ಭಜರಂಗದಳ ಕಾರ್ಯಕರ್ತರ ಬಂಧನ ಖಂಡನೀಯ: ಶೋಭಾ ಕರಂದ್ಲಾಜೆ
ಉಡುಪಿ, ಜೂನ್.06: ದನದ ವ್ಯಾಪಾರಿ ಹುಸೈನಬ್ಬ ಸಂಶಯಾಸ್ಪದ ಸಾವು ಪ್ರಕರಣದ ಹಿನ್ನೆಲೆಯಲ್ಲಿ ಭಜರಂಗದಳ ಕಾರ್ಯಕರ್ತರ ಭಾಗಿ ಇದೆ ಎಂದು ಈಗಾಗಲೇ ಮೂವರನ್ನು ಬಂಧಿಸಿ 302 ಕೇಸು ದಾಖಲಿಸಿರುವುದನ್ನು ಖಂಡಿಸಿ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಜಿಲ್ಲೆಯ ಬಿಜೆಪಿ ನಾಯಕರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಹುಸೈನಬ್ಬಗೆ ಹೃದಯ ಸಂಬಂಧಿ ಕಾಯಿಲೆಯಿದೆ. ಹೃದಯ ಶಸ್ತ್ರ ಚಿಕಿತ್ಸೆ ಕೂಡ ನಡೆದಿದೆ. ಹಾಗಾಗಿ ಹುಸೈನಬ್ಬ ಸಾವು ಕೊಲೆಯಾ ಅಥವಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರಾ ಎಂಬುದು ಇನ್ನು ತಿಳಿದು ಬಂದಿಲ್ಲ. ಮರಣೋತ್ತರ ಪರೀಕ್ಷೆಯ ವರದಿ ಬಂದ ಮೇಲೆ ಪೊಲೀಸ್ ಈ ಕೇಸು ದಾಖಲಿಸಬೇಕಿತ್ತು.
ಯಾವುದೇ ಮಾಹಿತಿ ಇಲ್ಲದೆ ಕೇಸು ದಾಖಲಿಸಿ, ಭಜರಂಗದಳದ ಕಾರ್ಯಕರ್ತರನ್ನು ಬಂಧಿಸಿರುವುದು ಖಂಡನೀಯ. ಈ ಬಗ್ಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಎಚ್ಚೆತ್ತುಕೊಳ್ಳಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಪ್ರತಿಭಟನೆಯಲ್ಲಿ ಜಿಲ್ಲೆಯ 5 ಶಾಸಕರೂ ಭಾಗಿಯಾಗಿದ್ದು, ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಪ್ರತಿಭಟನೆ ಮಾಡಿದರು.
ರಾಜ್ಯ ಸರ್ಕಾರ ರಾಜ್ಯದಲ್ಲಿ ನಡೆಯುವ ಅಕ್ರಮ ಗೋಸಾಗಾಟಕ್ಕೆ ಕಡಿವಾಣ ಹಾಕಬೇಕು. ಪರವಾನಿಗೆ ಇಲ್ಲದೆ ಅದೆಷ್ಟೋ ಖಸಾಯಿಖಾನೆಗಳು ಕಾರ್ಯನಿರ್ವಹಿಸುತ್ತಿದ್ದು, ಅವೆಲ್ಲವನ್ನು ವಶಕ್ಕೆ ಪಡೆದುಕೊಳ್ಳಬೇಕೆಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದರು.












Click it and Unblock the Notifications