ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ ಸಂದರ್ಭ ಇಬ್ಬರು ಶಾಸಕರ ಗೈರು; ಬಿಜೆಪಿ ಭಿನ್ನಮತ ಸ್ಫೋಟ
ಉಡುಪಿ, ಸೆಪ್ಟೆಂಬರ್ 10: ಉಡುಪಿಗೆ ಬಿಜೆಪಿ ರಾಜ್ಯಾಧ್ಯಕ್ಷರ ಭೇಟಿ ಹೊತ್ತಲ್ಲೇ ಜಿಲ್ಲಾ ಬಿಜೆಪಿಯ ಭಿನ್ನಮತ ಸ್ಫೋಟಗೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಉಡುಪಿಗೆ ಆಗಮಿಸಿದ್ದರು. ಈ ಸಂದರ್ಭ ಜಿಲ್ಲಾ ಬಿಜೆಪಿಯಿಂದ ಅದ್ದೂರಿ ಸ್ವಾಗತ ನೀಡಲಾಯಿತು.
ಶೇಷಶಯನ ಸಭಾಭವನದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ನಳೀನ್ ಕುಮಾರ್ ಕಟೀಲ್ ಗೆ ಅಭಿನಂದನಾ ಸಭೆಯೂ ಆಯೋಜನೆಯಾಗಿತ್ತು. ಆದರೆ ಬಿಜೆಪಿ ಕಾರ್ಯಕರ್ತರ ಗಮನ ಸೆಳೆದದ್ದು ಮಾತ್ರ, ಇಬ್ಬರು ಶಾಸಕರ ಗೈರು ಹಾಜರಿ! ಈ ಮೂಲಕ ಜಿಲ್ಲಾ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಬಹಿರಂಗಗೊಂಡಿದೆ. ಮುಖ್ಯವಾಗಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಈ ಸಭೆಗೆ ಗೈರುಹಾಜರಾಗಿದ್ದಾರೆ.
ನಳಿನ್ ಕುಮಾರ್ ಕಟೀಲು ಮತ್ತು ಹಾಲಾಡಿ ಶ್ರೀನಿವಾಸ್ ಶೆಟ್ಟಿ ಬಂಟ ಸಮುದಾಯದವರಾಗಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರು ಸಚಿವ ಸಂಪುಟ ರಚನೆ ಮಾಡುವಾಗ, ಉಡುಪಿ ಜಿಲ್ಲೆಯಿಂದ ಹಾಲಾಡಿ ಶ್ರೀನಿವಾಸ್ ಶೆಟ್ಟರಿಗೆ ಸ್ಥಾನ ಸಿಗುವ ನಿರೀಕ್ಷೆಯನ್ನು ಜಿಲ್ಲಾ ಬಿಜೆಪಿ ಕಾರ್ಯಕರ್ತರು ಮತ್ತು ಬಂಟ ಸಮುದಾಯ ಇರಿಸಿತ್ತು. ಆದರೆ ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿಗೆ ಮಂತ್ರಿ ಸ್ಥಾನ ನೀಡಲಾಗಿತ್ತು. ಇದರಿಂದ ಕುಂದಾಪುರ ಶಾಸಕರು ತೀವ್ರ ಅಸಮಾಧಾನಗೊಂಡಿದ್ದರು, ಮಾತ್ರವಲ್ಲ, ಜಿಲ್ಲೆಯ ಬಂಟ ಸಮುದಾಯ ಕೂಡ ಬಿಜೆಪಿ ಹೈಕಮಾಂಡ್ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿತ್ತು.

ಹೀಗಾಗಿಯೇ ಇವತ್ತು ಕುಂದಾಪುರ ಶಾಸಕರು, ರಾಜ್ಯಾಧ್ಯಕ್ಷರ ಅಭಿನಂದನಾ ಸಭೆಗೆ ಗೈರಾಗಿದ್ದಾರೆ. ಜಿಲ್ಲೆಯ ಇನ್ನೋರ್ವ ಶಾಸಕ ಬೈಂದೂರು ಕ್ಷೇತ್ರದ ಶಾಸಕ ಸುಕುಮಾರ್ ಶೆಟ್ಟಿ ಕೂಡ ಗೈರಾಗುವ ಮೂಲಕ ಅಸಮಾಧಾನವನ್ನು ಹೊರಗೆಡವಿದ್ದಾರೆ. ಸಚಿವ ಸಂಪುಟ ರಚನೆ ಬಳಿಕ ಒಳಗಿಂದೊಳಗೇ ಕುದಿಯುತ್ತಿದ್ದ ಸಚಿವ ಆಕಾಂಕ್ಷಿ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಮತ್ತು ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ತಮ್ಮ ಅಸಮಾಧಾನವನ್ನು ಗೈರು ಹಾಜರಾಗುವ ಮೂಲಕ ಬಹಿರಂಗವಾಗಿಯೇ ಹೊರಹಾಕಿದ್ದಾರೆ.












Click it and Unblock the Notifications