕೈಗೊಳ್ಳಲಾಗುತ್ತದೆ. ಈಗ ಜಾರಿಯಲ್ಲಿರುವ ರಾತ್ರಿ ಕರ್ಫ್ಯೂ ಜಿಲ್ಲೆಯಲ್ಲಿ ಮುಂದುವರೆಯಲಿದೆ" ಎಂದು ಸದಾಶಿವ ಪ್ರಭು ಸ್ಪಷ್ಟಪಡಿಸಿದ್ದಾರೆ.
ಉಡುಪಿ ಜಿಲ್ಲಾಧಿಕಾರಿ ಎಂ. ಕೂರ್ಮರಾವ್ ಸೆಪ್ಟೆಂಬರ್ 3 ರಿಂದ 13ರ ತನಕ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತದೆ. ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯ ತನಕ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಹಿಂದೆ ಆದೇಶ ಹೊರಡಿಸಿದ್ದರು.
ಜಿಲ್ಲಾಡಳಿತ ಮಾರ್ಗಸೂಚಿ; ಕರ್ನಾಟಕಕ್ಕೆ ಆಗಮಿಸುವ ಕೇರಳದ ಉದ್ಯೋಗಿಗಳು ಮತ್ತು ವಿದ್ಯಾರ್ಥಿಗಳು ಪ್ರಸ್ತುತ ಕೋವಿಡ್ ನೆಗೆಟಿವ್ ಆರ್ಟಿಪಿಸಿಆರ್ ವರದಿಯನ್ನು ಹೊಂದಿದ್ದು, ಆದರೆ ಕರ್ನಾಟಕಕ್ಕೆ ಬಂದ ಮೇಲೆ ಪರಿಶೀಲಿಸಿದಾಗ ಕೋವಿಡ್ ವರದಿಯು ಪಾಸಿಟಿವ್ ಬರುತ್ತಿದೆ.
ಅಂತಹ ಪ್ರಕರಣಗಳ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಗಣನೀಯವಾಗಿ ಹೆಚ್ಚಾಗುತ್ತಿದ್ದು ಕೋವಿಡ್ ನಿಯಂತ್ರಣ ಮತ್ತು ತಡೆಗಟ್ಟುವಿಕೆಗಾಗಿ ಕೇರಳದಿಂದ ಆಗಮನಕ್ಕಾಗಿ ಸರಕಾರದಿಂದ ಕಾಲಕಾಲಕ್ಕೆ ಸೂಚನೆಗಳನ್ನು ನೀಡಲಾಗುತ್ತಿದೆ.
* ಎಲ್ಲಾ ಶೈಕ್ಷಣಿಕ ಸಂಸ್ಥೆಗಳ ಆಡಳಿತಾಧಿಕಾರಿಗಳು/ ನರ್ಸಿಂಗ್/ ಪ್ಯಾರಾಮೆಡಿಕಲ್ನ/ ಪ್ರಾಂಶುಪಾಲರು ಕೇರಳದಿಂದ ಕರ್ನಾಟಕಕ್ಕೆ ಬರುವ ಮತ್ತು ಕರ್ನಾಟಕದಿಂದ ಕೇರಳಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಅಕ್ಟೋಬರ್ 2021ರ ಅಂತ್ಯದವರೆಗೆ ತಮ್ಮ ಪ್ರಯಾಣವನ್ನು ಮುಂದೂಡಲು ಸೂಚನೆ ನೀಡುವುದು.
* ಆಸ್ಪತ್ರೆಗಳು, ನರ್ಸಿಂಗ್ ಹೋಂಗಳು, ಕಛೇರಿಗಳು, ಹೋಟೆಲ್ಗಳು, ಕಾರ್ಖಾನೆಗಳು, ಇತ್ಯಾದಿ ಎಲ್ಲಾ ಸಂಸ್ಥೆಗಳ ಮಾಲೀಕರು/ ಆಡಳಿತಾಧಿಕಾರಿಗಳು ಕೇರಳದಿಂದ ಕರ್ನಾಟಕಕ್ಕೆ ಬರುವ ಮತ್ತು ಕರ್ನಾಟಕದಿಂದ ಕೇರಳಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಅಕ್ಟೋಬರ್ 2021ರ ಅಂತ್ಯದವರೆಗೆ ತಮ್ಮ ಪ್ರಯಾಣವನ್ನು ಮುಂದೂಡಲು ಸೂಚನೆ ನೀಡುವುದು.
* ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಯಾವುದೇ ತುರ್ತು ಇಲ್ಲದಿದ್ದರೆ ಕೇರಳಕ್ಕೆ ಭೇಟಿ ನೀಡುವ ಯೋಜನೆಯನ್ನು ಅಕ್ಟೋಬರ್ 2021ರ ಅಂತ್ಯದವರೆಗೆ ಮುಂದೂಡಲು ಸಾರ್ವಜನಿಕರಿಗೆ ಮನವಿ ಮಾಡುತ್ತಾ ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಹಕರಿಸುವಂತೆ ಕೋರಲಾಗಿದೆ.
ಉಡುಪಿಯಲ್ಲಿ ಗುರುವಾರದ ಹೆಲ್ತ್ ಬುಲೆಟಿನ್ ಪ್ರಕಾರ 126 ಹೊಸ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಸಕ್ರಿಯ ಪ್ರಕರಣಗಳ ಸಂಖ್ಯೆ 1617 ಆಗಿದೆ. ಇದುವರೆಗೂ ಜಿಲ್ಲೆಯಲ್ಲಿ 465 ಜನರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 74864.












Click it and Unblock the Notifications