ಉಡುಪಿಯಲ್ಲಿ ಲಾಕ್ ಡೌನ್; ಜಿಲ್ಲಾಧಿಕಾರಿಗಳು ಹೇಳಿದ್ದೇನು?
ಉಡುಪಿ, ಜುಲೈ 13 : ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಯಲು ಉಡುಪಿಯಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗುತ್ತದೆಯೇ?. ಜಿಲ್ಲೆಯಲ್ಲಿ ಭಾನುವಾರ 43 ಹೊಸ ಪ್ರಕರಣ ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1609ಕ್ಕೆ ಏರಿಕೆಯಾಗಿದೆ.
Recommended Video
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಜಿಲ್ಲಾಧಿಕಾರಿಗಳ ಜೊತೆ ಸೋಮವಾರ ನಡೆಸಿದ ಸಭೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಪಾಲ್ಗೊಂಡಿದ್ದರು. ಜಿಲ್ಲೆಯ ಗಡಿಯನ್ನು ಸಂಪೂರ್ಣ ಬಂದ್ ಮಾಡಿ , ಯಾರೂ ಬಾರದಂತೆ ನೋಡಿಕೊಂಡರೆ ಉಡುಪಿ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣ ಮಾಡಲು ಸಾಧ್ಯವಾಗಲಿದೆ ಎಂದು ಸಭೆಯಲ್ಲಿ ತಿಳಿಸಿದ್ದಾರೆ.
ಮಂಗಳವಾರ ಜಿಲ್ಲಾಧಿಕಾರಿಗಳು, ಜಿಲ್ಲೆಯ ಎಲ್ಲಾ ಶಾಸಕರೊಂದಿಗೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣದ ಬಗ್ಗೆ ಚರ್ಚೆಗಳು ನಡೆಯಲಿವೆ. ಬಳಿಕ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಕುರಿತು ತೀರ್ಮಾನವನ್ನು ಕೈಗೊಳ್ಳಲಾಗುತ್ತದೆ.

"ಜಿಲ್ಲೆಯಲ್ಲಿ ಲಾಕ್ ಡೌನ್ ಮಾಡಿದರೂ ಹೋಗುವವರಿಗೆ, ಬರುವವರಿಗೆ ಒಂದು ಅವಕಾಶವನ್ನು ಕಲ್ಪಿಸಿ , ಲಾಕ್ ಡೌನ್ ಮಾಡಲಾಗುವುದು ಅಥವಾ ಜಿಲ್ಲೆಯನ್ನು ಸೀಲ್ ಡೌನ್ ಮಾಡಲಾಗುವುದು. ಜಿಲ್ಲೆಯಲ್ಲಿ ಉಳಿದೆಲ್ಲ ಚಟುವಟಿಕೆಗಳು ಯಥಾ ಪ್ರಕಾರ ನಡೆಯಬೇಕು ಎಂದಾದರೆ ಅದಕ್ಕೂ ಸಹ ಒಂದು ದಿನ ಅವಕಾಶವನ್ನು ನೀಡಲಾಗುತ್ತದೆ" ಎಂದು ಜಗದೀಶ್ ಹೇಳಿದ್ದಾರೆ.
ಜಿಲ್ಲೆಯಲ್ಲಿ ಎಸ್. ಎಸ್. ಎಲ್. ಸಿ ಮೌಲ್ಯಮಾಪನಕ್ಕೆ ಲಾಕ್ ಡೌನ್ ಅಥವಾ ಗಡಿ ಸೀಲ್ ಡೌನ್ನಿಂದ ತೊಂದರೆ ಆಗುವುದಿಲ್ಲ. ಮೌಲ್ಯಮಾಪನ ಮುಂದುವರಿಯುತ್ತದೆ. ಅದಕ್ಕಾಗಿ ಶಿಕ್ಷಕರಿಗೆ ಬಸ್ಸಿನ ವ್ಯವಸ್ಥೆ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.
ಉಡುಪಿ ಪಕ್ಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 2,222. ಜಿಲ್ಲೆಯಲ್ಲಿ ಜುಲೈ 16ರಿಂದ ಒಂದು ವಾರಗಳ ಕಾಲ ಲಾಕ್ ಡೌನ್ ಮಾಡಲಾಗುತ್ತದೆ ಎಂದು ಸೋಮವಾರ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸೋಮವಾರ ಈ ಕುರಿತು ಹೇಳಿಕೆ ನೀಡಿದ್ದಾರೆ. ಉಡುಪಿಯಲ್ಲಿಯೂ ಲಾಕ್ ಡೌನ್ ಜಾರಿಗೆ ಬರಲಿದೆಯೇ? ಎಂಬುದು ಮಂಗಳವಾರ ತೀರ್ಮಾನವಾಗಲಿದೆ.












Click it and Unblock the Notifications