ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಸ್ವಾಗತಿಸಿದ ಪೇಜಾವರ ಶ್ರೀ
ಉಡುಪಿ, ಸೆಪ್ಟೆಂಬರ್ 30: ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಭಾರತೀಯ ಜನತಾ ಪಕ್ಷದ ಘಟಾನುಘಟಿ ನಾಯಕರಿಗೆ ಲಕ್ನೋ ಸಿಬಿಐ ವಿಶೇಷ ನ್ಯಾಯಾಲಯವು ಕ್ಲೀನ್ ಚಿಟ್ ನೀಡಿದೆ. 28 ವರ್ಷಗಳ ಹಿಂದೆ ನಡೆದ ಘಟನೆ ಪೂರ್ವ ನಿಯೋಜಿತವಲ್ಲ ಎನ್ನುವ ಮೂಲಕ ಎಲ್ಲ 32 ಆರೋಪಿಗಳನ್ನು ಪ್ರಕರಣದಿಂದ ದೋಷಮುಕ್ತಗೊಳಿಸಿದೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಅಂತಿಮ ತೀರ್ಪು ಪ್ರಕಟಿಸಿದ ಅಲಹಾಬಾದ್ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪನ್ನು ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ವಾಗತಿಸಿದ್ದಾರೆ.
ಸಿಬಿಐ ಕೋರ್ಟ್ ಆದೇಶದಿಂದ ನಮಗೆ ಬಹಳ ಸಂತೋಷವಾಗಿದೆ. ಧಾರ್ಮಿಕ, ಸಾಮಾಜಿಕ ನಾಯಕರು ಆರೋಪದಿಂದ ಮುಕ್ತರಾಗಿದ್ದಾರೆ ಎಂದು ಅಯೋಧ್ಯೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಸದಸ್ಯರೂ ಆಗಿರುವ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

ಸತ್ಯಮೇವ ಜಯತೆ ಎಂಬ ಮಾತು ನಿಜವಾಗಿದೆ, ಸತ್ಯಕ್ಕೆ ಸಾವಿಲ್ಲ ಸುಳ್ಳಿಗೆ ಉಳಿಗಾಲವಿಲ್ಲ. ಈ ಮೂಲಕ ಒಬ್ಬರನ್ನು ಹತ್ತಿಕ್ಕುತ್ತೇವೆ ಎನ್ನುವ ಧೋರಣೆಗೆ ಸೋಲಾಗುತ್ತದೆ ಎನ್ನುವ ಮಾತು ಅಯೋಧ್ಯೆಯ ತೀರ್ಪಿನ ಬಳಿಕ ಇಂದು ಮತ್ತೊಮ್ಮೆ ಸಾಬೀತಾಗಿದೆ ಎಂದು ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು.
1992ರಲ್ಲಿ ನಡೆದ ಬಾಬ್ರಿ ಮಸೀದಿ ಪ್ರಕರಣದ ಸುದೀರ್ಘ ವಿಚಾರಣೆ ಬಳಿಕ ನ್ಯಾಯಮೂರ್ತಿ ಎಸ್.ಕೆ. ಯಾದವ್ ಐತಿಹಾಸಿಕ ತೀರ್ಪು ನೀಡಿದ್ದಾರೆ. ಬಾಬ್ರಿ ಮಸೀದಿ ಧ್ವಂಸಕ್ಕೆ ಮೊದಲೇ ಸಂಚು ರೂಪಿಸಿರಲಿಲ್ಲ. ಅದೊಂದು ಪೂರ್ವ ನಿಯೋಜಿತ ಕೃತ್ಯವೂ ಆಗಿರಲಿಲ್ಲ. ಆಕಸ್ಮಿಕವಾಗಿ ನಡೆದ ಘಟನೆಯಲ್ಲಿ ಆರೋಪಿಗಳು ಭಾಗಿಯಾಗಿದ್ದಾರೆ ಎನ್ನುವುದಕ್ಕೆ ಯಾವುದೇ ಪ್ರಬಲ ಸಾಕ್ಷಿಗಳೂ ಇಲ್ಲ ಎಂದು ಕೋರ್ಟ್ ಹೇಳಿದೆ.












Click it and Unblock the Notifications