ಕರ್ನಾಟಕದ ಈ ಜಿಲ್ಲೆಯಲ್ಲಿ ಸೋಮವಾರ ಶಾಲೆಗಳನ್ನು ತೆರೆಯೋಲ್ಲ
ಉಡುಪಿ, ಆಗಸ್ಟ್ 22; ಕರ್ನಾಟಕದಲ್ಲಿ 9 ರಿಂದ ದ್ವಿತೀಯ ಪಿಯುಸಿ ವರೆಗಿನ ಶಾಲೆ-ಕಾಲೇಜುಗಳನ್ನು ತೆರೆಲು ಸರ್ಕಾರ ಅನುಮತಿ ನೀಡಿದೆ. ಸೋಮವಾರ ಶಾಲೆಗಳು ಆರಂಭವಾಗಲಿದ್ದು, ಜಿಲ್ಲಾಡಳಿತಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿವೆ.
"9ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ಶಾಲಾ-ಕಾಲೇಜುಗಳನ್ನು ಸೋಮವಾರದಿಂದ ತೆರೆಯಲು ಸರ್ಕಾರ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೇ ಶಾಲೆಗೆ ಬರಬಹುದು" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ.
ಶಾಲೆ ಪ್ರಾರಂಭದ ಕುರಿತು ನೂತನ ಶಿಕ್ಷಣ ಸಚಿವರ ಮಹತ್ವದ ಹೇಳಿಕೆ
ಆದರೆ ಉಡುಪಿ ಜಿಲ್ಲೆಯಲ್ಲಿ ಸೋಮವಾರದಿಂದ ಶಾಲೆಗಳು ಬಾಗಿಲು ತೆರೆಯುವುದಿಲ್ಲ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ 2ಕ್ಕಿಂತಲೂ ಹೆಚ್ಚಿರುವುದರಿಂದ ಉಡುಪಿ ಜಿಲ್ಲೆಯಲ್ಲಿ ಸದ್ಯ ಶಾಲೆಗಳನ್ನು ತೆರೆಯುವುದಿಲ್ಲ ಎಂದು ಜಿಲ್ಲಾಡಳಿತ ಹೇಳಿದೆ.
ಶಾಲೆ ತೊರೆದ ಮಕ್ಕಳ ಪತ್ತೆಗೆ ಮನೆ- ಮನೆ ಸಮೀಕ್ಷೆ ನಡೆಸಲು ಬಿಬಿಎಂಪಿಗೆ ಸೂಚನೆ
ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಈ ಕುರಿತು ಮಾಹಿತಿ ನೀಡಿದ್ದಾರೆ, "ಪಾಸಿಟಿವಿಟಿ ರೇಟ್ ಕಡಿಮೆ ಇರುವ ಜಿಲ್ಲೆಗಳಲ್ಲಿ ಸೋಮವಾರದಿಂದ ಶಾಲೆಗಳನ್ನು ಆರಂಭಿಸಲು ಸರ್ಕಾರ ಅನುಮತಿ ನೀಡಿದೆ. ಉಡುಪಿ ಜಿಲ್ಲೆಯಲ್ಲಿ ಶಾಲೆಗಳನ್ನು ಸದ್ಯ ಆರಂಭಿಸುವುದಿಲ್ಲ" ಎಂದು ಹೇಳಿದ್ದಾರೆ.
ಶಾಲಾ ಸಿಬ್ಬಂದಿಗೆ ಕೋವಿಡ್ ಲಸಿಕೆ ನಂತರ ಶಾಲೆ ಓಪನ್: ಸುಧಾಕರ್
"ಜಿಲ್ಲೆಯಲ್ಲಿ ಸದ್ಯಕ್ಕೆ ಕೋವಿಡ್ ಪಾಸಿಟಿವಿಟಿ ದರ ಶೇ 2.5 ಇದೆ. ಅದು ಶೇ 2ಕ್ಕಿಂತ ಕೆಳಗಿಳಿದ ಬಳಿಕವೇ ಶಾಲೆಗಳನ್ನು ತೆರೆಯುವ ಬಗ್ಗೆ ಪರಿಶೀಲಿಸುತ್ತೇವೆ" ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶನಿವಾರದ ಹೆಲ್ತ್ ಬುಲೆಟಿನ್ ಪ್ರಕಾರ ಉಡುಪಿ ಜಿಲ್ಲೆಯಲ್ಲಿ 177 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1685 ಆಗಿದೆ. ಇದುವರೆಗೂ ಜಿಲ್ಲೆಯಲ್ಲಿ 444 ಜನರು ಮೃತಪಟ್ಟಿದ್ದಾರೆ.
9 ರಿಂದ ದ್ವಿತೀಯ ಪಿಯುಸಿ ವರೆಗಿನ ಶಾಲೆ-ಕಾಲೇಜುಗಳನ್ನು ಸೋಮವಾರ ತೆರೆಯಲಾಗುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಬೆಂಗಳೂರು ನಗರದ ಶಾಲೆಗಳಿಗೆ ಭೇಟಿ ನೀಡಲಿದ್ದಾರೆ.
"ಶಾಲೆಗಳ ಆರಂಭಕ್ಕೆ ಎಲ್ಲಾ ರೀತಿಯ ಸಿದ್ಧತೆ ಆಗಿದೆ. ಶಿಕ್ಷಕರಿಗೆ ಲಸಿಕೆ ನೀಡಲಾಗಿದೆ. ಶಾಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. ಅಂತರ ಕಾಯ್ದುಕೊಂಡು ತರಗತಿಗಳನ್ನು ನಡೆಸಲಾಗುತ್ತದೆ. ಪೋಷರ ಒಪ್ಪಿಗೆ ಪಡೆದು ವಿದ್ಯಾರ್ಥಿಗಳು ಶಾಲೆಗೆ ಬರಬೇಕು" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
"ಪೋಷಕರು ಮಕ್ಕಳ ಆರೋಗ್ಯದ ಬಗ್ಗೆ ಗಮನಹರಿಸಬೇಕು. ಒಂದೂವರೆ ವರ್ಷದಿಂದ ವಿದ್ಯಾರ್ಥಿಗಳು ಶಾಲೆಗಳಿಗೆ ಹೋಗಿಲ್ಲ. ಹೀಗಾಗಿ ಹಂತ-ಹಂತವಾಗಿ ಶಾಲೆಗೆ ಬರಬೇಕು ಎಂಬುದು ನಮ್ಮ ಉದ್ದೇಶವಾಗಿದೆ" ಎಂದು ಸಿಎಂ ತಿಳಿಸಿದ್ದಾರೆ.
ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಶಾಲೆಗಳ ಆರಂಭದ ಬಗ್ಗೆ ಮಾತನಾಡಿದ್ದಾರೆ, "9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಮೊದಲ 15 ದಿನ ಪುನಶ್ಚೇತನ ಚಟುವಟಿಕೆ ನಡೆಸಲು ಸೂಚನೆ ನೀಡಲಾಗಿದೆ" ಎಂದು ಹೇಳಿದ್ದಾರೆ.
"ಶಾಲೆ, ಕಾಲೇಜು ಆರಂಭವಾಗದೇ ವಿದ್ಯಾರ್ಥಿಗಳು ಭೌತಿಕ ತರಗತಿಗಳಿಂದ ದೂರ ಉಳಿದಿದ್ದಾರೆ. ಅವರು ತರಗತಿಗೆ ಮರಳುತ್ತಿದ್ದಂತೆ ಪಠ್ಯ ಬೋಧನೆ ಶುರು ಮಾಡದೇ ಕೋವಿಡ್ ಸಂದರ್ಭದ ಅನುಭವಗಳು, ಈ ಅವಧಿಯಲ್ಲಿ ವಿದ್ಯಾರ್ಥಿಗಳು ಏನು ಮಾಡುತ್ತಿದ್ದರು, ಯಾವ ರೀತಿ ಕಲಿಕಾ ಕಾರ್ಯದಲ್ಲಿ ತೊಡಗಿದ್ದರು? ಎಂಬಿತ್ಯಾಗಿ ವಿಚಾರಗಳನ್ನು ಚರ್ಚಿಸಲು ಸೂಚನೆ ನೀಡಲಾಗಿದೆ" ಎಂದು ತಿಳಿಸಿದ್ದಾರೆ.
Recommended Video
"9, 10 ಹೊರತುಪಡಿಸಿ ಉಳಿದ ತರಗತಿಗಳಿಗೂ ಮಕ್ಕಳನ್ನು ಕಳಿಸಲು ಪೋಷಕರು ಉತ್ಸುಕರಾಗಿದ್ದಾರೆ. ಮಕ್ಕಳೂ ಸಹ ಶಾಲೆಗೆ ಬರಲು ಸಿದ್ಧರಾಗಿದ್ದಾರೆ. 9 ರಿಂದ 12ನೇ ತರಗತಿ ಆರಂಭ ಯಶಸ್ವಿಯಾದರೆ ಇತರ ತರಗತಿಗಳ ಆರಂಭಕ್ಕೆ ತೀರ್ಮಾನ ಕೈಗೊಳ್ಳಲಾಗುತ್ತದೆ" ಎಂದು ಸಚಿವರು ಸ್ಪಷ್ಟಪಡಿಸಿದರು.