"ರಾಮಮಂದಿರ ಟ್ರಸ್ಟ್ ಗೆ ನೇಮಿಸಿದ್ದು ದಕ್ಷಿಣ ಭಾರತಕ್ಕೇ ಸಂದ ಗೌರವ"
ಉಡುಪಿ, ಫೆಬ್ರವರಿ 07: ರಾಮಮಂದಿರ ಟ್ರಸ್ಟ್ ಗೆ ತಮ್ಮನ್ನು ನೇಮಿಸಿದ್ದು ದಕ್ಷಿಣ ಭಾರತಕ್ಕೇ ಸಂದ ಗೌರವ ಎಂದು ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಹೇಳಿದ್ದಾರೆ.
ಉಡುಪಿಯ ಪೇಜಾವರ ಮಠದಲ್ಲಿ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಶ್ರೀಗಳು, "ದಕ್ಷಿಣ ಭಾರತದಲ್ಲಿಯೇ ಒಬ್ಬರಿಗೆ ಅವಕಾಶ ಒದಗಿಬಂದಿದೆ. ಆ ವ್ಯಕ್ತಿ ನಾನು ಆಗಿರುವುದಕ್ಕೆ ಸಂತೋಷವಾಗುತ್ತಿದೆ. ಇದು ಗುರುಗಳ ಸೇವೆಗೆ ಸಂದ ಗೌರವ" ಎಂದು ತಮ್ಮ ಗುರು ಪೇಜಾವರ ವಿಶ್ವೇಶತೀರ್ಥರನ್ನು ಸ್ಮರಿಸಿದ್ದಾರೆ. ಇದು ತುಂಬಾ ದೊಡ್ಡ ಜವಾಬ್ದಾರಿ ಎಂದಿರುವ ಶ್ರೀಗಳು, ಈ ಜವಾಬ್ದಾರಿ ನಿರ್ವಹಿಸಲು ಸಮಾಜದ ಎಲ್ಲರ ಸಹಕಾರ ಬೇಕು. ವಿಶ್ವಸ್ಥನಾಗಲು ಒಪ್ಪಿಗೆ ನೀಡಿ ಸ್ವೀಕೃತಿ ಪತ್ರ ಕಳುಹಿಸಿದ್ದೇನೆ. ರಾಮಮಂದಿರದ ಕಾರ್ಯ ಯೋಜನೆಗಳು ಮುಂದಿನ ಸಭೆಯಲ್ಲಿ ನಿರ್ಣಯವಾಗಲಿವೆ ಎಂದು ಮಾಹಿತಿ ನೀಡಿದರು.
ಮುಂದಿನ 15 ದಿನಗಳಲ್ಲಿ ಮೊದಲ ಸಭೆ ನಡೆಯಬಹುದು ಎಂದು ಹೇಳಿದರು. ಟ್ರಸ್ಟಿ ಆಗಲು ಅವಕಾಶ ದೊರೆತರೆ ಒಪ್ಪಿಕೊಳ್ಳುವಂತೆ ಗುರುಗಳು ಸೂಚಿಸಿದ್ದರು. ಗುರುಗಳ ಜೊತೆ ಹೋರಾಟದಲ್ಲೂ ಭಾಗಿಯಾಗಿದ್ದೆ ಎಂದು ನೆನಪಿಸಿಕೊಂಡರು. ಉತ್ತರ ಭಾರತದ ಅನೇಕ ಸಭೆಯಲ್ಲಿ ಭಾಗಿಯಾಗಿದ್ದೆ. ರಾಮಮಂದಿರ ಭವ್ಯವಾಗಿ ನಿರ್ಮಾಣವಾಗಬೇಕು. ಜಗತ್ತಿನ ಗಮನ ಸೆಳೆಯುವ ಮಂದಿರವಾಗಬೇಕು. ಯಾತ್ರಿಗಳಿಗೆ ಅನುಕೂಲ ಕಲ್ಪಿಸುವ ವ್ಯವಸ್ಥೆ ಮಾಡಬೇಕು ಎಂಬುದು ನನ್ನ ವ್ಯಕ್ತಿಗತ ಅಭಿಪ್ರಾಯ ಎಂದರು.

ಎಲ್ಲಾ ಸದಸ್ಯರ ತೀರ್ಮಾನದಂತೆ ಕಾರ್ಯಯೋಜನೆ ರೂಪುಗೊಳ್ಳಲಿದೆ. ಪೇಜಾವರ ಮಠದ ಶಾಖೆ ಅಯೋಧ್ಯೆಯಲ್ಲಿದೆ. ದೊಡ್ಡ ಶಾಖಾ ಮಠ ತೆರೆಯುವ ಯೋಜನೆ ಇದೆ. ಹನುಮಂತದೇವರು ಅವತರಿಸಿದ ಕ್ಷೇತ್ರ ಕರ್ನಾಟಕ. ಮಧ್ವಾಚಾರ್ಯರು ಹನುಮಂತನ ಅವತಾರ. ಇದು ಆಂಜನೇಯ ಸೇವೆಗೆ ಸಿಕ್ಕ ಗೌರವ ಎಂದು ಭಾವಿಸುತ್ತೇನೆ ಎಂದಿದ್ದಾರೆ.












Click it and Unblock the Notifications