Rain: ಉಡುಪಿಯಲ್ಲಿ ಮಳೆ ಅವಾಂತರ, ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸ್ಥಳದಲ್ಲೇ ಸಾವು
ಉಡುಪಿ, ಮೇ 19: ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿ ನಡೆದಿದೆ. ಇರ್ಷಾದ್ ( 56 ) ಮೃತ ದುರ್ದೈವಿ.
ನಿನ್ನೆ ತಡರಾತ್ರಿ ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದೆ. ಬಿರುಗಾಳಿ ಜೊತೆಗೆ ಭರ್ಜರಿ ಮಳೆಯಾಗಿದ್ದು, ಗಾಳಿಗೆ ವಿದ್ಯುತ್ ತಂತಿ ತುಂಡಾಗಿ ರಸ್ತೆಗೆ ಬಿದ್ದಿದೆ. ಇಂದು ಬೆಳಗ್ಗೆ ಇರ್ಷಾದ್ ಮನೆಯಿಂದ ರಸ್ತೆಗೆ ಬಂದ ಸಂದರ್ಭದಲ್ಲಿ ವಿದ್ಯುತ್ ತಂತಿ ನೆಲದ ಮೇಲೆ ಬಿದ್ದಿರುವುದನ್ನು ಗಮನಿಸದೇ ತುಳಿದಿದ್ದಾರೆ. ಈ ವೇಳೆ ಏಕಾಏಕಿ ವಿದ್ಯುತ್ ಪ್ರವಹಿಸಿದ್ದು, ಇರ್ಷಾದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆ ಸಂಭವಿಸುತ್ತಿದ್ದಂತೆ ಸ್ಥಳೀಯರು ಮೆಸ್ಕಾಂಗೆ ವಿಷಯ ತಿಳಿಸಿದ್ದು, ಘಟನಾ ಸ್ಥಳಕ್ಕಾಗಮಿಸಿದ ಮೆಸ್ಕಾಂ ಸಿಬ್ಬಂದಿ ತುಂಡಾಗಿದ್ದ ವಿದ್ಯುತ್ ತಂತಿ ಸರಿಪಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಘಟನಾ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಮತ್ತು ಬೈಂದೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುಡಿಸಲು ಹಾಗೂ ಗೊಬ್ಬರ ಅಂಗಡಿಗೆ ನುಗ್ಗಿದ ಚರಂಡಿ ನೀರು
ಚಿಕ್ಕಮಗಳೂರು ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮನೆಗಳು ಹಾನಿಗೊಳಗಾಗುತ್ತಿವೆ. ಇದರಿಂದ ಜನ ಜೀವನ ಅಸ್ತವ್ಯಸ್ತಗೊಳ್ಳುತ್ತಿದೆ. ಚಿಕ್ಕಮಗಳೂರು ತಾಲೂಕಿನ ಉದ್ದೇಬೋರನಹಳ್ಳಿಯಲ್ಲಿ 2 ಗುಡಿಸಲುಗಳು ಮತ್ತು ಗೋಡೌನ್ಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಚರಂಡಿ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿದ್ದರಿಂದ ಈ ರೀತಿ ಆಗಿದೆ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರೀ ಮಳೆಗೆ ಮನೆಯ ಮೇಲೆ ಬಿದ್ದ ಮರ: ಪೀಠೋಪಕರಣಗಳು ನೀರುಪಾಲು
ಚಿಕ್ಕಮಗಳೂರು ತಾಲೂಕಿನಲ್ಲಿ ಭಾರೀ ಮಳೆಗೆ ಮನೆಯ ಮೇಲೆ ಮರವೊಂದು ಬಿದ್ದು ಮನೆಯಲ್ಲಿದ್ದ ಪೀಠೋಪಕರಣಗಳು, ಆಹಾರ ಪದಾರ್ಥ ನಾಶವಾಗಿರುವ ಘಟನೆ ನಡೆದಿದೆ. ಆಲ್ಲೂರು ಸಮೀಪ ಮಳೆಯಾಗಿದ್ದರಿಂದ ಕೆಸ್ಕೆ ಗ್ರಾಮದಲ್ಲಿ ಮನೆಯೊಂದರ ಮೇಲೆ ಮರ ಬಿದ್ದಿದೆ. ಪರಿಣಾಮ ಮನೆ ಸಂಪೂರ್ಣವಾಗಿ ಬಿದ್ದು ಹೋಗಿದ್ದು, ಗೃಹಪಯೋಗಿ ವಸ್ತುಗಳು ನಾಶವಾಗಿವೆ. ಅದೃಷ್ಟವಶಾತ್ ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.












Click it and Unblock the Notifications