ಮೀನುಗಾರರ ದೋಣಿ ಮೇಲ್ದರ್ಜೆಗೇರಿಸಲು ಸಹಾಯಧನ: ಸಿಎಂ ಬೊಮ್ಮಾಯಿ
ಉಡುಪಿ, ನವೆಂಬರ್ 07: ಮುಂದಿನ ದಿನಗಳಲ್ಲಿ ಮೀನುಗಾರರು ಬಳಸುವ ಸೀಮೆ ಎಣ್ಣೆ ಮೋಟರ್ವುಳ್ಳ ದೋಣಿಗಳನ್ನು ಪೆಟ್ರೋಲ್ ಮೋಟರ್ ದೋಣಿಗಳಿಗೆ ಮೇಲ್ದರ್ಜೆಗೆ ಏರಿಸಲು ಸರ್ಕಾರ ಸಹಾಯ ಧನ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ಜಿಲ್ಲೆಯಲ್ಲಿ ನಡೆದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಜನಸಂಕಲ್ಪ ಯಾತ್ರೆ ಉದ್ಘಾಟಿಸಿ ಮಾತನಾಡಿದ ಅವರು, ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಿದೆ. ಮೀನುಗಾರರ ಬೇಡಿಕೆಯಂತೆ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ ಮೀನುಗಾರರಿಗೆ ಸೀಮೆ ಎಣ್ಣೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಒದಗಿಸಲಾಗುವುದು.
ಕರಾವಳಿ ಭಾಗದಲ್ಲಿ ಬೆಳೆದ ಕುಚಲಕ್ಕಿಯನ್ನು ಖರೀದಿಸಿ ಕರಾವಳಿ ಜಿಲ್ಲೆಗಳಲ್ಲಿ ಪಡಿತರ ಮೂಲಕ ವಿತರಿಸಲು ಕ್ರಮ ಕೈಗೊಳ್ಳಲಾಗುವುದು. 8 ಮೀನುಗಾರ ಬಂದರುಗಳನ್ನು ಅಭಿವೃದ್ಧಿಪಡಿಸಲು ಆಯವ್ಯಯದಲ್ಲಿ ಅನುದಾನ ಕಲ್ಪಿಸಲಾಗಿದ್ದು, ಪ್ರಕ್ರಿಯೆ ಪ್ರಾರಂಭವಾಗಿದೆ. ಈ ವರ್ಷ 100 ಹೈ ಸ್ಪೀಡ್ ದೋಣಿಗಳನ್ನು ನೀಡಲು ಕ್ರಮವಹಿಸಲಾಗಿದ್ದು, ಅದರಲ್ಲಿ ಶೇ 40% ರಷ್ಟು ಸಬ್ಸಿಡಿ ವ್ಯವಸ್ಥೆ ಇದೆ ಎಂದು ಹೇಳಿದರು.
ಬಂದರು ಅಭಿವೃದ್ಧಿಗೆ ಕೇಂದ್ರದಿಂದ ರೂ.1774 ಕೋಟಿ
ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಕೋವಿಡ್ ನಂತರ ಇಡಿ ವಿಶ್ವವೇ ಆರ್ಥಿಕ ಸಂಕಷ್ಟದಲ್ಲಿದೆ. ಭಾರತ ಮಾತ್ರ ಶೇ.7% ರಷ್ಟು ಪ್ರಗತಿ ಸಾಧಿಸುತ್ತಿದೆ. ಕೇಂದ್ರ ಸರ್ಕಾರ ಸಾಗರ ಮಾಲಾ ಯೊಜನೆ ಅಡಿಯಲ್ಲಿ ಕರಾವಳಿ ಬಂದರು ಅಭಿವೃದ್ಧಿಗೆ 1774 ಕೋಟಿ ರೂ. ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಅಭಿವೃದ್ಧಿಗೆ ಸಿಆರ್ಝಡ್ ನಿಯಮಗಳಿಗೆ ವಿನಾಯಿತಿಗೆ ಕೇಂದ್ರ ಸರ್ಕಾರ ಅನುಮೋದನೆ ಕೊಟ್ಟಿದೆ ಎಂದರು.
ಕರಾವಳಿ ಜಿಲ್ಲೆಗಳಲ್ಲಿ 2 ಲಕ್ಷ ಕೋಟಿ ಬಂಡವಾಳ ಹೂಡಿಕೆ
ಕರಾವಳಿ ಜಿಲ್ಲೆಗಳಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಮುಂದಿನ 5 ವರ್ಷದಲ್ಲಿ 2 ಲಕ್ಷ ಕೋಟಿ ಬಂಡವಾಳ ಹೂಡಿಕೆಯಾಗಲಿದೆ. ಪ್ರಧಾನಮಂತ್ರಿಯವರು ನಾಡಿದ್ದು ಬೆಂಗಳೂರಿಗೆ ಆಗಮಿಸಿ ವಂದೇ ಭಾರತ ರೈಲಿಗೆ ಚಾಲನೆ ನೀಡಲಿದ್ದಾರೆ. ಕೊಂಕಣ ರೈಲಿನ ವಿದ್ಯುದೀಕರಣ ಯೋಜನೆ ರಾಜ್ಯವನ್ನು ಉತ್ತರ ಭಾರತಕ್ಕೆ ಸಂಪರ್ಕ ಕಲ್ಪಿಸಲಿದೆ. ಮಂಗಳೂರು, ಕಾರವಾರ ಬಂದರುಗಳನ್ನು ಪ್ರಮುಖ ನಗರಗಳಿಗೆ ಜೋಡಿಸುವ ಗತಿ ಶಕ್ತಿ ಯೋಜನೆ ಕೈಗೊಳ್ಳಲಾಗುತ್ತಿದೆ ಎಂದು ಬೊಮ್ಮಾಯಿ ವಿವರಿಸಿದರು.
5,000 ಮೀನುಗಾರರಿಗೆ ಮನೆ
ಡಬಲ್ ಇಂಜನ್ ಸರ್ಕಾರ ಅಸ್ತಿತ್ವದಲ್ಲಿದೆ, ಕೇಂದ್ರದಲ್ಲಿ ಮೋದಿ ನಾಯಕತ್ವ ಹಾಗು ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಮತ್ತೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರುವ ವಿಶ್ವಾಸ ಇದೆ ಎಂದರು. ರೈತರಿಗೆ ಕೃಷಿ ಚಟುವಟಿಕೆಗೆ ಡೀಸೆಲ್ ಯೋಜನೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ, ವಿದ್ಯಾನಿಧಿ ಯೋಜನೆಯನ್ನು ರೈತರ, ರೈತ ಕೂಲಿಕಾರರ, ನೇಕಾರರ, ಟ್ಯಾಕ್ಸಿ ಅಟೋಚಾಲಕರ ಮಕ್ಕಳಿಗೆ ನೀಡಲಾಗುತ್ತಿದೆ. ವಿದ್ಯಾನಿಧಿ ಯೋಜನೆ ಮೂಲಕ 2 ಲಕ್ಷ ಮೀನುಗಾರರ ಮಕ್ಕಳಿಗೆ20 ಲಕ್ಷ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ನೀಡಿದ್ದೇವೆ. ಮೀನುಗಾರರ 5000 ಮನೆಗಳಿಗೆ ಮಂಜೂರಾತಿ ನೀಡಲಾಗಿದೆ.
ಕಾಂಗ್ರೆಸ್ ನಾಯಕರು ಸಾಮಾಜಿಕ ನ್ಯಾಯದ ಬಗ್ಗೆ ಭಾಷಣ ಮಾಡುತ್ತಾರೆ. ಹಿಂದುಳಿದ ವರ್ಗದ ಜನರು ಕಾಂಗ್ರೆಸ್ ಅನ್ನು ತಿರಸ್ಕರಿಸಿದ್ದಾರೆ. ಈಗಿರುವ ಕಾಂಗ್ರೆಸ್ ಶಾಸಕರು ತಮ್ಮ ಕ್ಷೇತ್ರ ಉಳಿಸಿಕೊಳ್ಳಲಿ. ಅಲ್ಪಸಂಖ್ಯಾತರಿಗೂ ಮೋಸ ಮಾಡುವ ಕಾಂಗ್ರೆಸ್ ತುಷ್ಟೀಕರಣದ ರಾಜಕಾರಣ ಮಾಡುತ್ತಿದೆ. ಹಾಸ್ಟೆಲ್ ಕಟ್ಟಡ, ದಿಂಬು ಹಾಸಿಗೆ, ಅನ್ನಭಾಗ್ಯ ಯೋಜನೆ, ಸೋಲಾರ ಯೋಜನೆ ಹೀಗೆ ಕಾಂಗ್ರೆಸ್ ಅವಧಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಅವರಿಗೆ ಜನರೆ ತಕ್ಕ ಪಾಠ ಕಲಿಸುತ್ತಾರೆ.
ಮೇಲ್ವರ್ಗದ ಬಡವರಿಗೂ ಶೇ. 10ರಷ್ಟು ಮೀಸಲಾತಿ
ಎಸ್ಸಿ, ಎಸ್ಟಿ ಜನರಿಗೆ ಸ್ವಾವಲಂಬನೆಯ ಬದುಕು ಕಟ್ಟಿಕೊಳ್ಳಲು ಶಿಕ್ಷಣ ಹಾಗೂ ಉದ್ಯೋಗದಲ್ಲಿ ಆದ್ಯತೆ ನೀಡುತ್ತಿದ್ದೇವೆ. ಸುಪ್ರೀಂಕೋರ್ಟ್ ಸಹ ಕೇಂದ್ರ ಜಾರಿಗೆ ತಂದ ಮೇಲ್ವರ್ಗದ ಬಡವರಿಗೂ ಶೇ.10ರಷ್ಟು ಮೀಸಲಾತಿ ನೀಡುವ ತೀರ್ಮಾನ ಎತ್ತಿ ಹಿಡಿದಿದೆ. ಕರಾವಳಿ ಭಾಗದ ಜನರು ಜನಸಂಕಲ್ಪ ಯಾತ್ರೆಯನ್ನು ಅಭೂತಪೂರ್ವ ವಾಗಿ ಯಶಸ್ವಿಗೊಳಿಸಿ, ಭಾರತೀಯ ಜನತಾ ಪಕ್ಷಕ್ಕೆ ಶಕ್ತಿ ತುಂಬಿದ್ದಾರೆ. 2023ರಲ್ಲಿ ನಿಮ್ಮ ಆಶೀರ್ವಾದದಿಂದ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಕೋಟಾ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ, ವಿ. ಸುನಿಲ್ ಕುಮಾರ್, ಕೇಂದ್ರ ಕೃಷಿ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಶಾಸಕರಾದ ಲಾಲಾಜಿ ಮೆಂಡನ್, ರಘುಪತಿ ಭಟ್ ಮತ್ತಿತರರು ಉಪಸ್ಥಿತರಿದ್ದರು.