ಬೈಂದೂರಿನ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಬಿರುಸಿನ ಮತದಾನ
ಉಡುಪಿ, ಏಪ್ರಿಲ್ 23: ದೇಶದಲ್ಲಿ ಮೂರನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯದಲ್ಲಿ ಒಟ್ಟು 14 ಕ್ಷೇತ್ರದಲ್ಲಿ ಇಂದು ಮುಂಜಾನೆಯಿಂದಲೇ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ಒಳಪಟ್ಟ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭೆ ಕ್ಷೇತ್ರದಲ್ಲಿ ಮುಂಜಾನೆಯಿಂದ ಬಿರುಸಿನ ಮತದಾನ ನಡೆಯುತ್ತಿದೆ.
ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ನಕ್ಸಲ್ ಪೀಡಿತ ಪ್ರದೇಶಗಳಾದ ಯಡಮೊಗ್ಗೆ ,ಮಚ್ಚೆಟ್ಟು ,ತೊಂಬಟ್ಟುವಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನಕ್ಕೆ ಮುಂದಾಗುತ್ತಿದ್ದಾರೆ.
ಗ್ರಾಮಸ್ಥರು ಬೆಳಿಗ್ಗೆಯಿಂದಲೇ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಮತದಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತಗಟ್ಟೆಗಳ ಸುತ್ತ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ. ಈ ಪ್ರದೇಶಗಳಲ್ಲಿ ಅರೆ ಸೇನಾ ಪಡೆಗಳನ್ನು ನಿಯೋಜಿಸಲಾಗಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಜನರು ಮತದಾನಕ್ಕೆ ಮುಂದಾಗುವ ಮೂಲಕ ಬುಲೆಟ್ ಗಿಂತ ಬ್ಯಾಲೆಟ್ ಶ್ರೇಷ್ಠ ಎಂದು ಮತದಾರರು ಸಾಬೀತು ಪಡೆಸುತ್ತಿದ್ದಾರೆ. ಮತದಾರರು ಮೈಲಿಗಟ್ಟಲೆ ನಡೆದೇ ಬಂದು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಹಿರಿಯ ನಾಗರೀಕರಲ್ಲೂ ಮತದಾನ ಮಾಡುವ ಉತ್ಸಾಹ ಕಂಡುಬರುತ್ತಿದೆ.

ಈ ನಡುವೆ ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಇಂದು ಮತದಾನ ಮಾಡಿದರು. ಶಾರದಾ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 144ರಲ್ಲಿ ಸರತಿ ಸಾಲಲ್ಲಿ ನಿಂತು ಶಾಸಕ ಸುಕುಮಾರ್ ಶೆಟ್ಟಿ ಮತ ಚಲಾಯಿಸಿದರು.












Click it and Unblock the Notifications