ಕಾಂಗ್ರೆಸ್ ಸೇರಲು ಶ್ರೀನಿವಾಸ ಶೆಟ್ಟರಿಗೆ ಸಿದ್ದರಾಮಯ್ಯ ಆಹ್ವಾನ!
ಉಡುಪಿ, ಸೆಪ್ಟೆಂಬರ್ 15 : ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಕಾಂಗ್ರೆಸ್ ಸೇರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಹ್ವಾನ ನೀಡಿದ್ದಾರೆ. 'ಯಾವ ಪಕ್ಷ ಸೇರಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ' ಎಂದು ಶ್ರೀನಿವಾಸ ಶೆಟ್ಟಿ ಹೇಳಿದ್ದಾರೆ.
ಶುಕ್ರವಾರ ಕುಂದಾಪುರ ಕ್ಷೇತ್ರದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಈ ಕುರಿತು ಮಾಹಿತಿ ನೀಡಿದ್ದಾರೆ. 'ನಾನು ಬಿಜೆಪಿ ಬೆಂಬಲಿಸುತ್ತೇನೆ ಎಂದು ತಿಳಿದಿದ್ದರೂ ಸಿದ್ದರಾಮಯ್ಯ ಅವರು ಪಕ್ಷ ಸೇರುವಂತೆ ಆಹ್ವಾನ ನೀಡಿದ್ದಾರೆ' ಎಂದರು.

'ಬಿಜೆಪಿ ಅಥವ ಕಾಂಗ್ರೆಸ್ ಯಾವ ಪಕ್ಷ ಸೇರಬೇಕು? ಎಂಬುದನ್ನು ಇನ್ನೂ ನಿರ್ಧರಿಸಿಲ್ಲ. ಸೂಕ್ತ ಸಮಯದಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳುತ್ತೇನೆ' ಎಂದು ಶ್ರೀನಿವಾಸ ಶೆಟ್ಟಿ ಹೇಳಿದರು.
ಕುಂದಾಪುರದ ವಾಜಪೇಯಿ ಎಂದೇ ಹಾಲಾಡಿ ಶ್ರೀನಿವಾಸ ಶೆಟ್ಟಿ ಪ್ರಸಿದ್ಧಿ ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದರೂ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳಿಗೆ ಸೋಲಿನ ರುಚಿ ತೋರಿಸಿವಷ್ಟು ಜನ ಬೆಂಬಲ ಹಾಲಾಡಿ ಅವರಿಗಿದೆ. ಆದ್ದರಿಂದ, ಅವರನ್ನು ಪಕ್ಷಕ್ಕೆ ಸೆಳೆಯಲು ಎರಡೂ ಪಕ್ಷಗಳು ಪ್ರಯತ್ನ ನಡೆಸಿವೆ.
2013ರ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಮಲ್ಯಾಡಿ ಶಿವರಾಮ್ ಶೆಟ್ಟಿ ಹಾಗೂ ಬಿಜೆಪಿಯಿಂದ ಕಿಶೋರ್ ಕುಮಾರ್ ಸ್ಪರ್ಧೆಯಲ್ಲಿದ್ದರೂ ಹಾಲಾಡಿ ಅವರಿಗೆ ಪ್ರಬಲ ಪೈಪೋಟಿ ನೀಡಲು ಸಾಧ್ಯವಾಗಿರಲಿಲ್ಲ. ಭಾರೀ ಅಂತರದಿಂದಲೇ ಹಾಲಾಡಿ ಗೆಲುವು ಸಾಧಿಸಿದ್ದರು.
1999ರಲ್ಲಿ ರಾಜಕೀಯ ಜೀವನ ಆರಂಭಿಸಿದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಕಾಂಗ್ರೆಸ್ ಪ್ರಭಾವಿ ನಾಯಕ ಪ್ರತಾಪಚಂದ್ರ ಶೆಟ್ಟಿ, 2004ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ಶೆಟ್ಟಿ, 2008ರಲ್ಲಿ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು ಸೋಲಿಸಿದ್ದರು.











Click it and Unblock the Notifications