ಉಡುಪಿ; ಜೋಡಿ ಕೊಲೆ ಆರೋಪಿಗೆ ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್
ಉಡುಪಿ, ಜನವರಿ 21: ಕೋಟದಲ್ಲಿ ಜನವರಿ 26, 2019ರಂದು ನಡೆದಿದ್ದ ಯತೀಶ್ ಕಾಂಚನ್ ಹಾಗೂ ಭರತ್ ಜೋಡಿ ಕೊಲೆ ಪ್ರಕರಣದ ಆರೋಪಿಗೆ ಹೈ ಕೋರ್ಟ್ ನಲ್ಲಿ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ.
ಈ ಜಾಮೀನನ್ನು ರದ್ದುಗೊಳಿಸುವಂತೆ ಕೊಲೆಯಾದ ಭರತ್ ತಾಯಿ ಪಾರ್ವತಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಅರ್ಜಿದಾರರ ಮನವಿಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್, ಜಿಲ್ಲಾ ಪಂಚಾಯತ್ ಸದಸ್ಯ ಬಾರಿಕೆರೆ ರಾಘವೇಂದ್ರ ಕಾಂಚನ್ಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ವಜಾಗೊಳಿಸಿ ಆದೇಶ ನೀಡಿದೆ.
ಕರಾವಳಿಯಲ್ಲಿ ಮೊದಲ ಬಾರಿಗೆ ಹತ್ಯಾ ಪ್ರಕರಣದಲ್ಲಿ ಆರೋಪಿಗಳ ಪರವಾಗಿ ಪೊಲೀಸರು ಶಾಮೀಲಾಗಿದ್ದ ಪ್ರಕರಣ ಇದಾಗಿತ್ತು. ಅಲ್ಲದೇ ಜಿಲ್ಲಾ ಪಂಚಾಯತ್ ಸದಸ್ಯರು ಕೊಲೆಗೆ ಸಂಚು ಹೂಡಿದ್ದರು ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ರಾಘವೇಂದ್ರ ಕಾಂಚನ್ ಅವರನ್ನು ಆರೋಪಿಯನ್ನಾಗಿ ಮಾಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಕೆಳ ನ್ಯಾಯಾಲಯದಲ್ಲಿ ಜಾಮೀನು ದೊರೆಯದಿದ್ದ ಕಾರಣಕ್ಕೆ ಜಿಲ್ಲಾ ಪಂಚಾಯತ್ ಸದಸ್ಯ ರಾಘವೇಂದ್ರ ಕಾಂಚನ್ ಹೈಕೋರ್ಟಿನ ಮೊರೆ ಹೋಗಿ ಅಲ್ಲಿ ಶರತ್ತು ಬದ್ಧ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಉಚ್ಛ ನ್ಯಾಯಾಲಯದಲ್ಲಿ ಜಾಮೀನು ದೊರೆಯುತ್ತಿದ್ದಂತೆ ಹತ್ಯೆಯಾದ ಭರತ್ ತಾಯಿ ಪಾರ್ವತಿ, ತನ್ನ ಮಗನ ಸಾವಿಗೆ ನ್ಯಾಯ ದೊರಕಿಸಿಕೊಡಿ ಎಂದು ಸುಪ್ರೀಂ ಕೋರ್ಟ್ ನ ಕದ ತಟ್ಟಿದ್ದರು. ಇದೀಗ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಆದೇಶ ನೀಡಿದೆ.












Click it and Unblock the Notifications