ಅಪ್ಪುಗೆ ಮರಣೋತ್ತರ ರಾಜ್ಯೋತ್ಸವ ನೀಡಲು ಸಾಧ್ಯವಿಲ್ಲ: ಕಾರಣ ಬಿಚ್ಚಿಟ್ಟ ಸಚಿವ ಸುನೀಲ್ ಕುಮಾರ್
ಉಡುಪಿ, ನವೆಂಬರ್ 1: ಕನ್ನಡದ ಕೋಟ್ಯಂತರ ಹೃದಯಾಧಿಪತಿ ಪುನೀತ್ ರಾಜ್ಕುಮಾರ್ ನಿಧನವಾಗಿರುವ ಸುದ್ದಿ ಅಭಿಮಾನಿಗಳಿಗೆ ಇನ್ನೂ ಅರಗಿಸಿಕೊಳ್ಳಲಾಗುತ್ತಿಲ್ಲ. ಈ ನಡುವೆ ಪುನೀತ್ ರಾಜ್ಕುಮಾರ್ಗೆ ರಾಜ್ಯ ಸರ್ಕಾರ ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕೆಂದು ಅಭಿಮಾನಿಗಳು ಒತ್ತಾಯಿಸಿದ್ದಾರೆ. ಹಲವು ಅಭಿಮಾನಿಗಳು ಅಪ್ಪುಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಬೇಕೆಂದು ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ.
ಆದರೆ ಅಪ್ಪುಗೆ ಮರಣೋತ್ತರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲು ಸಾಧ್ಯವಿಲ್ಲ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಬಳಿಕ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಸುನೀಲ್ ಕುಮಾರ್, ಪುನೀತ್ಗೆ ಮರಣೋತ್ತರ ರಾಜ್ಯ ಪ್ರಶಸ್ತಿ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಪುನೀತ್ ರಾಜ್ಕುಮಾರ್ ನಿಧನ ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಸರಕಾರ ಎಚ್ಚರಿಕೆಗಳನ್ನು ತೆಗೆದುಕೊಂಡು ಪುನೀತ್ ರಾಜ್ಕುಮಾರ್ಗೆ ಶ್ರದ್ಧಾಂಜಲಿ ಅರ್ಪಿಸಿದೆ. ರಾಜ್ ಕುಟುಂಬದ ಅಭಿಪ್ರಾಯ, ಅಭಿಮಾನಿಗಳ ಆಸೆಯಂತೆಯೇ ಪುನೀತ್ ಅಂತಿಮ ವಿಧಿವಿಧಾನವನ್ನು ಯಾವುದೇ ವಿಘ್ನವಿಲ್ಲದೇ ಸರ್ಕಾರ ನೆರವೇರಿಸಿದೆ ಎಂದರು.

ಈ ನಡುವೆ ಪುನೀತ್ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಬೇಕು ಎಂಬ ಮಾತು ಎಲ್ಲಾ ಕಡೆಗಳಿಂದ ಕೇಳಿಬಂದಿದೆ. ಆದರೆ ರಾಜ್ಯೋತ್ಸವ ಪ್ರಶಸ್ತಿಯ ನಿಯಮಾವಳಿ ಮತ್ತು ಕೋರ್ಟ್ ಆದೇಶದ ಪ್ರಕಾರ ಮರಣೋತ್ತರ ಪ್ರಶಸ್ತಿಗೆ ಅವಕಾಶವಿಲ್ಲ. ಅವಕಾಶ ಇಲ್ಲದ ಕಾರಣ ಈ ಬೇಡಿಕೆ ಪರಿಗಣಿಸಲು ಸಾಧ್ಯವಾಗಿಲ್ಲ ಎಂದು ಸಚಿವ ಸುನೀಲ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಆದರೆ ಮುಂದಿನ ದಿನಗಳಲ್ಲಿ ಪುನೀತ್ ರಾಜಕುಮಾರ್ ಸೇವೆಯನ್ನು ಪರಿಗಣಿಸುತ್ತೇವೆ. ಯಾವ ರೀತಿಯ ಗೌರವ ಕೊಡಬೇಕು ಎಂದು ಸರ್ಕಾರ ತೀರ್ಮಾನ ಮಾಡುತ್ತದೆ. ಈಗಲೇ ಯಾವುದೇ ತರಾತುರಿಯ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ದೀಪಾವಳಿ ನಂತರ ಸಭೆ ನಡೆಸಿ ಗೌರವ ಸಲ್ಲಿಕೆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.
ಪುನೀತ್ಗೆ ವಿಶೇಷ ಗೌರವ ಕೊಡಲು ರಾಜ್ಯ ಸರ್ಕಾರ ಉತ್ಸುಕವಾಗಿದೆ. ಆದರೆ ಎಲ್ಲವನ್ನೂ ಏಕಾಏಕಿ ನಿರ್ಧಾರ ಮಾಡುವುದಕ್ಕೆ ಸಾಧ್ಯವಿಲ್ಲ. ಸಭೆ ಕರೆದು ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸುನೀಲ್ ಕುಮಾರ್ ಹೇಳಿದ್ದಾರೆ.

ಇನ್ನು ಪುನೀತ್ ರಾಜ್ಕುಮಾರ್ಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಒತ್ತಾಯ ಕೂಡಾ ಜೋರಾಗಿದೆ. ಸ್ವತಃ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್, ಪುನೀತ್ ರಾಜ್ಕುಮಾರ್ಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಟ್ವಿಟ್ಟರ್ನಲ್ಲಿ ಸರಕಾರಕ್ಕೆ ಮನವಿ ಮಾಡಿದ್ದಾರೆ.
ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಬೇಕು:
ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇಂದು ಗುಬ್ಬಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಖಾಸಗಿ ಹೈಟೆಕ್ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪುನೀತ್ ಅವರಲ್ಲಿ ಅಪಾರವಾದ ಪ್ರತಿಭೆ ಇತ್ತು, ಹೀಗಾಗಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ಸಿಗಬೇಕು ಎಂದು ಅಭಿಪ್ರಾಯಪಟ್ಟರು.
ಪುನೀತ್ ರಾಜ್ಕುಮಾರ್ ಅವರಿಗೆ ದೇಶದ ಅತ್ಯುನ್ನತ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿ ನೀಡಬೇಕು. ರಾಜ್ಯ ಸರ್ಕಾರ ಕೂಡ ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ತಾವು ಕೂಡ ಕೇಂದ್ರ, ರಾಜ್ಯ ಸರ್ಕಾರಕ್ಕೆ ಪತ್ರ ಬರೆದು, ಪ್ರಶಸ್ತಿ ನೀಡುವಂತೆ ಒತ್ತಾಯಿಸುವುದಾಗಿ ಹೇಳಿದರು.












Click it and Unblock the Notifications