ಸಿದ್ದು-ಡಿಕೆಶಿ ಒಳಗಿಂದೊಳಗೆ ಕತ್ತಿ ಮಸೆಯುತ್ತಿದ್ದಾರೆ: ಜಗದೀಶ್ ಶೆಟ್ಟರ್
ಉಡುಪಿ, ನವೆಂಬರ್ 6: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ದೆಹಲಿ ಪ್ರವಾಸದ ವಿಚಾರವಾಗಿ ಸಚಿವ ಜಗದೀಶ್ ಶೆಟ್ಟರ್ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದರು.
ವಿಪಕ್ಷ ನಾಯಕ ಸಿದ್ದರಾಮಯ್ಯ, ಹಾಗೂ ಡಿ.ಕೆ ಶಿವಕುಮಾರ್ ನಡುವೆ ಹಿಂದಿನಿಂದಲೂ ಭಿನ್ನಾಭಿಪ್ರಾಯ ಇದೆ. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲು ಬಯಸಿದ್ದು, ಬಹಿರಂಗವಾಗಿ ಸಿಎಂ ಆಗುವ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಆದರೆ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ಕೆಲವು ಶಾಸಕರು ಹೇಳುತ್ತಿದ್ದಾರೆ ಎಂದರು.
ಯಡಿಯೂರಪ್ಪ ಬದಲಾವಣೆ ವಿಚಾರ: ಸಚಿವ ರಮೇಶ್ ಜಾರಕಿಹೊಳಿ ಏನಂದ್ರು?
ಸಿದ್ದರಾಮಯ್ಯ ಹಾಗೂ ಡಿಕೆಶಿ ಇಬ್ಬರೂ ಒಳಗಿಂದೊಳಗೆ ಕತ್ತಿ ಮಸೆಯುತ್ತಿದ್ದಾರೆ. ಒಬ್ಬರ ಮೇಲೆ ಇನ್ನೊಬ್ಬರು ಯಾವಾಗ ಹೊಡೆಯುತ್ತಾರೆ ಎಂಬುದು ಇನ್ನು ಬಹಿರಂಗವಾಗಬೇಕಷ್ಟೇ ಎಂದು ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದಾರೆ.
ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನ ವಿಚಾರವಾಗಿ ಮಾತನಾಡಿದ ಸಚಿವರು, ಪಂಚಮಸಾಲಿ ಲಿಂಗಾಯತ ಸ್ವಾಮೀಜಿಗಳು ವಿನಯ್ ಕುಲಕರ್ಣಿ ಮನೆಗೆ ಭೇಟಿ ನೀಡಿರುವ ಬಗ್ಗೆ ನಾನು ಹೆಚ್ಚಿಗೆ ಮಾತನಾಡಲ್ಲ. ನಾನು ರಾಜಕೀಯವಾಗಿ ಮಾತ್ರ ಉತ್ತರ ಕೊಡುತ್ತಿದ್ದೇನೆ. ಸ್ವಾಮೀಜಿಗಳಿಗೆ ನಾನು ಏನೂ ಪ್ರತಿಕ್ರಿಯೆ ಕೊಡಲು ಹೋಗುವುದಿಲ್ಲ ಎಂದು ಹೇಳಿದರು.
ಮಸ್ಕಿ ಮತ್ತು ಬಸವಕಲ್ಯಾಣದಲ್ಲಿ ಇನ್ನೂ ಉಪ ಚುನಾವಣೆ ಘೋಷಣೆಯಾಗಿಲ್ಲ. ಪಕ್ಷದ ಒಳಗೆ ಅಭ್ಯರ್ಥಿ ಬಗ್ಗೆ ಇನ್ನೂ ಚರ್ಚೆಗಳು ನಡೆದಿಲ್ಲ. ಮಾಧ್ಯಮಗಳಲ್ಲಿ ಮಾತ್ರ ಈ ವಿಚಾರ ಪ್ರಚಾರ ಪಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು.
Recommended Video
ಬಿ.ವೈ ವಿಜಯೇಂದ್ರ ತಾನು ಚುನಾವಣೆಗೆ ಸ್ಪರ್ಧಿಸಬೇಕು ಎಂದು ಕೇಳಿಲ್ಲ, ಪಕ್ಷದ ಒಳಗೂ ವಿಜಯೇಂದ್ರ ಹೆಸರು ಚರ್ಚೆಗೆ ಬಂದಿಲ್ಲ. ಮಾಧ್ಯಮಗಳೇ ಚರ್ಚೆ ಮಾಡಿ ಅಭಿಪ್ರಾಯ ಪಡೆಯುತ್ತಿದೆ ಎಂದು ಉಡುಪಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.