ಶ್ರೀಲಂಕಾದಲ್ಲಿ ಸಾವನ್ನಪ್ಪಿದ ಆ ಐವರು ನಮ್ಮ ಪಕ್ಷದ ಶಕ್ತಿಗಳು:ಸಿಎಂ
ಉಡುಪಿ ಏಪ್ರಿಲ್ 23:ಉಡುಪಿಯ ಕಾಪುವಿನಲ್ಲಿ ಆಯುರ್ವೇದಿಕ್ ಚಿಕಿತ್ಸಾಲಯದಲ್ಲಿ ಪಂಚಕರ್ಮ ಚಿಕಿತ್ಸೆಯನ್ನು ಎರಡೇ ದಿನಕ್ಕೆ ಮೊಟಕುಗೊಳಿಸಿದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿಗೆ ವಾಪಾಸ್ ತೆರಳಿದ್ದಾರೆ.
ಈ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಲಂಕಾ ಸರಣಿ ಬಾಂಬ್ ಬ್ಲ್ಯಾಸ್ಟ್ ಪ್ರಕರಣ ಅತ್ಯಂತ ಮೃಗೀಯ ಘಟನೆ. ಈ ಸ್ಫೋಟ ಪ್ರಕರಣದಲ್ಲಿ ನನ್ನ ಪಕ್ಷದ ಐದು ಜನ ನಾಯಕರು ಮೃತಪಟ್ಟಿದ್ದಾರೆ. ಇವರು ಪಕ್ಷದ ಆಧಾರ ಸ್ತಂಭಗಳು ಆಗಿದ್ದರು ಎಂದು ವಿಷಾದ ವ್ಯಕ್ತಪಡಿಸಿದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಅವರ ಸಾವು ಪಕ್ಷಕ್ಕೆ- ಕುಟುಂಬಕ್ಕೆ ಆಘಾತ ತಂದಿದೆ. ಈ ಬಗ್ಗೆ ಕನಸಿನಲ್ಲೂ ನಾನು ಊಹಿಸಿರಲಿಲ್ಲ. ಅವರೆಲ್ಲಾ ನನ್ನ ಜೊತೆ ಬಹಳ ಆತ್ಮೀಯರಾಗಿದ್ದರು. ಹನುಮಂತರಾಯಪ್ಪ, ರಂಗಣ್ಣ, ಶಿವಣ್ಣ, ಲಕ್ಷ್ಮೀನಾರಾಯಣ, ರಮೇಶ್ ನನ್ನ ಆತ್ಮೀಯರು. ಐವರು ನಮ್ಮ ಪಕ್ಷದ ಶಕ್ತಿಗಳು. ನೆಲಮಂಗಲದಲ್ಲಿ 50% ಶಕ್ತಿ ಕುಸಿತವಾಗಿದೆ. ಪ್ರಾಮಾಣಿಕ , ಸಾಮಾಜಿಕ ಸೇವೆ ಮಾಡುವವರನ್ನು ಕಳೆದುಕೊಂಡಿದ್ದೇವೆ ಎಂದು ಕುಮಾರಸ್ವಾಮಿ ದುಃಖ ವ್ಯಕ್ತಪಡಿಸಿದರು.
ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ 300ಕ್ಕೂ ಹೆಚ್ಚು ಹತ್ಯೆ ಖಂಡನೀಯ, ನೋವಿನ ಘಟನೆ ಎಂದು ಹೇಳಿದ ಕುಮಾರಸ್ವಾಮಿ, ಘಟನೆಯಲ್ಲಿ ದೇಶದ ಇತರ ರಾಜ್ಯದ ಹಲವರ ಸಾವಾಗಿದೆ. ನೊಂದ ಕುಟುಂಬಗಳಿಗೆ ನನ್ನ ಸಂತಾಪವಿದೆ. ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದರು.

ಮಂಜುನಾಥ್ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ
ಈಗಾಗಲೇ ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ಕೊಡಲಾಗಿದೆ. ಶ್ರೀಲಂಕಾ ಸಚಿವಾಲಯ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ಏಳು ಪಾರ್ಥಿವ ಶರೀರ ಗುರುತಿಸಲಾಗಿದೆ. ಮಂಜುನಾಥ್ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ಆಗಾಗ ಕರೆ ಮಾಡಿ ಮಾತನಾಡುತ್ತಿದ್ದೇನೆ. ಮರಣೋತ್ತರ ಪ್ರಕ್ರಿಯೆ ಶೀಘ್ರ ಮುಗಿಸಲು ಮನವಿ ಮಾಡಲಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.

ಖಾಸಗಿ ಏರ್ ಕಾರ್ಗೋಗೆ ವ್ಯವಸ್ಥೆ
24 ಗಂಟೆಯೊಳಗೆ ಶರೀರ ಕಳುಹಿಸಲು ಪ್ರಯತ್ನಿಸುತ್ತೇವೆ. ಕೃಷ್ಣಪ್ಪ, ಶ್ರೀನಿವಾಸ ಮೂರ್ತಿಗೆ ಜವಾಬ್ದಾರಿ ನೀಡಲಾಗಿದೆ. ಖಾಸಗಿ ಏರ್ ಕಾರ್ ಕಾರ್ಗೋಗೆ ವ್ಯವಸ್ಥೆ ಮಾಡಲಾಗಿದೆ. ಬುಧವಾರ ಬೆಳಗ್ಗೆಯೊಳಗೆ ಮೃತದೇಹ ಕರ್ನಾಟಕಕ್ಕೆ ಬರಬೇಕು. ಈ ಬಗ್ಗೆ ನಿರಂತರ ಪ್ರಯತ್ನ ನಡೆಯುತ್ತಿದೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಸ್ಫೋಟ ಪ್ರಕರಣ ನನ್ನನ್ನು ಘಾಸಿಗೊಳಿಸಿದೆ
ಆರೋಗ್ಯ ಸುಧಾರಿಸಿಕೊಳ್ಳಲು ಉಡುಪಿಗೆ ಬಂದಿದ್ದೆ. ಶ್ರೀಲಂಕಾದ ಸ್ಫೋಟ ಪ್ರಕರಣ ನನ್ನನ್ನು ಘಾಸಿಗೊಳಿಸಿದೆ. ನೆನ್ನೆಯಿಂದ ನನಗೆ ಇದೇ ತಲೆಯಲ್ಲಿ ಕಾಡುತ್ತಿದೆ. ನನ್ನ ಆತ್ಮೀಯರು ಮರಣ ಹೊಂದಿದ್ದಾರೆ ಎಂದು ಕುಮಾರಸ್ವಾಮಿ ದುಃಖ ವ್ಯಕ್ತಪಡಿಸಿದರು.

ನನಗೆ ನೋವನ್ನು ತಡೆದುಕೊಳ್ಳಲಾಗುತ್ತಿಲ್ಲ
ಆಯುರ್ವೇದಿಕ್ ಚಿಕಿತ್ಸೆಗೆ ಐದು ದಿನ ಉಳಿದುಕೊಳ್ಳಬೇಕೆಂದಿದ್ದೆ. ಆದರೆ ನೆನ್ನೆಯಿಂದ ನನಗೆ ನೋವನ್ನು ತಡೆದುಕೊಳ್ಳಲಾಗುತ್ತಿಲ್ಲ ಎಂದ ಕುಮಾರಸ್ವಾಮಿ, ವೈದ್ಯರ ಜೊತೆ ಚರ್ಚೆ ಮಾಡಿದ್ದೇನೆ. 27 ರ ನಂತರ ಮತ್ತೆ ಉಡುಪಿಗೆ ಬರಲು ಸೂಚಿಸಿದ್ದಾರೆ.ಚಿಕಿತ್ಸೆ ಮುಂದೂಡಿ ಕರ್ತವ್ಯ ಮಾಡಲು ಹೊರಟಿದ್ದೇನೆ ಎಂದು ಹೇಳಿದರು.












Click it and Unblock the Notifications