ಉಡುಪಿ; ರಾಘವೇಂದ್ರ ಕುಟುಂಬದಿಂದ 21 ದಿನ 3000 ಸಾವಿರ ಜನರಿಗೆ ಊಟ
ಉಡುಪಿ, ಮಾರ್ಚ್ 26: ಕೊರೊನಾ ಲಾಕ್ ಡೌನ್ ಪರಿಣಾಮವಾಗಿ ಉಡುಪಿಯಲ್ಲಿ ಕಾರ್ಮಿಕರು, ನಿರ್ಗತಿಕರು ಊಟಕ್ಕಿಲ್ಲದೆ ಪರಿತಪಿಸುವ ಪ್ರಮೇಯ ಬಂದಿದೆ. ನೀರು, ಊಟವಿಲ್ಲದೇ ಪರದಾಡುತ್ತಿರುವವರಿಗೆ ಉಡುಪಿಯ ರಾಘವೇಂದ್ರ ಕಿಣಿ ಕುಟುಂಬ ಆಹಾರ ನೀಡಲು ನಿರ್ಧರಿಸಿದೆ.
ಇವರ ಕುಟುಂಬ ಪ್ರತಿದಿನ ನೂರು ಜನಕ್ಕೆ ಊಟ ಕೊಡಲು ತೀರ್ಮಾನಿಸಿದೆ. ಮುಂದಿನ 21 ದಿನ ನಗರದ ಅಲ್ಲಲ್ಲಿ ನೂರು ಊಟ ಕೊಡುವುದಾಗಿ ಇಂಜಿನಿಯರ್ ರಾಘವೇಂದ್ರ ಕಿಣಿ ತಿಳಿಸಿದ್ದಾರೆ.
ಜನರಿದ್ದಲ್ಲಿಗೆ ಪ್ರತಿದಿನ ಊಟ ಪಾರ್ಸೆಲ್ ನೀಡಿ ಬಡವರ ಹಸಿವು ನೀಗಿಸುವ ಗುರಿ ಇದ್ದು, ಅಡುಗೆಗೆ, ಸಪ್ಲೈಗೆ ಜನರನ್ನು ನೇಮಿಸಿರುವುದಾಗಿ ತಿಳಿಸಿದ್ದಾರೆ. ಸ್ವಚ್ಛತೆಗೆ ಅಡ್ಡಿಯಾಗದೆ, ಸರಕಾರದ, ಆರೋಗ್ಯ ಇಲಾಖೆಯ ನಿಯಮ ಪಾಲಿಸಿಕೊಂಡು ಊಟ ವಿತರಿಸುವುದಾಗಿ ರಾಘವೇಂದ್ರ ಕಿಣಿ ಹೇಳಿದ್ದಾರೆ.

ಸಹೋದರ ನರಸಿಂಹ ಕಿಣಿಯವರ ಕಡಿಯಾಳಿಯ ಹೋಟೆಲ್ ನಲ್ಲಿ ಊಟದ ಪೊಟ್ಟಣ ಪಾರ್ಸೆಲ್ ಕಟ್ಟಲಾಗುತ್ತಿದೆ. ನಗರದ ಕಲ್ಸಂಕ, ಸಿಟಿ ಬಸ್ ನಿಲ್ದಾಣ, ಅಜ್ಜರಕಾಡು ಪಾರ್ಕ್, ಅಂಬಲಪಾಡಿ, ಸಂತೆಕಟ್ಟೆ ಕಲ್ಯಾಣಪುರದಲ್ಲಿ ಊಟ ಅಗತ್ಯ ಇರುವವರಿಗೆ ವಿತರಿಸುವ ನಿರ್ಧಾರವನ್ನು ಕಿಣಿಯವರ ಟ್ರಸ್ಟ್ ಮೂಲಕ ಮಾಡಲಾಗಿದೆ.












Click it and Unblock the Notifications