ಮೀನುಗಾರರ ನಾಪತ್ತೆ ಪ್ರಕರಣ: ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್
ಉಡುಪಿ, ಮೇ 15 :ಉಡುಪಿಯ ಮಲ್ಪೆ ಮೀನುಗಾರರ ನಾಪತ್ತೆ ಪ್ರಕರಣದ ವರದಿ ನೀಡುವಂತೆ ಎನ್ಎಚ್ಆರ್ ಸಿ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಮಲ್ಪೆ ಮೀನುಗಾರಿಕಾ ಬಂದರಿನಿಂದ ಡಿ.13 ರಂದು ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಹಡಗು, ಅದರಲ್ಲಿದ್ದ 7 ಮಂದಿ ಮೀನುಗಾರರು ಕಣ್ಮರೆಯಾಗಿದ್ದರು. ಇದೀಗ ಬೋಟ್ ನಲ್ಲಿದ್ದ 7 ಜನ ಮೀನುಗಾರರ ಪತ್ತೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರ ನೀಡುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.
ಸುವರ್ಣ ತ್ರಿಭುಜ ಬೋಟನ್ನು ಹೊರತೆಗೆದರೆ ಸತ್ಯಾಂಶ ತಿಳಿಯಲಿದೆಯೇ?
ನಾಪತ್ತೆಯಾಗಿದ್ದ ಸುವರ್ಣ ತ್ರಿಭುಜ ಬೋಟ್ ನ ಅವಶೇಷಗಳು ಇತ್ತೀಚೆಗೆ ಮಹಾರಾಷ್ಟ್ರದ ಮಾಲ್ವಾನ್ ಬಳಿ ಸಮುದ್ರದಾಳದಲ್ಲಿ ನೌಕಾ ಪಡೆ ಅಧಿಕಾರಿಗಳು ಶೋಧಕಾರ್ಯ ಸಂದರ್ಭದಲ್ಲಿಪತ್ತೆ ಹಚ್ಚಿದ್ದರು. ಭಾರತೀಯ ನೌಕಾ ಪಡೆ ಸುವರ್ಣ ತ್ರಿಭುಜ ಬೋಟ್ ನ ಅವಶೇಷಗಳ ಬಗ್ಗೆ ಈಗಾಗಲೇ ಸ್ಪಷ್ಟ ಮಾಹಿತಿ ನೀಡಿದೆ.
ಈ ಹಿನ್ನೆಲೆಯಲ್ಲಿ ಮಾಧ್ಯಮಗಳ ವರದಿಗಳನ್ನು ಆಧರಿಸಿ ಸ್ವಯಂಪ್ರೇರಣೆಯಿಂದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.
ಸುವರ್ಣ ತ್ರಿಭುಜ ಬೋಟ್ ಅವಶೇಷ ಪತ್ತೆ ಬಗ್ಗೆ ಕಾರವಾರ ನೌಕಸೇನೆ ಹೇಳಿದ್ದೇನು?
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಕ್ಷಣಾ ಇಲಾಖೆಯ ಕಾರ್ಯದರ್ಶಿಯವರಿಗೆ ನೋಟಿಸ್ ನೀಡಿರುವ ಆಯೋಗ, ಆರು ವಾರಗಳಲ್ಲಿ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದೆ. ಈ ನಡುವೆ ಮೀನುಗಾರರು ಕಾಣೆಯಾಗಿದ್ದರಿಂದ ತೀವ್ರ ಸಂಕಷ್ಟದಲ್ಲಿರುವ ಕುಟುಂಬ ಸದಸ್ಯರಿಗೆ ಪರಿಹಾರ ನೀಡಲಾಗಿದೆಯೇ ಎಂಬ ಕುರಿತು ವಿವರಿಸುವಂತೆ ರಾಜ್ಯ ಸರ್ಕಾರಕ್ಕೆ ಆಯೋಗ ಸೂಚಿಸಿದೆ.