ಎಸ್.ಎಲ್. ಭೈರಪ್ಪ ಅವರಿಗೆ ಕೋಟ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ
ಉಡುಪಿ, ಅಕ್ಟೋಬರ್ 10: ಡಾ. ಕೋಟ ಶಿವರಾಮ ಕಾರಂತ ಅವರ ಜನ್ಮದಿನದಂದು, ಕೋಟತಟ್ಟು ಗ್ರಾಮ ಪಂಚಾಯಿತಿ ಹಾಗೂ ಕೋಟ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ನೀಡುತ್ತಿರುವ ಪ್ರತಿಷ್ಠಿತ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಖ್ಯಾತ ಕಾದಂಬರಿಕಾರ ಡಾ.ಎಸ್ .ಎಲ್ ಭೈರಪ್ಪ ಅವರಿಗೆ ಇಂದು ಪ್ರದಾನ ಮಾಡಲಾಯಿತು.
ಈ ಮುನ್ನ ಕೋಟದ ಕಾರಂತ ಥೀಮ್ ಪಾರ್ಕ್ನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ನಡೆಸುವುದಾಗಿ ತಿಳಿಸಲಾಗಿತ್ತು. ಆದರೆ ಕೊರೊನಾ ಕಾರಣದಿಂದಾಗಿ ಇದೇ ಮೊದಲ ಬಾರಿಗೆ ಪ್ರಶಸ್ತಿ ಪುರಸ್ಕೃತರ ಊರಿನಲ್ಲಿಯೇ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
2020ನೇ ಸಾಲಿನ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಪುರಸ್ಕೃತ ಡಾ. ಎಸ್.ಎಲ್. ಭೈರಪ್ಪ ಅವರಿಗೆ ಮೈಸೂರಿನ ಪ್ರಮತಿ ಸ್ಕೂಲಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದಾನಿಸಿ ಗೌರವಿಸಲಾಯಿತು. ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಯ ರೂವಾರಿ, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಕಳೆದ 15 ವರ್ಷಗಳಿಂದ, ಅಂದರೆ 2005ರಿಂದ ವೀರಪ್ಪ ಮೊಯ್ಲಿ, ನ್ಯಾ.ವೆಂಕಟಾಚಲಯ್ಯ, ಗಿರೀಶ್ ಕಾಸರವಳ್ಳಿ, ರವಿ ಬೆಳಗೆರೆ, ಡಾ.ಮೋಹನ್ ಆಳ್ವ, ಸಾಲುಮರದ ತಿಮ್ಮಕ್ಕ ಸಹಿತ 15 ಮಂದಿ ಸಾಧಕರಿಗೆ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಈಗ ಈ ಸಾಧಕರ ಸಾಲಿಗೆ ನಾಡಿನ ಹಿರಿಯ ಸಾಹಿತಿ, ಸರಸ್ವತಿ ಸಮ್ಮಾನ ಪುರಸ್ಕೃತ ಎಸ್.ಎಲ್ ಭೈರಪ್ಪ ಅವರು ಸೇರಿದ್ದಾರೆ.












Click it and Unblock the Notifications