ಉಡುಪಿ-ಚಿಕ್ಕಮಗಳೂರು ಲೋಕಸಭೆ ಚುನಾವಣೆ ಫಲಿತಾಂಶ: ಗೆಲುವು ಯಾರಿಗೆ ..?
ಉಡುಪಿ, ಮೇ 30: ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದ್ದು, ದೇಶದಲ್ಲಿ ಏಳು ಹಂತದ ಮತದಾನದ ಬಳಿಕ ಜೂನ್ 04ರಂದು ಫಲಿತಾಂಶ ಹೊರ ಬೀಳಲಿದೆ. ಅಭ್ಯರ್ಥಿಗಳ ಎದೆಯಲ್ಲಿ ಢವ ಢವ ಶುರುವಾಗಿದ್ದು, ಈ ಬಾರಿ ದೇಶದ ಅಧಿಕಾರದ ಚುಕ್ಕಾಣಿಯನ್ನು ಯಾರು ಹಿಡಿಯಲಿದ್ದಾರೆ ಎನ್ನುವ ಕುತೂಹಲ ಜನರಿಗೆ. ಹಾಗೆಯೇ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಯಾರ ಪಾಲಾಗಲಿಗೆ ಎನ್ನುವ ಕುತೂಹಲ ಹೆಚ್ಚಾಗಿದೆ.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಉಡುಪಿ ಜಿಲ್ಲೆಯ ಕಾಪು, ಕಾರ್ಕಳ, ಕುಂದಾಪುರ, ಉಡುಪಿ ವಿಧಾನಸಭೆ ಕ್ಷೇತ್ರ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ತರೀಕೆರೆ ಹಾಗೂ ಚಿಕ್ಕಮಗಳೂರು ವಿಧಾನಸಭೆ ಕ್ಷೇತ್ರಗಳನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಒಳಗೊಂಡಿದೆ.

ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಒಟ್ಟು 9,63,738 ಮತದಾರರಿದ್ದು, 4,75, 419 ಪುರುಷ ಮತದಾರರು ಹಾಗೂ 4,88,284 ಮಹಿಳಾ ಮತದಾರರಿದ್ದಾರೆ. ಸದ್ಯ ಬಿಜೆಪಿ ಭದ್ರಕೋಟೆಯಾಗಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಈ ಬಾರಿ ಯಾರ ಪಾಲಾಗಲಿದೆ ಎನ್ನುವ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಯಾರೇ ಗೆದ್ದರೂ ಅದು ಕನಿಷ್ಠ ಅಂತರದ ಗೆಲುವು
ಬಿಜೆಪಿಯಿಂದ ಕೋಟ ಶ್ರೀನಿವಾಸ ಪೂಜಾರಿ ಕಣದಲ್ಲಿದ್ದರೆ, ಕಾಂಗ್ರೆಸ್ನಿಂದ ಕ್ಷೇತ್ರದ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಸ್ಪರ್ಧೆಯಲ್ಲಿದ್ದಾರೆ. ಎರಡೂ ಪಕ್ಷದಿಂದಲೂ ಸರಳ ಹಾಗೂ ಜನ ಪರ ನಾಯಕ ಎನಿಸಿಕೊಂಡವರು ಕಣದಲ್ಲಿರುವುದರಿಂದ ಎರಡೂ ಪಕ್ಷಗಳಿಗೂ ಗೆಲುವು ಸುಲಭದ ಹಾದಿಯಾಗಿಲ್ಲ.

ಕ್ಷೇತ್ರ ವ್ಯಾಪ್ತಿಯಲ್ಲಿ ಎರಡು ಜಿಲ್ಲೆ ಬರುವುದರಿಂದ ಉಡುಪಿಯಲ್ಲಿ ನಾಲ್ವರು ಬಿಜೆಪಿ ಶಾಸಕರು ಹಾಗೂ ಚಿಕ್ಕಮಗಳೂರಿನ ನಾಲ್ಕೂ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಇರುವುದರಿಂದ ಭಿನ್ನ ರೀತಿಯಲ್ಲಿ ಚುನಾವಣೆಯನ್ನು ವಿಶ್ಲೇಷಿಸಲಾಗುತ್ತಿದೆ.
ಇಬ್ಬರು ಅಭ್ಯರ್ಥಿಗಳಲ್ಲಿ ಯಾರೇ ಗೆದ್ದರೂ ಅತ್ಯಂತ ಸಣ್ಣ ಮಾರ್ಜಿನ್ನಲ್ಲಿ ಗೆಲ್ಲಬಹುದು. ದಾಖಲೆಯ ಗೆಲುವು ಅಥವಾ ದೊಡ್ಡ ಅಂತರದ ಗೆಲವು ಸಿಗುವುದು ಕಷ್ಟವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಪಕ್ಷದ ಅಭ್ಯರ್ಥಿಗೆ ಲೀಡ್ ಬಂದರೆ, ಇನ್ನೊಂದು ಪಕ್ಷದ ಅಭ್ಯರ್ಥಿ ತೀವ್ರ ಹೋರಾಟ ನೀಡಲಿದ್ದಾರೆ. ಹಾಗೆಯೇ ಚಿಕ್ಕಮಗಳೂರಿನಲ್ಲಿ ತೀವ್ರ ಪೈಪೋಟಿ ನೀಡಿದ ಪಕ್ಷದ ಅಭ್ಯರ್ಥಿಗೆ ಉಡುಪಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ ಲೀಡ್ ಬರುವ ಸಾಧ್ಯತೆಯಿದೆ ಹಾಗೂ ಇನ್ನೊಂದು ಪಕ್ಷದ ಅಭ್ಯರ್ಥಿ ಇಲ್ಲಿ ಪ್ರಬಲ ಹೋರಾಟ ನೀಡಲಿದ್ದಾರೆ. ಹೀಗಾಗಿ ಯಾರೇ ಗೆದ್ದರೂ ಅದು ಕನಿಷ್ಠ ಅಂತರದ ಗೆಲುವಾಗಲಿದೆ.

ಉಡುಪಿ-ಚಿಕ್ಕಮಗಳೂರು ಬಿಜೆಪಿ ಭದ್ರಕೋಟೆ
ಸದ್ಯ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಬಿಜೆಪಿ ಭದ್ರಕೋಟೆಯಾಗಿದೆ. ಕಳೆದ ಹಲವು ವರ್ಷಗಳಿಂದ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳೇ ಸಂಸದರಾಗಿ ಆಯ್ಕೆಯಾಗುತ್ತಿದ್ದು ಈ ಬಾರಿಯೂ ತಮ್ಮ ಪಕ್ಷದ ಅಭ್ಯರ್ಥಿಯು ಗೆಲುವು ಸಾಧಿಸಲಿದ್ದಾರೆ ಎನ್ನುವುದು ಬಿಜೆಪಿ ಮುಖಂಡರ ಲೆಕ್ಕಾಚಾರ. ಕೋಟ ಶ್ರೀನಿವಾಸ ಪೂಜಾರಿ ಸರಳ ರಾಜಕಾರಣಿ ಎನಿಸಿಕೊಂಡಿದ್ದು, ಜನರ ಕಷ್ಟ ಸುಖಗಳನ್ನು ಅರಿತು ಸಹಾಯ ಮಾಡುವ ಜನನಾಯಕ ಎನಿಸಿಕೊಂಡಿದ್ದಾರೆ. ಉಡುಪಿ-ಚಿಕ್ಕಮಗಳೂರಿನಲ್ಲಿ ಹಿಂದುತ್ವ ಹಾಗೂ ಜಾತಿ ಲೆಕ್ಕಾಚಾರದಿಂದಲೂ ಬಿಜೆಪಿ ಗೆಲುವು ಸಾಧಿಸುವ ಸಾಧ್ಯತೆ ಇದೆ.
ಕಾಂಗ್ರೆಸ್ ಅಭ್ಯರ್ಥಿ ವೈಯಕ್ತಿಕ ವರ್ಚಸ್ಸು
ಕಳೆದ ಎರಡು ಅವಧಿಗಳಲ್ಲಿ ಮೋದಿ ಅಲೆಯಿಂದ ರಾಜ್ಯದ ಬಿಜೆಪಿ ನಾಯಕರಿಗೆ ಗೆಲುವು ಸುಲಭ ಮಾರ್ಗವಾಗಿತ್ತು. ಆದರೆ ಈ ಬಾರಿ ರಾಜ್ಯದಲ್ಲೂ ಬಿಜೆಪಿ ಸೋತಿರುವುದರಿಂದ ಗೆಲುವಿಗೆ ಹರಸಾಹಸ ಪಡಬೇಕಾಗಿದೆ. ಇನ್ನು ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವೈಯಕ್ತಿಕ ವರ್ಚಸ್ಸು ಈ ಬಾರಿಯ ಚುನಾವಣೆಯಲ್ಲಿ ಪರಿಣಾಮ ಬೀರಿದೆ. ಅನೇಕ ಬಿಜೆಪಿ ಕಾರ್ಯರ್ತರು ಜಯಪ್ರಕಾಶ್ ಹೆಗ್ಡೆ ಪರವಾಗಿ ಚುನಾವಣಾ ಪ್ರಚಾರ ನಡೆಸಿದ್ದರು.
ಜಯಪ್ರಕಾಶ್ ಹೆಗ್ಡೆ ಕರಾವಳಿ ಭಾಗದಲ್ಲಿ ಜನ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ಸ್ಥಳೀಯ ಅಧಿಕಾರಿಗಳ ಮೇಲೆ ಹಿಡಿತ ಇಟ್ಟುಕೊಂಡಿದ್ದಾರೆ. ಹೀಗಾಗಿ ತಮ್ಮ ವೈಯಕ್ತಿಕ ವರ್ಚಸ್ಸು ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ಛಾಪಿನ ಮೇಲೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುತ್ತದೆ ಎನ್ನುವುದು ಕೆಲವರ ಲೆಕ್ಕಾಚಾರವಾಗಿದೆ.
ರಾಜಕೀಯ ಮುಖಂಡರ, ನಾಯಕರ, ಕಾರ್ಯಕರ್ತರ, ವಿಶ್ಲೇಷಕರ ಲೆಕ್ಕಚಾರ ಏನೇ ಇದ್ದರೂ ಮತದಾರರ ನಿರ್ಣಯವೇ ಅಂತಿಮ. ಹೀಗಾಗಿ ಜೂನ್ 4ರಂದೇ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಯಾರು ಎನ್ನುವ ಪ್ರಶ್ನೆಗೆ ಉತ್ತರ ಸಿಗಲಿದೆ.












Click it and Unblock the Notifications