ಕೋವಿಡ್ ಮಾರ್ಗಸೂಚಿ ಬದಲಾವಣೆ; ಸುಳಿವು ಕೊಟ್ಟ ಮುಖ್ಯಮಂತ್ರಿಗಳು
ಉಡುಪಿ, ಅಕ್ಟೋಬರ್ 13; "ರಾಜ್ಯದಲ್ಲಿ ಕೋವಿಡ್ ನಿಯಮಾವಳಿಗಳನ್ನು ಸಡಿಲಿಸುವ ಕುರಿತು ಮತ್ತು ಶಾಲೆಗಳನ್ನು ಆರಂಭಿಸುವ ಬಗ್ಗೆ ತಜ್ಞರ ಜೊತೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬುಧವಾರ ಉಡುಪಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿಗಳು ಪಾಲ್ಗೊಂಡಿದ್ದರು. ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ರಾಜ್ಯದ ಗಡಿ ಭಾಗದ ಜಿಲ್ಲೆಗಳಲ್ಲಿ ಕೋವಿಡ್ ನಿಯಮಾವಳಿ ಸಡಿಲಿಸುವ ಕುರಿತು ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುತ್ತದೆ" ಎಂದರು.
"ರಾಜ್ಯದ ಕೋವಿಡ್ ಪರಿಸ್ಥಿತಿ ಬಗ್ಗೆ ದಸರಾ ಬಳಿಕ ತಜ್ಞರ ಜೊತೆ ಸಭೆ ನಡೆಸಲಾಗುತ್ತದೆ. ಸಭೆಯ ಬಳಿಕ ಪರಿಸ್ಥಿತಿ ಅವಲೋಕಿಸಿ ರಾಜ್ಯದಲ್ಲಿ ಕೋವಿಡ್ ಮಾರ್ಗಸೂಚಿ ಸಡಿಲಿಸುವ ಕುರಿತು ಮತ್ತು ಶಾಲೆಗಳ ಆರಂಭ ಮಾಡುವ ಕುರಿತು ತೀರ್ಮಾನಿಸಲಾಗುತ್ತದೆ" ಎಂದು ತಿಳಿಸಿದರು.

"ಕೋವಿಡ್ ಲಸಿಕೆ ನೀಡುವುದರದಲ್ಲಿಯೂ ಕರ್ನಾಟಕ ನಿರೀಕ್ಷಿತ ಗುರಿಯನ್ನು ತಲುಪುತ್ತಿದೆ. ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ಕುರಿತು ದಸರಾ ಬಳಿಕ ಅಂತಿಮ ತೀರ್ಮಾನವನ್ನು ಕೈಗೊಳ್ಳಲಾಗುವುದು" ಎಂದು ತಿಳಿಸಿದರು.
"ಕರ್ನಾಟಕ ಮತ್ತು ಕೇರಳ, ಮಹಾರಾಷ್ಟ್ರ ಗಡಿ ಭಾಗದಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆ ತಜ್ಞರು ನಿಗಾವಹಿಸಿದ್ದಾರೆ. ಗಡಿಜಿಲ್ಲೆಗಳಲ್ಲಿ ಕೋವಿಡ್ ಮಾರ್ಗಸೂಚಿಗಳಲ್ಲಿ ವಿನಾಯಿತಿ ನೀಡುವ ಬಗ್ಗೆ ತಜ್ಞರ ಸಮಿತಿ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ" ಎಂದು ಮುಖ್ಯಮಂತ್ರಿಗಳು ಹೇಳಿದರು.
"ಕೋವಿಡ್ ಪರಿಸ್ಥಿತಿ ಸಂದರ್ಭದಲ್ಲಿ ಜನರ ಮೇಲೆ ದಾಖಲಿಸಿರುವ ಪ್ರಕರಣ, ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವ ಕುರಿತು ಪೊಲೀಸ್ ಇಲಾಖೆ ಜೊತೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ" ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಕೇರಳದಲ್ಲಿ ಕೋವಿಡ್ ಪ್ರಕಣಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಕರ್ನಾಟಕ ಸರ್ಕಾರ ಕರ್ನಾಟಕ, ಕೇರಳ ನಡುವೆ ಸಂಚಾರ ನಡೆಸುವ ಜನರ ಮೇಲೆ ಹಲವು ನಿರ್ಬಂಧ ಹೇರಿದೆ. ವಿದ್ಯಾರ್ಥಿಗಳಿಗೆ ಸಹ ಈ ನಿರ್ಬಂಧ ಅನ್ವಯವಾಗುತ್ತದೆ. ಈಗ ನಿಯಮಾವಳಿಗಳನ್ನು ಸಡಿಲಿಸುವ ಬಗ್ಗೆ ಮುಖ್ಯಮಂತ್ರಿಗಳು ಸುಳಿವು ನೀಡಿದ್ದಾರೆ.
ಕೋವಿಡ್ ಪ್ರಕರಣಗಳು ಇಳಿಕೆ; ಕರ್ನಾಟಕದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 357 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 438 ಜನರು ಡಿಸ್ಚಾರ್ಜ್ ಆಗಿದ್ದು, 10 ಜನರು ಸಾವನ್ನಪ್ಪಿದ್ದಾರೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 9,621.
ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಸಹ ಕೋವಿಡ್ ಪರಿಸ್ಥಿತಿ ಹತೋಟಿಯಲ್ಲಿದೆ. ಬುಧವಾರದ ಹೆಲ್ತ್ ಬುಲೆಟಿನ್ ಪ್ರಕಾರ ದಕ್ಷಿಣ ಕನ್ನಡಲ್ಲಿ 35, ಉಡುಪಿಯಲ್ಲಿ 16 ಹೊಸ ಪ್ರಕರಣಗಳು ದಾಖಲಾಗಿವೆ.
ದಕ್ಷಿಣ ಕನ್ನಡ ಜಿಲ್ಲೆಯ ಪಕ್ಕದ ಕೇರಳದಲ್ಲಿಯೂ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 11,079 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. 24 ಗಂಟೆಯಲ್ಲಿ 123 ಜನರು ಸಾವನ್ನಪ್ಪಿದ್ದಾರೆ. 9,972 ಜನರು ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 97,630 ಆಗಿದೆ.
ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಜಾರಿಯಲ್ಲಿರುವ ಕೋವಿಡ್ ಮಾರ್ಗಸೂಚಿ ಅಡಿ ನಿರ್ಬಂಧಗಳನ್ನು ಅಕ್ಟೋಬರ್ 25ರ ಬೆಳಗ್ಗೆ 6 ಗಂಟೆಯ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿ ಜಿಲ್ಲೆಗಲ್ಲಿ ಕಣ್ಗಾವಲು ಇಡುವುದುನ್ನು ಮುಂದುವರೆಸಬೇಕು ಎಂದು ಅಕ್ಟೋಬರ್ 8ರಂದು ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ. ಕೋವಿಡ್ ಮಾರ್ಗಸೂಚಿ ಪಾಲನೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಬಿಬಿಎಂಪಿ ಆಯುಕ್ತರು, ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದೆ.
ಕರ್ನಾಟಕದಲ್ಲಿ ಕೋವಿಡ್ 2ನೇ ಅಲೆ ನಿಯಂತ್ರಣಕ್ಕೆ ಬಂದಿದೆ. ಆದರೆ ಸೋಂಕು ನಿಯಂತ್ರಣಕ್ಕೆ ಮೂರು ತಿಂಗಳ ಕಾಲ ನಿರ್ಣಾಯಕವಾಗಿದೆ ಎಂಬ ಕೇಂದ್ರ ಸರ್ಕಾರದ ಸೂಚನೆ ಅನ್ವಯ ಮಾರ್ಗಸೂಚಿ ಪಾಲನೆಗೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ.












Click it and Unblock the Notifications