ಮೈತ್ರಿ ಸರ್ಕಾರ ಬೀಳಿಸಲು ಸಿದ್ದರಾಮಯ್ಯರಿಂದಲೇ ಯತ್ನ:ಶೋಭಾ ಕರಂದ್ಲಾಜೆ
ಉಡುಪಿ, ಜನವರಿ 30:ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿರುವ ಸಿದ್ದರಾಮಯ್ಯ ತಮ್ಮ ಶಾಸಕರನ್ನು ಸಿಎಂ ಕುಮಾರ ಸ್ವಾಮಿ ಅವರ ವಿರುದ್ಧ ಎತ್ತಿಕಟ್ಟುತ್ತಿದ್ದಾರೆ. ಮೈತ್ರಿ ಸರ್ಕಾರ ಬೀಳಿಸಲು ಸಿದ್ದರಾಮಯ್ಯರಿಂದಲೇ ಯತ್ನ ನಡೆಯುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
ಉಡುಪಿಯ ಉಪ್ಪೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸೃಷ್ಟಿಯಾಗಿರವ ಸಮಸ್ಯೆಗಳಿಗೆ ಮಾಜಿ ಸಿಎಂ ಸಿದ್ದರಾಮಯ್ಯರವರೇ ರಿಂಗ್ ಮಾಸ್ಟರ್. ಕಳೆದ 7 ತಿಂಗಳಿನಿಂದ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಸಮ್ಮಿಶ್ರ ಸರ್ಕಾರ ತೆವಳುತ್ತಾ ಸಾಗುತ್ತಿದೆ. ಕಾಂಗ್ರೆಸ್ ನೊಳಗೆ ಆಂತರಿಕ ಅಚ್ಚಾಟ ಆರಂಭವಾಗಿದೆ. ಕಾಂಗ್ರೆಸ್- ಜೆಡಿಎಸ್ ನಾಯಕರ ನಡುವೆ ನಡೆಯುತ್ತಿರುವ ವೈಮನಸ್ಸಿಗೂ ಸಿದ್ದರಾಮಯ್ಯನವರೇ ರಿಂಗ್ ಮಾಸ್ಟರ್ ಎಂದು ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದರು.
ಸಿದ್ದರಾಮಯ್ಯನವರಿಗೆ ಮತ್ತೊಮ್ಮೆ ಸಿಎಂ ಆಗುವ ಆಸೆ ಶುರುವಾಗಿದೆ. ಹಾಗಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರ ಕಾಲೆಳೆಯುತ್ತಿದ್ದಾರೆ.

ಸಿದ್ದರಾಮಯ್ಯನವರಿಗೆ ಯಾರ ಮೇಲೂ ವಿಶ್ವಾಸವಿಲ್ಲ. ಮಹಿಳೆಯರ ಬಗ್ಗೆ ಗೌರವ ಇಲ್ಲ. ಚಾಮುಂಡೇಶ್ವರಿಯಲ್ಲಿ ಸೋತ ಮೇಲೆ ಅವರು ಹತಾಶರಾಗಿದ್ದಾರೆ. ಮೈಸೂರಿಗೆ ಹೋದಾಗೆಲ್ಲಾ ಸಿಟ್ಟು, ಜಗಳ ಮಾಡ್ತಾರೆ. ಪ್ರಜಾತಂತ್ರ ವ್ಯವಸ್ಥೆ ಮೇಲೆ ಅವರಿಗೆ ವಿಶ್ವಾಸವಿಲ್ಲ ಎಂದು ಕಿಡಿಕಾರಿದರು.
ಸರಕಾರ ಬೀಳಿಸಲು ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್ ಮಾಡುತ್ತಿದ್ದರೂ, ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸುತ್ತಿದೆ ಎಂದು ಆರೋಪಿಸಲಾಗುತ್ತಿದೆ. ಸಿಎಂ ಕುಮಾರಸ್ವಾಮಿ ಅಸಹಾಯಕತೆ ಹೊರಹಾಕಿ, ಜನರಿಂದ ಸಹಾನುಭೂತಿ ಗಿಟ್ಟಿಸಲು ಅಧಿಕಾರ ತ್ಯಜಿಸೋ ಹೇಳಿಕೆ ನೀಡಿದ್ದಾರೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದರು.












Click it and Unblock the Notifications