ಕೋವಿಡ್ ನಿಯಮ ಉಲ್ಲಂಘನೆ; ಪ್ರಯಾಣಿಕರನ್ನು ಇಳಿಸಿದ ಡಿಸಿ!
ಉಡುಪಿ, ಏಪ್ರಿಲ್ 20; ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇವೆ. ಅದರಲ್ಲೂ ವಿಶೇಷವಾಗಿ ಉಡುಪಿ ನಗರ ಮತ್ತು ಮಣಿಪಾಲದಲ್ಲಿ ಹೊಸ ಪ್ರಕರಣಗಳು ಇನ್ನೂ ಹೆಚ್ಚು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ.
ಜನರು ಮುಖ್ಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಾದ ಅಗತ್ಯದ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸಲಾಗುತ್ತಿದೆ. ಆದರೆ, ಕೋವಿಡ್ ನಿಯಮ ಪಾಲನೆ ಮಾಡದಿರುವ ಪ್ರಕರಣಗಳು ನಡೆಯುತ್ತಿವೆ.
ನಗರದಲ್ಲಿ ಸಂಚರಿಸುವ ಖಾಸಗಿ ಬಸ್ಗಳಲ್ಲಿ ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಕಾಪಾಡದೇ ಜನರು ಪ್ರಯಾಣ ಮಾಡುತ್ತಿದ್ದಾರೆ. ಇದನ್ನು ಗಮನಿಸಿರುವ ಜಿಲ್ಲಾಧಿಕಾರಿ ಜಿ. ಜಗದೀಶ್ ಖುದ್ದು ಫೀಲ್ಡಿಗೆ ಇಳಿದಿದ್ದಾರೆ. ಹೆಚ್ಚು ಪ್ರಯಾಣಿಕರನ್ನು ತುಂಬಿಕೊಂಡು ಹೋಗುವ ಬಸ್ಸುಗಳನ್ನು ತಡೆದು ನಿಲ್ಲಿಸಿ ಚಾಲಕರು ಮತ್ತು ನಿರ್ವಾಹಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಇಲ್ಲದೆ ಬಸ್ನಲ್ಲಿ ನಿಂತು ಪ್ರಯಾಣಿಸುತ್ತಿದ್ದ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ನಿರ್ವಾಹಕರ ಬಳಿ ಅವರ ದುಡ್ಡನ್ನು ವಾಪಸು ಕೊಡಿಸಿ ಇನ್ನು ಮುಂದೆ ಮಾಸ್ಕ್ ,ಸಾಮಾಜಿಕ ಅಂತರ ಕಾಪಾಡದೆ ಬಸ್ನಲ್ಲಿ ಪ್ರಯಾಣಿಸುವಂತಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಒಟ್ಟು 5 ಬಸ್ಗಳನ್ನು ನಿಲ್ಲಿಸಿ ಎಚ್ಚರಿಕೆ ನೀಡಿರುವ ಜಿಲ್ಲಾಧಿಕಾರಿಗಳು ಇನ್ನು ಮುಂದೆ ಈ ರೀತಿ ಆಗಬಾರದು ಎಂದು ಎಚ್ಚರಿಸಿದ್ದಾರೆ. ಕೋವಿಡ್ ನಿಯಮ ಪಾಲನೆ ಮಾಡದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.












Click it and Unblock the Notifications