ಶೋಭಾಗೆ ನಿರ್ಮಲಾ ಸೀತಾರಾಮನ್ ಸಾಥ್;ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಕೆ
ಉಡುಪಿ, ಮಾರ್ಚ್ 26:ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಮೈತ್ರಿ ಅಭ್ಯರ್ಥಿಯ ನಡುವೆ ಜಿದ್ದಾಜಿದ್ದಿ ಸ್ಪರ್ಧೆಗೆ ಅಖಾಡ ಸಿದ್ಧವಾಗಿದೆ. ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆಯ ಪರ್ವ ಆರಂಭವಾಗಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಸದೆ ಶೋಭಾ ಕರದ್ಲಾಜೆ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಜ್ಯೋತಿಷಿಗಳ ಸಲಹೆ ಪಡೆದು ಮಾರ್ಚ್ 22 ರಂದು ಬಿಜೆಪಿ ಅಭ್ಯರ್ಥಿ ಸಂಸದೆ ಶೋಭಾ ಕರಂದ್ಲಾಜೆ ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಸಾಂಕೇತಿಕ ನಾಮಪತ್ರ ಸಲ್ಲಿಸಿದ್ದರು. ಆದರೆ ಇಂದು ಉಡುಪಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ ಬಳಿಕ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಶೋಭಾ ಕರಂದ್ಲಾಜೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಶಾಸಕರು, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಜಿಲ್ಲಾಧ್ಯಕ್ಷರು ಉಪಸ್ಥಿತರಿದ್ದರು.
ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್
ಈ ಸಂದರ್ಭದಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ ಜಿಲ್ಲೆಯಲ್ಲಿ ಉತ್ತಮ ಕೆಲಸ ಮಾಡಿದ್ದು, ಇನ್ನಷ್ಟು ಅಭಿವೃದ್ಧಿ ನಡೆಸಲಿದ್ದಾರೆ. ಅಡಿಕೆ ಬೆಳೆಗಾರರ ಅಭಿವೃದ್ಧಿ ಬಗ್ಗೆಯೂ ಅವರು ತಿಳಿಸಿದ್ದು, ಸಲಹೆ ನೀಡಿದ್ದೇನೆ. ದೇಶಕ್ಕಾಗಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕಿದೆ ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ, ಮೋದಿಯವರನ್ನು ದೇಶದಲ್ಲಿ ಮತ್ತೊಮ್ಮೆ ಪ್ರಧಾನಿ ಮಾಡುವ ಅವಕಾಶ ಸಿಕ್ಕಿದೆ. 5 ವರ್ಷದಲ್ಲಿ ಭ್ರಷ್ಟಚಾರ ರಹಿತ ಆಡಳಿತವನ್ನು ಮೋದಿ ನೀಡಿದ್ದಾರೆ. ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿ, ಶಸ್ತ್ರಾಸ್ತ್ರ ಉತ್ಪನ್ನಕ್ಕೆ ಮುನ್ನುಡಿ ಹಾಕಿದ್ದಾರೆ ಎಂದರು.
ಪುಲ್ವಾಮಾ ಘಟನೆ ಬಳಿಕ ಇಡೀ ಪ್ರಪಂಚ ನಮ್ಮ ಜತೆ ನಿಂತಿತ್ತು. ಮೋದಿ ನೀಡಿದ ಯೋಜನೆಯನ್ನು ಜಿಲ್ಲೆಗಳಿಗೆ ತರುವ ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇವೆ. ರಾಜ್ಯದ ಮೊದಲ ಸಖಿ ಸೆಂಟರ್, ದೇಶದ ಮೊದಲ ಸರ್ಟಿಫಿಕೇಶನ್ ಸೆಂಟರ್ ಕೂಡ ಉಡುಪಿಯಲ್ಲಾಗಿದೆ. ಮೋದಿಯವರನ್ನು ಮತ್ತೊಮ್ಮೆ ಗೆಲ್ಲಿಸಲು ಜನರು ಬೆಂಬಲ ನೀಡಬೇಕು ಎಂದು ಶೋಭಾ ಆಗ್ರಹಿಸಿದರು.