ಸಂಪತ್ ರಾಜ್ ಬಂಧನ ರಾಜಕೀಯ ಪ್ರೇರಿತ: ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್
ಉಡುಪಿ, ನವೆಂಬರ್ 17: ಸಂಪತ್ ರಾಜ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, "ಸಂಪತ್ ರಾಜ್ ಬಂಧನ ರಾಜಕೀಯ ಪ್ರೇರಿತವಾಗಿದೆ. ಪೊಲೀಸರು ಕಾನೂನು ಪಾಲನೆ ಮಾಡಲಿ. ಪೊಲೀಸರ ತನಿಖೆಗೆ ಯಾವುದೇ ವಿರೋಧವಿಲ್ಲ. ಆದರೆ ತನಿಖೆ ನೆಪದಲ್ಲಿ ರಾಜಕೀಯ ಹಿತಾಸಕ್ತಿ ಸಾಧಿಸಬಾರದು" ಎಂದು ಹೇಳಿದ್ದಾರೆ.
ಉಡುಪಿಯಲ್ಲಿ ಡಿಸಿಸಿ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಆಗಮಿಸಿದ ಅವರು, ರಾಜ್ಯದ ಬಿಜೆಪಿ ಸರ್ಕಾರ ಕಾಂಗ್ರೆಸ್ ನಾಯಕರನ್ನು ಗುರಿ ಮಾಡುತ್ತಿದೆ. ಪೊಲೀಸರಿಗಿಂತ ಮೊದಲೇ ಬಿಜೆಪಿಯ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಅವರೇನು ಪೊಲೀಸ್ ಅಧಿಕಾರಿಗಳಾ? ಲಾ ಮಿನಿಸ್ಟರ್ ಗಳಾ? ಎಂದು ಪ್ರಶ್ನಿಸಿದ್ದಾರೆ.
ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ನೂರಕ್ಕೂ ಅಧಿಕ ಜನರ ಬಂಧನವಾಗಿದೆ. ಈ ಘಟನೆ ಪೊಲೀಸ್ ಇಲಾಖೆಯ ವೈಫಲ್ಯದಿಂದ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಾಕಷ್ಟು ಜನ ಅಮಾಯಕರನ್ನು ಬಂಧಿಸಲಾಗಿದೆ. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ನಮ್ಮ ನಾಯಕ. ಅವರ ಜೊತೆಗೆ ಇಡೀ ಕಾಂಗ್ರೆಸ್ ಪಕ್ಷವಿದೆ. ಆದರೆ ರಾಜಕೀಯ ಪ್ರೇರಿತವಾಗಿ ವಿರೋಧ ಪಕ್ಷವನ್ನು ಟಾರ್ಗೆಟ್ ಮಾಡುವುದು ಸರಿಯಲ್ಲ" ಎಂದು ಹೇಳಿದ್ದಾರೆ.

ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ದಾಳಿಗೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ಅಧಿಕಾರಿಗಳು ಮಾಜಿ ಮೇಯರ್ ಸಂಪತ್ ರಾಜ್ ಬಂಧಿಸಿದ್ದರು.












Click it and Unblock the Notifications